R Shankar: ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಆರ್. ಶಂಕರ್ ರಾಜೀನಾಮೆ

|

Updated on: Apr 12, 2023 | 4:47 PM

ಬಿಜೆಪಿ ಟಿಕೆಟ್ ದೊರೆಯದ ಬೆನ್ನಲ್ಲೇ ಅಸಮಾಧಾನಗೊಂಡಿರುವ ಆರ್. ಶಂಕರ್ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

R Shankar: ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಆರ್. ಶಂಕರ್ ರಾಜೀನಾಮೆ
ಆರ್. ಶಂಕರ್
Follow us on

ಬೆಂಗಳೂರು: ಬಿಜೆಪಿ ಟಿಕೆಟ್ ದೊರೆಯದ ಬೆನ್ನಲ್ಲೇ ಅಸಮಾಧಾನಗೊಂಡಿರುವ ಆರ್. ಶಂಕರ್ (R Shankar) ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಗೆ ಅವರು ಬುಧವಾರ ರಾಜೀನಾಮೆ ಪತ್ರ ಸಲ್ಲಿಸಿದರು. ಆರ್.ಶಂಕರ್ ಅವರು ರಾಣಿಬೆನ್ನೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಇದರೊಂದಿಗೆ ಬಿಜೆಪಿಯಲ್ಲಿ ಭಿನ್ನಮತ ಹೆಚ್ಚಾಗಲು ಆರಂಭವಾಗಿದೆ. ವಿಧಾನಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಮಂಗಳವಾರ ರಾತ್ರಿ ಬಿಡುಗಡೆಯಾಗಿದ್ದು. 52 ಹೊಸ ಮುಖಗಳಿಗೆ ಮಣೆ ಹಾಕಲಾಗಿತ್ತು.

ಟಿಕೆಟ್ ಘೋಷಣೆ ಬೆನ್ನಲ್ಲೇ ಟಿಕೆಟ್ ನೀಡದ್ದಕ್ಕೆ ಮುನಿಸಿಕೊಂಡು ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಒಬ್ಬೊಬ್ಬರೇ ಬಿಜೆಪಿ ತೊರೆಯುತ್ತಿದ್ದಾರೆ. ಬಿಜೆಪಿ ವಿಧಾನಪರಿಸತ್ ಸದಸ್ಯರಾಗಿದ್ದ ಪುಟಣ್ಣ ಅವರು ಟಿಕೆಟ್ ಘೋಷಣೆಗೂ ಮುನ್ನವೇ, ಅಂದರೆ ಕೆಲ ದಿನಗಳ ಹಿಂದೆಯೇ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಕಾಂಗ್ರೆಸ್​ನಿಂದ ರಾಜಾಜಿನಗರ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ಮತ್ತೋರ್ವ ನಾಯಕ ನಿವೃತ್ತಿ ಘೋಷಣೆ: ಸಕ್ರಿಯ ರಾಜಕಾರಣಕ್ಕೆ ಸಚಿವ ಎಸ್​ ಅಂಗಾರ ಗುಡ್​ ಬೈ

ಮಾಜಿ ಉಪಮುಖ್ಯಮಂತ್ರಿ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಬಿಜೆಪಿ ನಾಯಕತ್ವದ ವಿರುದ್ಧ ಬಂಡಾಯವೆದ್ದಿದ್ದು ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಶಿವಮೊಗ್ಗ ನಗರ ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿರುವ ಆಯನೂರು ಮಂಜುನಾಥ್​ ಸಹ ವಿಧಾನಪರಿಷತ್ ಸದಸ್ಯತ್ವಕ್ಕೆ ಶೀಘ್ರವೇ ರಾಜೀನಾಮೆ ನೀಡುವುದಾಗಿ ಈಗಾಗಲೇ ಬಹಿರಂಗವಾಗಿಯೇ ಘೋಷಣೆ ಮಾಡಿದ್ದಾರೆ. ಆದರೆ, ಶಿವಮೊಗ್ಗ ಟಿಕೆಟ್​ ಯಾರಿಗೆ ನೀಡುತ್ತಾರೆ ಎನ್ನುವುದರ ಮೇಲೆ ಅವರ ತೀರ್ಮಾನ ನಿರ್ಧಾರವಾಗಲಿದೆ ಎನ್ನಲಾಗುತ್ತಿದೆ.

ಅಥಣಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಸವದಿ ಟಿಕೆಟ್​ಗಾಗಿ ವರಿಷ್ಠರ ಮೇಲೆ ಹಲವು ದಿನಗಳಿಂದ ಒತ್ತಡ ಹಾಕುತ್ತಾ ಬಂದಿದ್ದರು. ಆದರೆ ಕೊನೇ ಕ್ಷಣದಲ್ಲಿ ಟಿಕೆಟ್ ಅವರ ಕೈತಪ್ಪಿತು. ಇದರಿಂದ ಅಸಮಾಧಾನಗೊಂಡಿರುವ ಅವರು, ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