ಬೆಳಗಾವಿ-ಮಹಾರಾಷ್ಟ್ರ ಗಡಿ ವಿವಾದ: ಯಾಕೆ ಪ್ರಧಾನಿ ಮೋದಿ, ಅಮಿತ್ ಶಾ ಸಮಸ್ಯೆ ಬಗೆಹರಿಸುತ್ತಿಲ್ಲ? ಕಾಂಗ್ರೆಸ್ ಪ್ರಶ್ನೆ

|

Updated on: Apr 06, 2023 | 8:23 PM

ಬೆಳಗಾವಿ ಗಡಿ ಪ್ರದೇಶದ ಗ್ರಾಮಗಳಲ್ಲಿ ಮರಾಠಿ ಮಾತನಾಡುವ ಜನರಿಗಾಗಿ ಹಮ್ಮಿಕೊಂಡಿರುವ ಆರೋಗ್ಯ ಯೋಜನೆಯನ್ನು ಮಹಾರಾಷ್ಟ್ರ ಸರ್ಕಾರ 865 ಗ್ರಾಮಗಳಿಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಈ ಬಗ್ಗೆ ಕರ್ನಾಟಕ ವಿಪಕ್ಷ ನಾಯಕರು ಖಂಡಿಸಿದ್ದು, ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಬೆಳಗಾವಿ-ಮಹಾರಾಷ್ಟ್ರ ಗಡಿ ವಿವಾದ: ಯಾಕೆ ಪ್ರಧಾನಿ ಮೋದಿ, ಅಮಿತ್ ಶಾ ಸಮಸ್ಯೆ ಬಗೆಹರಿಸುತ್ತಿಲ್ಲ? ಕಾಂಗ್ರೆಸ್ ಪ್ರಶ್ನೆ
ಮಹಾರಾಷ್ಟ್ರದ ನಡೆ ಖಂಡಿಸಿ ಕರ್ನಾಟಕ ಬಿಜೆಪಿ ನಾಯಕರ ವಿರುದ್ಧ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ವಾಗ್ದಾಳಿ
Follow us on

ನವದೆಹಲಿ: ರಾಜ್ಯದ ಜನರ ಹಿತ ಕಾಯುವಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು. ಬೆಳಗಾವಿ ಗಡಿ (Belagavi Maharashtra Border Dispute) ಪ್ರದೇಶದ ಗ್ರಾಮಗಳಲ್ಲಿ ಮರಾಠಿ ಮಾತನಾಡುವ ಜನರಿಗಾಗಿ ಹಮ್ಮಿಕೊಂಡಿರುವ ಆರೋಗ್ಯ ಯೋಜನೆಯನ್ನು ಮಹಾರಾಷ್ಟ್ರ ಸರ್ಕಾರ 865 ಗ್ರಾಮಗಳಿಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಇದನ್ನು ದೆಹಲಿಯಲ್ಲಿ ಟೀಕಿಸಿದ ಕೆಪಿಸಿಸಿ ಅಧ್ಯಕ್ಷರು, ರಾಜ್ಯದ ಜನರಿಗೆ ಸೇವೆ ನೀಡಲು ಕರ್ನಾಟಕ ಶಕ್ತ್ಯವಾಗಿದೆ. ಕರ್ನಾಟಕದಲ್ಲಿ ಮಹಾರಾಷ್ಟ್ರ ಯಾಕೆ ಯೋಜನೆ ಘೋಷಿಸುತ್ತಿದೆ? ಕರ್ನಾಟಕ ರಾಜ್ಯವನ್ನು ಮಹಾರಾಷ್ಟ್ರ ಆಳುತ್ತಿದೆಯಾ? ಎಂದು ಆಕ್ರೋಶ ಹೊರಹಾಕಿದರಲ್ಲದೆ, ಮಹಾರಾಷ್ಟ್ರಕ್ಕೆ ಒಂದಿಂಚೂ ಭೂಮಿಯನ್ನು ಕೊಡಲ್ಲ. ಮಹಾರಾಷ್ಟ್ರ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕದ ವಿವಿಧ ಸಂಘಟನೆಗಳು ಹೋರಾಟ ನಡೆಸಲಿ ಎಂದರು.

