ಜೂನ್‌ನಲ್ಲೇ 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಕರ್ನಾಟಕ ಸರ್ಕಾರವು ಉದ್ಯೋಗಾಂಕ್ಷಿಗಳಿಗೆ ಮಹತ್ವದ ಕೊಡುಗೆ ನೀಡಿದೆ. ಜೂನ್ ತಿಂಗಳಿನಲ್ಲಿ 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಕಕ್ಕೆ ಆದೇಶ ಹೊರಡಿಸಿದೆ. ಬೋಧಕರ ಕೊರತೆ ನೀಗಿಸಲು ಈ ಕ್ರಮ ಕೈಗೊಳ್ಳಲಾಗಿದ್ದು, 40 ಸಾವಿರ ಪ್ರಾಥಮಿಕ ಹಾಗೂ 11 ಸಾವಿರ ಪ್ರೌಢಶಾಲೆ ಶಿಕ್ಷಕರನ್ನು ನೇಮಕ ಮಾಡಲಾಗುತ್ತಿದೆ.

ಜೂನ್‌ನಲ್ಲೇ 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ
ಸಚಿವ ಮಧು ಬಂಗಾರಪ್ಪ
Image Credit source: tv9 kannada

Updated on: May 23, 2026 | 6:02 PM

ಬೆಂಗಳೂರು, ಮೇ 23: 2026-27ನೇ ಶೈಕ್ಷಣಿಕ ವರ್ಷದ ಆರಂಭದಲ್ಲೇ ರಾಜ್ಯ ಸರ್ಕಾರವು ಉದ್ಯೋಗಾಂಕ್ಷಿಗಳಿಗೆ ಬಿಗ್ ಗಿಫ್ಟ್ ನೀಡಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಜೂನ್ ತಿಂಗಳಿನಲ್ಲೇ 51 ಸಾವಿರ ಅತಿಥಿ ಶಿಕ್ಷಕರನ್ನು (Guest Teachers) ನೇಮಕ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಶಾಲೆಗಳಲ್ಲಿನ ಬೋಧಕರ ಕೊರತೆಯಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದು ಎಂಬ ಹಿತದೃಷ್ಟಿಯಿಂದ, ಬರೋಬ್ಬರಿ 51 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಮುಖ್ಯಾಂಶಗಳು

  • ಸರ್ಕಾರಿ ಶಾಲೆಗಳಿಗೆ 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ
  • ಜೂನ್​ 1ರಂದು 1000 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳ ಉದ್ಘಾಟನೆ
  • ಕರ್ನಾಟಕದ KPS ಮಾದರಿ: ಇತರ ರಾಜ್ಯಗಳಿಗೆ ಪ್ರೇರಣೆ ಮತ್ತು ಅನುದಾನ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮೇ 22ರಂದು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಖಾಲಿ ಇರುವ ಹುದ್ದೆಗಳಿಗೆ ತಕ್ಷಣವೇ ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳಲು ಹಸಿರು ನಿಶಾನೆ ತೋರಿಸಿದೆ. ಮಂಜೂರಾಗಿರುವ ಒಟ್ಟು 51 ಸಾವಿರ ಹುದ್ದೆಗಳಲ್ಲಿ ಪ್ರಾಥಮಿಕ ಶಾಲೆಗಳಿಗೆ ಸಿಂಹಪಾಲು ಸಿಕ್ಕಿದೆ. ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 40 ಸಾವಿರ ಶಿಕ್ಷಕರು ಮತ್ತು ಸರ್ಕಾರಿ ಪ್ರೌಢಶಾಲೆಗಳಿಗೆ 11 ಸಾವಿರ ಶಿಕ್ಷಕರು ನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ.

1000 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳ ಉದ್ಘಾಟಣೆ

ಇನ್ನು ಜೂನ್ 1 ರಂದು ಶಿವಮೊಗ್ಗದಲ್ಲಿ ಹಮ್ಮಿಕೊಳ್ಳಲಾಗಿರುವ ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಮಹತ್ವದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ರಾಜ್ಯಾದ್ಯಂತ ಒಟ್ಟು 1,000 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳನ್ನು ಆರಂಭಿಸಲಾಗುತ್ತಿದ್ದು, ಇವುಗಳಲ್ಲಿ ಶಿವಮೊಗ್ಗ ಜಿಲ್ಲೆಯ 19 ಶಾಲೆಗಳು ಸೇರಿವೆ. ಪ್ರತಿ ಕೆಪಿಎಸ್ ಸಂಸ್ಥೆಯ ಅಭಿವೃದ್ಧಿಗೆ ತಲಾ 3.5 ಕೋಟಿ ರೂಪಾಯಿ ಅನುದಾನವನ್ನು ಮೀಸಲಿಡಲಾಗುವುದು ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ: ಶಿಕ್ಷಣ ಇಲಾಖೆಯಲ್ಲಿ ಸರ್ಜರಿ: 5 ವರ್ಷ ಮೇಲ್ಪಟ್ಟ ನೌಕರರಿಗೆ ಕಡ್ಡಾಯ ವರ್ಗಾವಣೆ; ಡೆಡ್‌ಲೈನ್ ಸಹ ಫಿಕ್ಸ್!

ಕರ್ನಾಟಕದ ಈ ಮಾದರಿಯನ್ನು ಈಗ ತೆಲಂಗಾಣ ಸೇರಿದಂತೆ ಇತರ ರಾಜ್ಯಗಳೂ ಅನುಕರಿಸುತ್ತಿದ್ದು, ಅಲ್ಲಿ ತೆಲಂಗಾಣ ಪಬ್ಲಿಕ್ ಸ್ಕೂಲ್ ಸ್ಥಾಪಿಸುವುದಾಗಿ ಘೋಷಿಸಲಾಗಿದೆ. ಇತ್ತೀಚೆಗಷ್ಟೇ ತೆಲಂಗಾಣ ಶಿಕ್ಷಣ ಇಲಾಖೆಯ ಅಧಿಕಾರಿಗಳು ಬೆಂಗಳೂರಿಗೆ ಭೇಟಿ ನೀಡಿ ನಮ್ಮ ಕೆಪಿಎಸ್ ಮಾದರಿಯನ್ನು ಅಧ್ಯಯನ ಮಾಡಿದ್ದಾರೆ ಎಂದರು.

ಶಿಕ್ಷಣ ಸುದ್ದಿಗಳನ್ನು ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:45 pm, Sat, 23 May 26

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us