ಪಠ್ಯ ಪರಿಷ್ಕರಣೆಗೆ ತಾತ್ಕಾಲಿಕ ಸಮಿತಿ ರಚನೆ: ಲೋಪದೋಷ ಸರಿಪಡಿಸುವಂತ ಸಿಎಂ ಸಿದ್ದರಾಮಯ್ಯ ಸೂಚನೆ

|

Updated on: Jun 07, 2023 | 10:25 AM

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿ, ಆಕ್ಷೇಪ ಕೇಳಿಬಂದಿರುವ ಅಧ್ಯಾಯಗಳನ್ನು ಕೈಬಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಪಠ್ಯ ಪರಿಷ್ಕರಣೆಗೆ ತಾತ್ಕಾಲಿಕ ಸಮಿತಿ ರಚನೆ: ಲೋಪದೋಷ ಸರಿಪಡಿಸುವಂತ ಸಿಎಂ ಸಿದ್ದರಾಮಯ್ಯ ಸೂಚನೆ
ಡಿಕೆ ಶಿವಕುಮಾರ್​, ಸಿದ್ದರಾಮಯ್ಯ
Follow us on

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಶಾಲಾ ಪಠ್ಯ ಪರಿಷ್ಕರಣೆಗೆ(School textbook revise) ಮುಂದಾಗಿದೆ. ಈ ಬಗ್ಗೆ ಬರಗೂರು ರಾಮಚಂದ್ರಪ್ಪ ‌ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆ ಮಾಡಲಾಗಿದ್ದು, ಶಾಲಾ ಪಠ್ಯದಲ್ಲಿ ಲೋಪದೋಷಗಳನ್ನು ಸರಿಪಡಿಸುವಂತ ಸಿಎಂ ಸಿದ್ದರಾಮಯ್ಯ(Siddaramaiah) ಸೂಚನೆ ನೀಡಿದ್ದಾರೆ. ಶಿಕ್ಷಣ ತಜ್ಞ ನಿರಂಜನ ಆರಾಧ್ಯ, ಬರಗೂರು ರಾಮಚಂದ್ರಪ್ಪ ಸೇರಿದಂತೆ ಸಾಹಿತಿಗಳ ಜೊತೆ ಚರ್ಚೆ ಮಾಡಿರುವ ಸಿದ್ದರಾಮಯ್ಯ, ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪಠ್ಯ ಪರಿಷ್ಕರಣೆ ಲೋಪದೋಷಗಳು ಸರಿಪಡಿಸುವಂತೆ ಸಮಿತಿಗೆ ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ನೇತೃತ್ವದಲ್ಲಿ ಪಠ್ಯ ಪರಿಷ್ಕರಣೆ ಖಚಿತ: ಮಧು ಬಂಗಾರಪ್ಪ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಂಗಳವಾರ ನಗರದ ಶಕ್ತಿ ಭವನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, 2017ನೇ ಸಾಲಿನ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಮುಖ್ಯಸ್ಥರಾಗಿದ್ದ ಸಾಹಿತಿ ಬರಗೂರು ರಾಮಚಂದ್ರಪ್ಪ, ಶಿಕ್ಷಣ ತಜ್ಞ ನಿರಂಜನಾರಾಧ್ಯ ಸೇರಿದಂತೆ ವಿವಿಧ ಶಿಕ್ಷಣ ತಜ್ಞರು ಹಾಗೂ ಸಾಹಿತಿಗಳು, ಅಧಿಕಾರಿಗಳ ಸಭೆ ನಡೆಸಲಾಯಿತು. . ಸಭೆಯಲ್ಲಿ ಈ ಸಾಲಿನ ಮಟ್ಟಿಗೆ ವಿವಾದಿತ ಹಾಗೂ ಆಕ್ಷೇಪಣೆಗಳಿರುವ ಪಠ್ಯಗಳನ್ನು ಬೋಧನೆ, ಪರೀಕ್ಷೆ ಮತ್ತು ಮೌಲ್ಯಮಾಪನ ಪ್ರಕ್ರಿಯೆಯಿಂದ ಕೈಬಿಡಲು ತೀರ್ಮಾನಿಸಲಾಗಿದೆ.

