ಡಿಬಿಟಿ ಚಮತ್ಕಾರ; 8 ವರ್ಷದಲ್ಲಿ ಸರ್ಕಾರಕ್ಕೆ 3 ಲಕ್ಷ ಕೋಟಿ ರೂ ಹಣ ಉಳಿತಾಯ: ನಿರ್ಮಲಾ ಸೀತಾರಾಮನ್

Nirmala Sitharaman speaks at Wharton business school: ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್​ಫರ್ (ಡಿಬಿಟಿ) ಸ್ಕೀಮ್ ಮೂಲಕ ಕೇಂದ್ರ ಸರ್ಕಾರ 8 ವರ್ಷದಲ್ಲಿ 37 ಲಕ್ಷ ಕೋಟಿ ರೂ ಮೊತ್ತದ ಹಣವನ್ನು ಯೋಜನೆಗಳ ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡಿದೆ. ಈ ಅವಧಿಯಲ್ಲಿ ಸರ್ಕಾರದ ಬೊಕ್ಕಸಕ್ಕೆ ಶೇ. 10ರಷ್ಟು ಹಣ ಉಳಿತಾಯವಾಗಿದೆ ಎನ್ನುವ ಮಾಹಿತಿಯನ್ನು ನಿರ್ಮಲಾ ಸೀತಾರಾಮನ್ ನೀಡಿದ್ದಾರೆ.

ಡಿಬಿಟಿ ಚಮತ್ಕಾರ; 8 ವರ್ಷದಲ್ಲಿ ಸರ್ಕಾರಕ್ಕೆ 3 ಲಕ್ಷ ಕೋಟಿ ರೂ ಹಣ ಉಳಿತಾಯ: ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್

Updated on: Oct 25, 2024 | 12:36 PM

ನ್ಯೂಯಾರ್ಕ್, ಅಕ್ಟೋಬರ್ 25: ಭಾರತದಲ್ಲಿ ವಿವಿಧ ಇಲಾಖೆಗಳ ಹಲವು ಯೋಜನೆಗಳಲ್ಲಿ ಸರ್ಕಾರವು ಫಲಾನುಭವಿಗಳ ಖಾತೆಗೆ ಡಿಬಿಟಿ ಸ್ಕೀಮ್ ಮೂಲಕ ನೇರವಾಗಿ ಹಣ ವರ್ಗಾವಣೆ ಮಾಡುತ್ತದೆ. ಇದರಿಂದ ಫಲಾನುಭವಿಗಳಿಗೆ ಹಣ ನೇರವಾಗಿ ಸಿಗುತ್ತದೆ. ಸರ್ಕಾರಕ್ಕೆ ಹಣ ಸೋರಿಕೆ ತಪ್ಪುತ್ತದೆ. ಡಿಬಿಟಿ ಮಾರ್ಗಕ್ಕೆ ಬರುವ ಮುನ್ನ ಸರ್ಕಾರದ ಬೊಕ್ಕಸಕ್ಕೆ ಸಾಕಷ್ಟು ಹೊರೆಯಾಗುತ್ತಿತ್ತು. ಈಗ ಅದು ಸಾಕಷ್ಟು ಕಡಿಮೆ ಆಗಿದೆ. ಅಮೆರಿಕಕ್ಕೆ ಏಳು ದಿನ ಪ್ರವಾಸ ಕೈಗೊಂಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಭಾರತದ ಡಿಬಿಟಿ ಸ್ಕೀಮ್ ಯಶಸ್ಸಿನ ಬಗ್ಗೆ ಅಲ್ಲಿನ ಜನರ ಬಳಿ ಮಾಹಿತಿ ಹಂಚಿಕೊಂಡಿದ್ದಾರೆ.

ಕೇಂದ್ರ ಸರ್ಕಾರದ 51 ಇಲಾಖೆಗಳು ಮತ್ತು ಸಚಿವಾಲಯಗಳು ಡಿಬಿಟಿ ವಿಧಾನ ಅಳವಡಿಸಿಕೊಂಡಿವೆ. ಕಳೆದ 8 ವರ್ಷದಲ್ಲಿ ಡಿಬಿಟಿ ಮೂಲಕ 450 ಬಿಲಿಯನ್ ಡಾಲರ್​ಗೂ (37.8 ಲಕ್ಷ ಕೋಟಿ ರೂ) ಹೆಚ್ಚು ಮೊತ್ತದ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ. ಹಾಗೆಯೇ, ಸರ್ಕಾಕ್ಕೆ 40 ಬಿಲಿಯನ್ ಡಾಲರ್ (3.36 ಲಕ್ಷ ಕೋಟಿ ರೂ) ಮೊತ್ತದ ಹಣ ಸೋರಿಕೆ ತಪ್ಪಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. ಅಂದರೆ ಶೇ. 10ರಷ್ಟು ಹಣವನ್ನು ಸರ್ಕಾರ ಉಳಿಸಲು ಸಾಧ್ಯವಾಗಿದೆ.

