Praveen Nettar: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 20 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಿದ NIA

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎನ್​​ಐಎ ಅಧಿಕಾರಿಗಳು ಒಟ್ಟು 20 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ.

Praveen Nettar: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 20 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಿದ NIA
ಪ್ರವೀಣ್ ನೆಟ್ಟಾರು (ಬಲ ಚಿತ್ರ)
Edited By:

Updated on: Jan 20, 2023 | 6:44 PM

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರಕರಣ (Praveen Nettaru Murder Case) ಸಂಬಂಧ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಒಟ್ಟು 20 ಆರೋಪಿಗಳ ವಿರುದ್ಧ ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ (Charge Sheet) ಸಲ್ಲಿಕೆ ಮಾಡಿದ್ದಾರೆ. 240 ಸಾಕ್ಷಿಗಳ ಹೇಳಿಕೆಗಳು ಒಳಗೊಂಡಿರುವ ಒಟ್ಟು 1,500 ಪುಟಗಳ ಚಾರ್ಜ್​ಶೀಟ್ ಅನ್ನು NIA ಅಧಿಕಾರಿಗಳು ಕೋರ್ಟ್​ಗೆ ಸಲ್ಲಿಸಿದ್ದಾರೆ. ಕೊಲೆ ಪ್ರಕರಣ ಸಂಬಂಧ ಈವರೆಗೆ 14 ಆರೋಪಿಗಳನ್ನು ಬಂಧಿಸಿಲಾಗಿದ್ದು, 6 ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಈ ಬಗ್ಗೆ ರಾಷ್ಟ್ರೀಯ ತನಿಖಾ ದಳದಿಂದ ಟಿವಿ9ಗೆ ಅಧಿಕೃತ ಮಾಹಿತಿ ಲಭ್ಯವಾಗಿದೆ.

ಪ್ರಕರಣದ ನಂತರ ತಲೆಮರೆಸಿಕೊಂಡಿದ್ದ ಆರೋಪಿಗಳ ಸುಳಿವು ಪಡೆಯುವ ನಿಟ್ಟಿನಲ್ಲಿ ಎನ್​ಐಎ ಅಧಿಕಾರಿಗಳು ಬಹುಮಾನ ಘೋಷಣೆ ಮಾಡಿದ್ದರು. ಇದೀಗ ಉಳಿದ ಆರೋಪಿಗಳಿಗಾಗಿ ಇಂದು ಮತ್ತೆ ಬಹುಮಾನ ಘೋಷಣೆ ಮಾಡಿದ್ದಾರೆ. ಬಂಟ್ವಾಳ ತಾಲೂಕಿನ ಕೊಡಾಜೆಯ ಷರೀಫ್ ಮತ್ತು ನೆಕ್ಕಿಲಾಡಿಯ ಅಗ್ನಾಡಿ ಹೌಸ್​ನ ಅಬೂಬಕರ್ ಮಗ ಮಸೂದ್ ಕೆ.ಎ ಆರೋಪಿಗಳ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್​ಐಎ ಅಧಿಕಾರಿಗಳು ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ದೊಮ್ಮಲೂರು ಬಳಿ ಇವರು NIAಯ SP ಗೆ ಮಾಹಿತಿ ನೀಡಲು ಮನವಿ ಮಾಡಲಾಗಿದೆ.

ಇದನ್ನೂ ಓದಿ: Praveen Nettar: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಪತ್ತೆಗೆ 10 ಲಕ್ಷ ರೂ. ಬಹುಮಾನ ಘೋಷಿಸಿದ ಎನ್​ಐಎ

ಪ್ರವೀಣ್ ಹತ್ಯೆ ಪ್ರಕರಣದ ಹಿನ್ನಲೆ

ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ಅವರನನ್ನು ಜುಲೈ 26 ರಂದು ಬೆಳ್ಳಾರೆಯಲ್ಲಿರವ ಅವರ ಕೋಳಿ ಅಂಗಡಿ ಬಳಿಯೇ ಹಂತಕರು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಇದು ಇಡೀ ರಾಜ್ಯಾದ್ಯಂತ ಕಾರ್ಯಕರ್ತರಲ್ಲಿ ಕಿಚ್ಚು ಹತ್ತಿಸಿತ್ತು. ಇದರ ಬಿಸಿಗೆ ಬಿಜೆಪಿ ರಾಜ್ಯ ಸರ್ಕಾರದ ಬುಡವೇ ಅಲುಗಾಡಿತ್ತು. ನಂತರ ಸರ್ಕಾರ ಈ ಪ್ರಕರಣವನ್ನು ಎನ್​ಐಎ ತನಿಖಗೆ ವಹಿಸಿತ್ತು.

ಪ್ರವೀಣ್ ಹತ್ಯೆಗೆ ಮೂರು ಬಾರಿ ಸಂಚು

ಪ್ರವೀಣ್ ಹತ್ಯೆಯಾಗಿದ್ದು ಮೂರನೇ ಯತ್ನದಲ್ಲಿ ಎನ್ನಲಾಗುತ್ತಿದೆ. ಪ್ರವೀಣ್ ಕೊಲೆಯಾಗೂ ಮೊದಲು ಎರಡು ಬಾರಿ ಹತ್ಯೆ ಯತ್ನ ನಡೆದಿತ್ತು. ಜು.23 ಮತ್ತು ಜು.24 ರಂದೇ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಜು.23 ರಂದು ಹತ್ಯೆ ಮಾಡಲು ಬೈಕ್​ನಲ್ಲಿ ಬಂದಿದ್ದ ಹಂತಕರು ಅಂಗಡಿ ಬಳಿ ಜನ ನೋಡಿ ವಾಪಾಸ್ ಹೋಗಿದ್ದರು. ಜು.24 ರಂದು ಸಂಜೆ 4.30ಕ್ಕೆ ಕೊಲ್ಲಲು ಸಂಚು ರೂಪಿಸಿದ್ದು, ಅಂದು ಕೂಡ ವಿಫಲವಾಗಿತ್ತು. ಜುಲೈ 26 ರಂದು ಪಕ್ಕಾ ಪ್ಲಾನ್ ಮಾಡಿಕೊಂಡು ಜನರಿಲ್ಲದ ಕಡೆ ಬರುತ್ತಿದ್ದಂತೆ ಪ್ರವೀಣ್ ಮೇಲೆ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:44 pm, Fri, 20 January 23