Haryana Election Result: ಹರಿಯಾಣದಲ್ಲಿ ಬಿಜೆಪಿ ಗೆಲುವು ಖಚಿತ; ಇಂದು ಸಂಜೆ ಪಕ್ಷದ ನಾಯಕರ ಜೊತೆ ಮೋದಿ ಸಭೆ

|

Updated on: Oct 08, 2024 | 3:03 PM

ಇಂದು ಮುಂಜಾನೆಯಿಂದಲೇ ಹರಿಯಾಣ ವಿಧಾನಸಭಾ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ಈಗಾಗಲೇ ಬಿಜೆಪಿ ಭಾರೀ ಮುನ್ನಡೆ ಸಾಧಿಸುವ ಮೂಲಕ ಗೆಲುವಿನ ಸಮೀಪದಲ್ಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚಣೆಯಲ್ಲಿ ತೊಡಗಿದ್ದಾರೆ. ಐತಿಹಾಸಿಕ ಮೂರನೇ ಅವಧಿಗೆ ಹರಿಯಾಣದಲ್ಲಿ ಬಿಜೆಪಿ ಅಧಿಕಾರಕ್ಕೇರುವುದು ಖಚಿತವಾಗಿದೆ.

Haryana Election Result: ಹರಿಯಾಣದಲ್ಲಿ ಬಿಜೆಪಿ ಗೆಲುವು ಖಚಿತ; ಇಂದು ಸಂಜೆ ಪಕ್ಷದ ನಾಯಕರ ಜೊತೆ ಮೋದಿ ಸಭೆ
ಪ್ರಧಾನಿ ನರೇಂದ್ರ ಮೋದಿ
Follow us on

ನವದೆಹಲಿ: ಹರಿಯಾಣದಲ್ಲಿ ಬಿಜೆಪಿ ವಿಜಯದ ಘೋಷಣೆ ನಂತರ ಇಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ನಾಯಕರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಲಿದ್ದಾರೆ. ಭಾರತೀಯ ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ ಬಿಜೆಪಿ 5,000 ಮತಗಳ ಅಂತರದೊಂದಿಗೆ 22 ಸ್ಥಾನಗಳಲ್ಲಿ, 10,000 ಮತಗಳ ಅಂತರದೊಂದಿಗೆ 22 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹೀಗಾಗಿ, ಬಿಜೆಪಿ ಮೂರನೇ ಅವಧಿಗೆ ಹರಿಯಾಣದಲ್ಲಿ ಸರ್ಕಾರ ರಚಿಸುವ ಉತ್ಸಾಹದಲ್ಲಿದೆ.

ಹರಿಯಾಣ ವಿಧಾನಸಭಾ ಚುನಾವಣಾ ಫಲಿತಾಂಶಗಳಲ್ಲಿ ಬಿಜೆಪಿ ತನ್ನ ಮುನ್ನಡೆಯನ್ನು ಬಲಪಡಿಸುವುದರೊಂದಿಗೆ ಈಗ ಹರಿಯಾಣದಲ್ಲಿ ಬಿಜೆಪಿಯ ಗಮನ ಸರ್ಕಾರ ರಚನೆಯ ಮುಂದಿನ ಹಂತದತ್ತ ಸಾಗುತ್ತಿದೆ. ಈಗಾಗಲೇ ಕೇಂದ್ರ ಸಚಿವ ಜೆಪಿ ನಡ್ಡಾ ಅವರು ಹರಿಯಾಣದ ಬಿಜೆಪಿ ನಾಯಕ ನಯಾಬ್ ಸಿಂಗ್ ಸೈನಿ ಅವರಿಗೆ ಕರೆ ಮಾಡಿ ಅಭಿನಂದಿಸಿದ್ದಾರೆ. ಚುನಾವಣಾ ಪ್ರಚಾರ ಪ್ರಾರಂಭವಾಗುವ ಮೊದಲೇ ಬಿಜೆಪಿ ನಯಾಬ್ ಸಿಂಗ್ ಸೈನಿ ಅವರನ್ನು ಹರಿಯಾಣದ ಸಿಎಂ ಅಭ್ಯರ್ಥಿ ಎಂದು ಘೋಷಿಸಿತ್ತು.

ಇದನ್ನೂ ಓದಿ: ವಿಕಸಿತ ಭಾರತದ ಗುರಿ ಸಾಕಾರಗೊಳ್ಳುವವರೆಗೂ ವಿಶ್ರಮಿಸುವುದಿಲ್ಲ; 23 ವರ್ಷಗಳ ಪಯಣ ನೆನಪಿಸಿಕೊಂಡ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಸಂಜೆ ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬಿಜೆಪಿ ನಾಯಕರು ಮತ್ತು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕೇಸರಿ ಪಕ್ಷವು ಭಾರಿ ಜಯಭೇರಿ ಬಾರಿಸುವ ನಿರೀಕ್ಷೆ ಹೆಚ್ಚಾಗಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ರಾಷ್ಟ್ರ ರಾಜಧಾನಿಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.


ಈ ನಡುವೆ ಮನೋಹರ್ ಲಾಲ್ ಖಟ್ಟರ್ ನಿವಾಸದಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಮತ್ತೊಂದೆಡೆ, ಎಣಿಕೆ ದತ್ತಾಂಶವನ್ನು ಅಪ್‌ಲೋಡ್ ಮಾಡುವಲ್ಲಿನ ವ್ಯತ್ಯಾಸದ ಕುರಿತು ಕಾಂಗ್ರೆಸ್ ಭಾರತೀಯ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ. ಅಕ್ಟೋಬರ್ 5ರ ಎಕ್ಸಿಟ್ ಪೋಲ್‌ಗಳಲ್ಲಿ ಹರಿಯಾಣದಲ್ಲಿ ಅಭೂತಪೂರ್ವ ಗೆಲುವು ದಾಖಲಿಸುವ ನಿರೀಕ್ಷೆಯಿದ್ದ ಕಾಂಗ್ರೆಸ್​ಗೆ ಸೋಲಿನ ಭೀತಿ ಎದುರಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:58 pm, Tue, 8 October 24