ಮಹಾರಾಷ್ಟ್ರ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ಅವರುನ ಯಾಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದ ಡಿಕೆ ಶಿವಕುಮಾರ್, ಇದು ಕರ್ನಾಟಕದ ಸ್ವಾಭಿಮಾನದ ಪ್ರಶ್ನೆ, ಸಿಎಂ ಬೊಮ್ಮಾಯಿ ಅವರು ಕೂಡಲೇ ರಾಜೀನಾಮೆ ನೀಡಲಿ ಎಂದು ಡಿಕೆ ಶಿವಕುಮಾರ್ ಆಗ್ರಹ ಮಾಡಿದರು.

ಮುಖ್ಯಮಂತ್ರಿ ಸ್ಥಾನದಲ್ಲಿ ಇರಲು ಬೊಮ್ಮಾಯಿ ಲಾಯಕ್ಕಿಲ್ಲ: ಸಿದ್ದರಾಮಯ್ಯ

ಮಹಾರಾಷ್ಟ್ರದವರು ಬೆಳಗಾವಿ ವಿಚಾರದಲ್ಲಿ ಮೊದಲಿನಿಂದಲೂ ಕಾಲು ಕೆರೆಯುತ್ತಿದ್ದಾರೆ. ಮಹಾರಾಷ್ಟ್ರದ ಹಸ್ತಕ್ಷೇಪವನ್ನು ನಾವು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ದೆಹಲಿಯಲ್ಲಿ ಮಾತನಾಡಿದ ಅವರು, ಬೇರೆ ರಾಜ್ಯದ ಆಡಳಿತದಲ್ಲಿ ನಾವು ಮೂಗು ತೂರಿಸುವುದಿಲ್ಲ. ಕರ್ನಾಟಕದ ಜನರು ಸೌಮ್ಯ ಸ್ವಭಾವದವರು. ಕರ್ನಾಟಕದ 800 ಹಳ್ಳಿಗಳಲ್ಲಿ ಆರೋಗ್ಯ ಯೋಜನೆ ಜಾರಿಗೆ ಮುಂದಾಗಿದ್ದಾರೆ. ಆದರೂ ಸಿಎಂ ಬಸವರಾಜ ಬೊಮ್ಮಾಯಿ ಸುಮ್ಮನೆ ಇದ್ದಾರೆ. ಕನ್ನಡಿಗರ ಹಿತ ಕಾಪಾಡುವಲ್ಲಿ ಅವರು ಸಂಪೂರ್ಣ ವಿಫಲರಾಗಿದ್ದಾರೆ. ಮುಖ್ಯಮಂತ್ರಿ ಸ್ಥಾನದಲ್ಲಿ ಇರಲು ಬೊಮ್ಮಾಯಿ ಲಾಯಕ್ಕಿಲ್ಲ. ಕೂಡಲೇ ಸಿಎಂ ಸ್ಥಾನಕ್ಕೆ ಬೊಮ್ಮಾಯಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ದೇಶದಲ್ಲಿ 1956ರಲ್ಲೇ ಭಾಷವಾರು ಪ್ರಾಂತ್ಯ ವಿಂಗಡಣೆ ಆಗಿದೆ. ಆಯಾ ರಾಜ್ಯದಲ್ಲಿ ಅವರೇ ಹಾಗೂ ಆಯಾ ಭಾಷೆ ಸಾರ್ವಭೌಮ. ಭಾಷವಾರು ವಿಚಾರದಲ್ಲಿ ಮಹಾರಾಷ್ಟ್ರ ಹಸ್ತಕ್ಷೇಪ ಮಾಡಬಾರದು. ಕರ್ನಾಟಕದವರು ಸೌಮ್ಯ ಸ್ವಭಾವ ಅಂತ ಹೀಗೆ ಮಾಡಬಾರದು. ಯೋಜನೆ ಜಾರಿ ಬಗ್ಗೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಆದೇಶ ಪ್ರಕಟಿಸಿದ್ದಾರೆ. ಬಿಜೆಪಿ ನಾಯಕರು ಮಾತು ಎತ್ತಿದರೆ ಡಬಲ್ ಇಂಜಿನ್ ಸರ್ಕಾರ ಅಂತಾರೆ. ಆದರೆ ಗಡಿ ಸಮಸ್ಯೆಯನ್ನು ಪ್ರಧಾನಮಂತ್ರಿ ಮೋದಿ, ಅಮಿತ್ ಶಾ ಏಕೆ ಬಗೆಹರಿಸುತ್ತಿಲ್ಲ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Karnataka Assembly Polls: ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸಚಿವ ವಿ ಸೋಮಣ್ಣ? ಗುಟ್ಟು ಬಿಟ್ಟುಕೊಡದ ಬಿಎಸ್ ಯಡಿಯೂರಪ್ಪ

