ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿ ವಕೀಲರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಯುವತಿ

ಚೆಕ್‌ಬೌನ್ಸ್‌ ಪ್ರಕರಣವನ್ನು ಮುಂದುವರಿಸುವುದಾಗಿ ಹೇಳಿದ ವಕೀಲರ ಮೇಲೆ ಯುವತಿಯೊಬ್ಬಳು ನ್ಯಾಯಾಲಯದ ಆವರಣದಲ್ಲೇ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿ ವಕೀಲರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಯುವತಿ
ಹಲ್ಲೆಗೊಳಗಾದ ವಕೀಲ ಕೃಷ್ಣರೆಡ್ಡಿ ಚಿಕಿತ್ಸೆ ಪಡೆಯುತ್ತಿರುವುದು (ಎಡಚಿತ್ರ) ಮತ್ತು ವಕೀಲ ಕೃಷ್ಣರೆಡ್ಡಿ (ಬಲಚಿತ್ರ)
Rakesh Nayak Manchi

Updated on: Apr 21, 2023 | 6:03 PM

ಬೆಂಗಳೂರು: ಚೆಕ್‌ಬೌನ್ಸ್‌ ಪ್ರಕರಣವನ್ನು (Cheque bounce case) ಮುಂದುವರಿಸುವುದಾಗಿ ಹೇಳಿದ ವಕೀಲರ ಮೇಲೆ ಯುವತಿಯೊಬ್ಬಳು ನ್ಯಾಯಾಲಯದ ಆವರಣದಲ್ಲೇ ಚಾಕುವಿನಿಂದ ಹಲ್ಲೆ (Assault) ನಡೆಸಿ ಪರಾರಿಯಾದ ಘಟನೆ ನಗರದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಕಾರ್ಪೊರೇಷನ್‌ ಸರ್ಕಲ್‌ ಬಳಿಯಿರುವ ಮ್ಯಾಜಿಸ್ಟ್ರೇಟ್‌ ಕೋರ್ಟ್‌ಗೆ (Bengaluru Magistrate Court) ಹಾಜರಾದ ಕಾಂಚನ ಎಂಬ ಯುವತಿ ವಕೀಲ ಕೃಷ್ಣಾರೆಡ್ಡಿ ಎಂಬವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾಳೆ. ಘಟನೆ ನಂತರ ಹಲಸೂರು ಗೇಟ್ ಪೊಲೀಸ್ ಠಾಣೆಗೆ ಕೃಷ್ಣಾರೆಡ್ಡಿ ಅವರು ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಹರೀಶ್ ಎಂಬ ವ್ಯಕ್ತಿಯಿಂದ 5 ಲಕ್ಷ ಹಣ ಪಡೆದಿದ್ದ ಕಾಂಚನಾ ವಾಪಸ್ ನೀಡಿರಲಿಲ್ಲ. ಕಳೆದ 3 ವರ್ಷಗಳಿಂದ ಹಣ ವಾಪಸ್ ನೀಡುವುದಾಗಿ ಹೇಳುತ್ತಿದ್ದ ಕಾಂಚನಾ ಚೆಕ್ ಕೂಡ ನೀಡಿದ್ದಳು. ಆದರೆ ಈ ಚೆಕ್​ ಬೌನ್ಸ್ ಆಗಿರುವ ಹಿನ್ನೆಲೆ ದೂರು ಕೂಡ ದಾಖಲಾಗಿತ್ತು. ಈ ಸಂಬಂಧ ಇಂದು ಕೋರ್ಟ್​ಗೆ ಕಾಂಚನಾ ಹಾಜರಾಗಿದ್ದಾಳೆ. ಇತ್ತ ಹರೀಶ್ ಪರ ವಕೀಲರಾಗಿರುವ ಕೃಷ್ಣರೆಡ್ಡಿ ಪ್ರಕರಣವನ್ನು ಮುಂದುವರಿಸುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ತುಮಕೂರು: ದೇವಸ್ಥಾನದ ದಲಿತ ಅರ್ಚಕನ ಮೇಲೆ ಸವರ್ಣೀಯರಿಂದ ಮಾರಣಾಂತಿಕ ಹಲ್ಲೆ

ಪ್ರಕರಣವನ್ನು ಮುಂದುವರಿಸುವುದಾಗಿ ಹೇಳಿದ ಹಿನ್ನೆಲೆ ಕಾಂಚನಾ ಕೋಪಗೊಂಡು ಕೋರ್ಟ್​ ಒಳಗಿಂದ ಹೊರಬಂದಿದ್ದಾಳೆ. ಇತ್ತ ಕಲಾಪ ಮುಗಿಸಿದ ಬಳಿಕ ನ್ಯಾಯಾಲಯದ ಆವರಣಕ್ಕೆ ಬಂದ ಕೃಷ್ಣಾರೆಡ್ಡಿಯನ್ನು ತಡೆದ ಕಾಂಚನಾ, ಮತ್ತೆ ಕೇಸ್‌ ಮುಂದುವರಿಸುತ್ತಿಯಾ ಎಂದು ಹೇಳಿ ಚಾಕುವಿನಿಂದ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾಳೆ. ಘಟನೆಯಲ್ಲಿ ಕೃಷ್ಣರೆಡ್ಡಿ ಮುಖಕ್ಕೆ ಬಾಯಗಳಾಗಿದ್ದು, ಚಿಕಿತ್ಸೆ ಪಡೆದುಕೊಂಡಿದ್ದಾರೆ. ಅಲ್ಲದೆ, ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕ್ರೈಂ ನ್ಯೂಸ್​ಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:03 pm, Fri, 21 April 23

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us