ಯಾವ ಯಾವ ಪಾಠಗಳನ್ನು ಕೈಬಿಡಬೇಕು? ಪಾಠಗಳಲ್ಲಿ ಕೆಲ ಪದ ಬಳಿಕೆ ಎಲ್ಲಿಲ್ಲಿ ಸೇರಿಸಲಾಗಿದೆ? ಅದನ್ನ ಗುರುತಿಸುವಂತೆ ಸಿದ್ದರಾಮಯ್ಯ ಅವರು ಸಮಿತಿಗೆ ಸೂಚನೆ ನೀಡಿದ್ದು, ಇನ್ನೊಂದು ವಾರದಲ್ಲಿ ಪಠ್ಯ ಪರಿಷ್ಕರಣೆ ಲೋಪದೋಷ ಸಂಬಂಧ ವರದಿ ನೀಡುವಂತೆ ತಿಳಿಸಿದ್ದಾರೆ.

ಈ ಶೈಕ್ಷಣಿಕ ವರ್ಷದಲ್ಲಿ ಹೊಸ ಪಾಠಗಳ ಸೇರ್ಪಡೆ ಇಲ್ಲ. ಕಳೆದ ವರ್ಷ ಸೇರಿಸಲಾಗಿದ್ದ ಪಾಠಗಳಿಗೆ ಕತ್ತರಿ ಬೀಳುವ ಸಾಧ್ಯತೆ. ಆರ್.ಎಸ್ ಎಸ್ ಸಂಸ್ಥಾಪಕ ಕೇಶವ ಬಲಿರಾಮ್‌ ಹೆಡಗೇವಾರ್‌, ಮತ್ತು ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಪಾಠಕ್ಕೆ ಕತ್ತರಿ ಬೀಳುವ ಸಾಧ್ಯತೆ ಎಂದು ತಿಳಿದುಬಂದಿದೆ. ಆದರೆ, 2023-24ನೇ ಶೈಕ್ಷಣಿಕ ಸಾಲಿಗೆ ಈಗಾಗಲೇ ಬಹುತೇಕ ಪೂರ್ಣ ಪ್ರಮಾಣದಲ್ಲಿ ಪಠ್ಯಪುಸ್ತಕಗಳು ಮುದ್ರಣವಾಗಿ ಶಾಲೆಗಳನ್ನು ತಲುಪಿರುವ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯ ಮುದ್ರಿಸುವ ಪ್ರಕ್ರಿಯೆಗೆ ಕೈಹಾಕುವುದಿಲ್ಲ.

ಬದಲಾಗಿ, ವಿತರಿಸಲಾಗಿರುವ ಪಠ್ಯದಲ್ಲಿ ವಿವಾದಿತ ಹಾಗೂ ಆಕ್ಷೇಪಣೆ ಕೇಳಿಬಂದಿರುವ ಪಾಠಗಳನ್ನು ಪಟ್ಟಿಮಾಡಿ, ಅವುಗಳನ್ನು ಮಕ್ಕಳಿಗೆ ಬೋಧನೆ ಮಾಡದಂತೆ ಶಾಲೆಗಳಿಗೆ ಸುತ್ತೋಲೆ ಹೊರಡಿಸುವ ಸಾಧ್ಯತೆಗಳಿವೆ. ಈ ವಿಚಾರವನ್ನು ಮುಂದಿನ ಸಚಿವ ಸಂಪುಟದಲ್ಲಿ ಮತ್ತೊಮ್ಮೆ ಚರ್ಚಿಸಿ ಅನಂತರ ಅಧಿಕೃತವಾಗಿ ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.

ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:19 am, Wed, 7 June 23