AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vidyasiri Scholarship 2026: ವಿದ್ಯಾಸಿರಿ ಸ್ಕಾಲರ್‌ಶಿಪ್​​​​; ತಿಂಗಳಿಗೆ 1,500ರೂ. ಆರ್ಥಿಕ ನೆರವು, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಪೂರ್ಣ ಮಾಹಿತಿ!

ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು (BCWD) 2026-27ನೇ ಸಾಲಿನ 'ವಿದ್ಯಾಸಿರಿ' ಸ್ಕಾಲರ್‌ಶಿಪ್‌ಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಆಹಾರ ಮತ್ತು ವಸತಿ ವೆಚ್ಚಕ್ಕಾಗಿ ತಿಂಗಳಿಗೆ 1,500 ರೂ. ಆರ್ಥಿಕ ನೆರವು ಸಿಗಲಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಕೊನೆಯ ಕ್ಷಣದ ತಾಂತ್ರಿಕ ತೊಂದರೆಗಳನ್ನು ತಪ್ಪಿಸಲು ಕೂಡಲೇ ಅರ್ಜಿ ಸಲ್ಲಿಸಿ.

Vidyasiri Scholarship 2026: ವಿದ್ಯಾಸಿರಿ ಸ್ಕಾಲರ್‌ಶಿಪ್​​​​; ತಿಂಗಳಿಗೆ 1,500ರೂ. ಆರ್ಥಿಕ ನೆರವು, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಪೂರ್ಣ ಮಾಹಿತಿ!
ವಿದ್ಯಾಸಿರಿ ಸ್ಕಾಲರ್‌ಶಿಪ್
ಅಕ್ಷತಾ ವರ್ಕಾಡಿ
|

Updated on: Aug 04, 2026 | 2:08 PM

Share

ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು (BCWD) ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಬೆಂಬಲ ನೀಡಲು ‘ವಿದ್ಯಾಸಿರಿ ಸ್ಕಾಲರ್‌ಶಿಪ್ 2026-27′ ಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಸ್ವಂತ ಅಥವಾ ಖಾಸಗಿ ವಸತಿಯಲ್ಲಿದ್ದುಕೊಂಡು ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಆಹಾರ ಮತ್ತು ವಸತಿ ವೆಚ್ಚವನ್ನು ಭರಿಸಲು ಸರ್ಕಾರವು ತಿಂಗಳಿಗೆ 1,500 ರೂ. ಗಳಂತೆ (ಗರಿಷ್ಠ 10 ತಿಂಗಳಿಗೆ ಒಟ್ಟು ₹15,000) ಆರ್ಥಿಕ ಸಹಾಯಧನವನ್ನು ನೀಡುತ್ತದೆ. ಈ ಹಣವನ್ನು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ.

ಯೋಜನೆಗೆ ಯಾರು ಅರ್ಹರು?

ಈ ಯೋಜನೆಯಡಿ ಸೌಲಭ್ಯ ಪಡೆಯಲು ವಿದ್ಯಾರ್ಥಿಗಳು ಮೂಲತಃ ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು. ಅಲ್ಲದೆ ಹಿಂದುಳಿದ ವರ್ಗಗಳಾದ ಪ್ರವರ್ಗ-1, 2A, 2B, 3A, ಹಾಗೂ 3B (OBC) ಗೆ ಸೇರಿದವರಾಗಿರಬೇಕು. ಪಿಯುಸಿ (PUC), ಐಟಿಐ (ITI), ಡಿಪ್ಲೊಮಾ, ಪದವಿ (UG), ಸ್ನಾತಕೋತ್ತರ ಪದವಿ (PG) ಹಾಗೂ ಇತರ ಪೋಸ್ಟ್-ಮೆಟ್ರಿಕ್ ಕೋರ್ಸ್‌ಗಳಲ್ಲಿ ಸರ್ಕಾರಿ, ಅನುದಾನಿತ ಅಥವಾ ಮಾನ್ಯತೆ ಪಡೆದ ಖಾಸಗಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಆರ್ಥಿಕ ನೆರವಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಆದರೆ, ಸರ್ಕಾರಿ ಅಥವಾ ಇಲಾಖೆಯ ವಸತಿನಿಲಯಗಳಲ್ಲಿ (ಹಾಸ್ಟೆಲ್) ವಾಸಕ್ಕೆ ಸ್ಥಳಾವಕಾಶ ಪಡೆದ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಾಗಿರುವುದಿಲ್ಲ.

ಇದನ್ನೂ ಓದಿ: ಜಾಬ್ ಇಂಟರ್‌ವ್ಯೂಗೆ ಹೋಗುವ ಮುನ್ನ ಈ ತಪ್ಪು ಮಾಡಬೇಡಿ; ಸಿಂಪಲ್​ ಟಿಪ್ಸ್​ ಇಲ್ಲಿದೆ

ಅಗತ್ಯವಿರುವ ಪ್ರಮುಖ ದಾಖಲೆಗಳು:

ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ತಮ್ಮ ಬಳಿ ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ ಹಾಗೂ ಚಾಲ್ತಿಯಲ್ಲಿರುವ ಆದಾಯ ಪ್ರಮಾಣಪತ್ರಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ಇದರ ಜೊತೆಗೆ ಅರ್ಹತಾ ಪರೀಕ್ಷೆಯ ಹಿಂದಿನ ವರ್ಷದ ಅಂಕಪಟ್ಟಿ, ಪ್ರಸಕ್ತ ಸಾಲಿನ ಕಾಲೇಜು ಪ್ರವೇಶ ದೃಢೀಕರಣ ಪತ್ರ ಅಥವಾ ಐಡಿ ಕಾರ್ಡ್, ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಆಗಿರುವ ಸಕ್ರಿಯ ಬ್ಯಾಂಕ್ ಪಾಸ್‌ಬುಕ್ ಪ್ರತಿ, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆಯನ್ನು ಸಿದ್ಧವಾಗಿಟ್ಟುಕೊಳ್ಳಬೇಕಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ ಮತ್ತು ಕೊನೆಯ ದಿನಾಂಕ:

ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ರಾಜ್ಯ ಸ್ಕಾಲರ್‌ಶಿಪ್ ಪೋರ್ಟಲ್ (SSP – State Scholarship Portal) ssp.karnataka.gov.in ಮೂಲಕವೇ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. 2026-27ನೇ ಸಾಲಿನ ವಿದ್ಯಾಸಿರಿ ಸ್ಕಾಲರ್‌ಶಿಪ್‌ಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನಾಂಕವಾಗಿದೆ. ವಿದ್ಯಾರ್ಥಿಗಳು ಕೊನೆಯ ಕ್ಷಣದ ತಾಂತ್ರಿಕ ತೊಂದರೆಗಳನ್ನು ತಪ್ಪಿಸಲು ನಿಗದಿತ ದಿನಾಂಕದೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಯನ್ನು ಸಲ್ಲಿಸಿ ಈ ಯೋಜನೆಯ ಲಾಭ ಪಡೆಯಬಹುದು.

ಶಿಕ್ಷಣಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us