ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಬೆನ್ನಲ್ಲೇ ಪಕ್ಷ ತೊರೆಯುತ್ತಿರುವ ಸಾಲು-ಸಾಲು ಜೆಡಿಎಸ್ ಮುಖಂಡರು

ಎಸ್ ಆರ್ ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಸಾಲು-ಸಾಲು ಮುಖಂಡರು, ಕಾರ್ಯಕರ್ತರು ಜೆಡಿಎಸ್ ಪಕ್ಷ ತೊರೆಯುತ್ತಿದ್ದಾರೆ.

ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಬೆನ್ನಲ್ಲೇ ಪಕ್ಷ ತೊರೆಯುತ್ತಿರುವ ಸಾಲು-ಸಾಲು ಜೆಡಿಎಸ್ ಮುಖಂಡರು

Updated on: Mar 26, 2023 | 9:14 AM

ತುಮಕೂರು: ಈಗಾಗಲೇ ಕಾಂಗ್ರೆಸ್​ನಲ್ಲಿ ಗುರುತಿಸಿಕೊಂಡು ಪಕ್ಷದಿಂದ ಉಚ್ಚಾಟನೆಗೊಂಡಿರುವ ಗುಬ್ಬಿ ಕ್ಷೇತ್ರದ ಜೆಡಿಎಸ್​ ಶಾಸಕ ಎಸ್ ಆರ್ ಶ್ರೀನಿವಾಸ್ (Gubbi MLA SR Srinivas) ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ನಾಳೆ ಅಂದರೆ ಮಾರ್ಚ್ 27ರಂದು ಸೋಮವಾರ ಜೆಡಿಎಸ್​ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶ್ರೀನಿವಾಸ್(SR Srinivas) ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ರಾಜೀನಾಮೆ ಬಳಿಕ ಶ್ರೀನಿವಾಸ್ ಅಧಿಕೃತವಾಗಿ ಕಾಂಗ್ರೆಸ್ ‌ಸೇರ್ಪಡೆಯಾಗಲಿದ್ದಾರೆ. ಇನ್ನು ಎಸ್ ಆರ್ ಶ್ರೀನಿವಾಸ್ ಪಕ್ಷ ಸೇರ್ಪಡೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ​ ಗುಬ್ಬಿ ಕ್ಷೇತ್ರದ ಟಿಕೆಟ್ ಪ್ರಕಟಿಸಿಲ್ಲ. ಆದ್ರೆ, ಗುಬ್ಬಿಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಪಕ್ಕಾ ಆಗಿದೆ.

ಇನ್ನು ಈ ಬಗ್ಗೆ ತುಮಕೂರು ಜಿಲ್ಲೆ ಗುಬ್ಬಿಯಲ್ಲಿ ಮಾತನಾಡಿರುವ ಜೆಡಿಎಸ್‌ ಉಚ್ಛಾಟಿತ ಶಾಸಕ ಶ್ರೀನಿವಾಸ್, ಸೋಮವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಇಂದೇ ರಾಜೀನಾಮೆ ಕೊಡಬೇಕಿತ್ತು, ಆದ್ರೆ ಸ್ಪೀಕರ್​ ಇರಲಿಲ್ಲ. ಸದ್ಯಕ್ಕೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ. ಬೇರೆ ಶಾಸಕರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಗುಬ್ಬಿ ಜೆಡಿಎಸ್​ನಲ್ಲಿ ರಾಜೀನಾಮೆ ಪರ್ವ

ಇನ್ನು ಶ್ರೀನಿವಾಸ್ ಅವರು ಅಧಿಕೃತವಾಗಿ ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಗುಬ್ಬಿ ