ಡಿಕೆ ಶಿವಕುಮಾರ್​ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ ಶಾಸಕ

|

Updated on: May 22, 2023 | 1:32 PM

ನೂತನ ಶಾಸಕರು ಅಥವಾ ಸಚಿವರು ದೇವರು ಹೆಸರು, ಸಂವಿಧಾನ ಹಾಗೂ ರೈತರ ಹೆಸರಿನ ಮೇಲೆ ಪ್ರಮಾಣವಚನ ಸ್ವೀಕರಿಸುವುದು ಸಾಮಾನ್ಯ. ದೇವರು ಅಥವಾ ಸಂವಿಧಾನದ ಮೇಲೆ ಪ್ರಮಾಣವಚನ ಸ್ವೀರಿಸಬೇಕು. ಆದ್ರೆ, ಇಲ್ಲೋರ್ವ ಶಾಸಕ ಡಿಕೆ ಶಿವಕುಮಾರ್ ಅವರ ಹೆಸರಿನ ಮೇಲೆ ಪ್ರಮಾಣವಚನ ಸ್ವೀರಿಸಿ ಎಲ್ಲರ ಗಮನಸೆಳೆದಿದ್ದಾರೆ.

ಡಿಕೆ ಶಿವಕುಮಾರ್​ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ ಶಾಸಕ
ಶಾಸಕ ಬಸವರಾಜ್ ಶಿವಗಂಗಾ, ಡಿ.ಕೆ. ಶಿವಕುಮಾರ್
Follow us on

ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ 16ನೇ ವಿಧಾನಸಭೆಯ ಮೊದಲ ವಿಶೇಷ ಅಧಿವೇಶನ ಪ್ರಾರಂಭವಾಗಿದ್ದು,. ಮೊದಲ ಎರಡು ದಿನ 224 ನೂತನ ಶಾಸಕರ ಪ್ರಮಾಣವಚನ ಸ್ವೀಕಾರ ಪ್ರಕ್ರಿಯೆ ನಡೆಯಲಿದೆ. ಅದರಂತೆ ಇಂದು(ಮೇ 22) ಮೊದಲ ದಿನದ ಅಧಿವೇಶದಲ್ಲಿ ನೂತನ ಶಾಸಕರು ದೇವರು, ಸಂವಿಧಾನ ಹಾಗೂ ರೈತರ ಹೆಸರಿನ ಮೇಲೆ ಪ್ರಮಾಣವಚನ ಸ್ವೀಕರಿಸಿದರು. ಇನ್ನು ಇದೇ ವೇಳೆ ಶಾಸಕರೊಬ್ಬರು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೆಸರಿನ ಮೇಲೆ ಪ್ರಮಾಣವಚನ ಸ್ವೀಕರಿಸಿ ಎಲ್ಲರ ಗಮನಸೆಳೆದಿದ್ದಾರೆ. ಹೌದು… ಚನ್ನಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಶಾಸಕ ಬಸವರಾಜ್ ಶಿವಗಂಗಾ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಹೆಸರಿನ ಮೇಲೆ ಪ್ರಮಾಣವಚನ ಸ್ವೀಕರಿಸಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದರು. ಇದು ಎಲ್ಲರ ಹುಬ್ಬೇರುವಂತೆ ಮಾಡಿತು.

ಇದನ್ನೂ ಓದಿ: Karnataka Assembly Session Live: ನೂತನ ಶಾಸಕರಿಂದ ಪ್ರಮಾಣವಚನ ಸ್ವೀಕಾರ

ಇನ್ನು ಬಸವರಾಜ್ ಶಿವಗಂಗಾ ಅವರ ಪ್ರಮಾಣವಚನಕ್ಕೆ ಸದನದಲ್ಲಿ ಆಕ್ಷೇಪ ವ್ಯಕ್ತವಾಯಿತು. ಕೂಡಲೇ ಮಧ್ಯೆ ಪ್ರವೇಶಿಸಿದ ಹಂಗಾಮಿ ಸ್ಪೀಕರ್​ ಆರ್​.ವಿ.ದೇಶಪಾಂಡೆ ಗೊಂದಲ ಬಗೆಹರಿಸಿದರು, ಅಲ್ಲದೇ ವ್ಯಕ್ತಿ ಹೆಸರಿನ ಮೇಲೆ ಪ್ರಮಾಣ ಮಾಡಿಸದಂತೆ ವಿಧಾನಸಭೆ ಕಾರ್ಯದರ್ಶಿಗೆ ಸೂಚನೆ ನೀಡಿದರು.

ಸಂವಿಧಾನದ ಪ್ರಕಾರ ಪ್ರಮಾಣವಚನ ಸ್ವೀಕರಿಸಲು ಸ್ಪೀಕರ್​ ದೇಶಪಾಂಡೆ ಅವರು ನೂತನ ಶಾಸಕರಿಗೆ ಖಡಕ್ ಸೂಚನೆ ನೀಡಿದರು. ದೇವರು, ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಬೇಕು. ಅದು ಬಿಟ್ಟು ಬೇರೆ ಯಾವ ಹೆಸರಿನಲ್ಲೂ ಪ್ರಮಾಣವಚನ ಸ್ವೀಕರಿಸಬೇಡಿ ಎಂದು ಸಲಹೆ ನೀಡಿದರು.

ಮೊದಲಿಗೆ ವರುಣಾ ಕ್ಷೇತ್ರದ ಶಾಸಕರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರೆ, ಎರಡನೇಯವರಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕನಕಪುರ ಕ್ಷೇತ್ರದ ಶಾಸಕರಾಗಿ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ್​ ಜಾರಕಿಹೊಳಿ, ಚಿತ್ತಾಪುರ ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ, ಬಿಟಿಎಂ ಲೇಔಟ್​ ಕ್ಷೇತ್ರದ ಶಾಸಕ ರಾಮಲಿಂಗಾರೆಡ್ಡಿ, ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್​ ಸಂವಿಧಾನದ ಹೆಸರಿನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬಸವನಬಾಗೇವಾಡಿ ಕ್ಷೇತ್ರದ ಶಾಸಕ ಶಿವಾನಂದ ಪಾಟೀಲ್ ಬಸವಣ್ಣನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಇನ್ನು ಬಿಜೆಪಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಮತದಾರರು ಹಾಗೂ ತಮ್ಮ ಮನೆ ದೇವರಾದ ಸತ್ಯಸಾರಮಣಿ ಮತ್ತು ಸತ್ಯಪದನಾದಿ ಅಮ್ಮ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.