ಇದನ್ನೂ ಓದಿ: 80 ವರ್ಷ ಮೇಲ್ಪಟ್ಟ ವಯಸ್ಸಿನ ಪಿಂಚಣಿದಾರರಿಗೆ ಹೆಚ್ಚುವರಿ ಭತ್ಯೆ ನೀಡಲಿರುವ ಕೇಂದ್ರ ಸರ್ಕಾರ

ಅಮೆರಿಕದ ಪೆನ್​ಸಿಲ್ವೇನಿಯಾ ಯೂನವರ್ಸಿಟಿಯ ವಾರ್ಟನ್ ಬಿಸಿನೆಸ್ ಸ್ಕೂಲ್​ನಲ್ಲಿ ಆಯೋಜನೆಗೊಂಡ ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ‘ಹಣ ಸೋರಿಕೆ ತಡೆಯುವುದು ಬಹಳ ಮಹತ್ವದ್ದು. ಹಣಕಾಸು ಸಚಿವೆಯಾಗಿ, ತೆರಿಗೆ ಪಾವತಿದಾರರ ಪ್ರತಿಯೊಂದು ಪೈಸೆಯೂ ಸರಿಯಾಗಿ ವಿನಿಯೋಗವಾಗುತ್ತಿದೆಯಾ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕಿತ್ತು. ಹಣ ಸೋರಿಕೆ ಆಗದಂತೆ ನೋಡಿಕೊಳ್ಳುವುದು ಸವಾಲಿನ ಕೆಲಸ,’ ಎಂದು ಹೇಳಿದ್ದಾರೆ.

ಎಲ್ಲಾ ಡಿಜಿಟಲ್, ಎಲ್ಲಾ ಪಕ್ಕಾ..

‘ಭಾರತದಲ್ಲಿ ಡಿಜಿಟಲ್ ಟೆಕ್ನಾಲಜಿ ಅಳವಡಿಸಿಕೊಂಡಿದ್ದರಿಂದ ಹಣ ಸೋರಿಕೆ ಕಡಿಮೆ ಆಗಿದೆ. ವಂಚಕ ವಹಿವಾಟುಗಳು ಮತ್ತು ನಕಲಿ ಖಾತೆದಾರರನ್ನು ದೂರ ಮಾಡಲು ಸಾಧ್ಯವಾಗಿದೆ. ಫಲಾನುಭವಿಗಳಿಗೆ ಸರ್ಕಾರ ಮಾಡುವ ಹಣ ವರ್ಗಾವಣೆ ವಿಚಾರ ಮಾತ್ರವಲ್ಲ, ಕೇಂದ್ರ ಮತ್ತು ರಾಜ್ಯಗಳ ನಡುವಿನ ವಹಿವಾಟುಗಳನ್ನೂ ಡಿಜಿಟಲ್ ಮೂಲಕವೇ ಮಾಡಲಾಗುತ್ತಿದೆ. ಮ್ಯಾನುಯಲ್ ಆಗಿ ವಹಿವಾಟು ನಮೂದಿಸುವ ಅವಶ್ಯಕತೆಯೇ ಇಲ್ಲ. ಎಲ್ಲವೂ ಎಲೆಕ್ಟ್ರಾನಿಕ್ ಟ್ರಾನ್ಸಾಕ್ಷನ್​ಗಳು,’ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಇದನ್ನೂ ಓದಿ: ಬಾಹ್ಯಾಕಾಶ ಕ್ಷೇತ್ರದ ಸ್ಟಾರ್ಟಪ್​ಗಳಿಗೆ ಫಂಡ್ ಮತ್ತು ಎರಡು ರೈಲ್ವೆ ಯೋಜನೆಗಳಿಗೆ ಸಂಪುಟ ಅನುಮೋದನೆ

‘ಡಿಜಿಟಲೀಕರಣದಿಂದಾಗಿ ಭಾರತದಲ್ಲಿ ಪ್ರತಿಯೊಂದು ರುಪಾಯಿಯೂ ವ್ಯರ್ಥವಾಗುವುದಿಲ್ಲ. ರಾಜ್ಯಗಳಿಗೆ ಹಣ ಕಳುಹಿಸಲು ಸಿಂಗಲ್ ಮೋಡಲ್ ಅಕೌಂಟ್ ಸಿಸ್ಟಂ ರಚಿಸಿದ್ದೇವೆ. ಎಲ್ಲವೂ ಇದೇ ಅಕೌಂಟ್​ನಿಂದ ಹೋಗುತ್ತದೆ. ಒಂದು ರಾಜ್ಯದಲ್ಲಿ ಯೋಜನೆ ಆರಂಭಕ್ಕೆ ಸಿದ್ಧವಾಗಿದೆ ಎಂದರೆ ಈ ಖಾತೆಯಿಂದ ಕೂಡಲೇ ರಾಜ್ಯಕ್ಕೆ ಹಣ ವರ್ಗಾವಣೆ ಆಗುತ್ತದೆ,’ ಎಂದು ಹಣಕಾಸು ಸಚಿವೆ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us