ಬೆಳಗಾವಿ ಗಡಿ ಪ್ರದೇಶದ ಗ್ರಾಮಗಳಲ್ಲಿ ಮರಾಠಿ ಮಾತನಾಡುವ ಜನರಿಗಾಗಿ ಹಮ್ಮಿಕೊಂಡಿರುವ ಆರೋಗ್ಯ ಯೋಜನೆಯನ್ನು ಮಹಾರಾಷ್ಟ್ರ ಸರ್ಕಾರ 865 ಗ್ರಾಮಗಳಿಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಅಂತ್ಯೋದಯ ಆಹಾರ ಯೋಜನೆಯ (ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿ ಕೈಗೊಂಡಿರುವ ಉಪಕ್ರಮ) ಫಲಾನುಭವಿಗಳಾಗಿರುವ ಜನರು, ಆದ್ಯತಾ ಗುಂಪಿನ ಕುಟುಂಬಗಳು, ಅನ್ನಪೂರ್ಣ ರೇಶನ್ ಕಾರ್ಡ್​​ದಾರರು ಮಾಹಾತ್ಮ ಜ್ಯೋತಿ ರಾವ್ ಫುಲೆ ಜನ ಆರೋಗ್ಯ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ ಎಂದು ಉಲ್ಲೇಖಿಸಿದೆ.

ಬೆಳಗಾವಿ, ಕಾರವಾರ, ಕಲಬುರ್ಗಿ ಮತ್ತು ಬೀದರ್‌ ಗಡಿ ವ್ಯಾಪ್ತಿಯ 865 ಗ್ರಾಮಗಳನ್ನು ಆರೋಗ್ಯ ಯೋಜನೆಯಡಿ ಸೇರಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಆದೇಶದ ಪ್ರಕಾರ, ಈ ಪ್ರದೇಶಗಳಲ್ಲಿ ವಾಸಿಸುವ ಕುಟುಂಬಗಳು ಸರ್ಕಾರದಿಂದ ಗುರುತಿಸಲ್ಪಟ್ಟ 996 ರೀತಿಯ ಚಿಕಿತ್ಸೆಗಳಿಗೆ ವರ್ಷಕ್ಕೆ 1.50 ಲಕ್ಷ ರೂಪಾಯಿಗಳವರೆಗೆ ವೈದ್ಯಕೀಯ ವಿಮೆಯನ್ನು ಪಡೆಯಲಿವೆ.

ಈ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದ ಸಿಎಂ ಬೊಮ್ಮಾಯಿ, ಕರ್ನಾಟಕದ ಗಡಿಯಲ್ಲಿರುವ ಕೆಲವರಿಗೆ ವಿಮೆ ನೀಡುವ ಆದೇಶ ಮಾಡಿರುವುದು ಉದ್ದಟತನದ ಪರಮಾವಧಿಯಾಗಿದ್ದು, ಇದು ಎರಡು ರಾಜ್ಯಗಳ ನಡುವಿನ ಬಾಂಧವ್ಯ ಕದಡುವ ಪ್ರಯತ್ನವಾಗಿದೆ ಎಂದು ಗುಡುಗಿದ್ದರು. ಅಲ್ಲದೆ, ಮಹಾರಾಷ್ಟ್ರ ಸರ್ಕಾರ ಇದೇ ರೀತಿ ಉದ್ದಟತನ ಮುಂದುವರೆಸಿದರೆ ಕರ್ನಾಟಕ ಸರ್ಕಾರವೂ ಕೂಡ ಮಹಾರಾಷ್ಟ್ರ ಗಡಿಯಲ್ಲಿರುವ ಕನ್ನಡಿಗರ ರಕ್ಷಣೆಗೆ ಇದೇ ರೀತಿಯ ವಿಮೆ ಜಾರಿಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:23 pm, Thu, 6 April 23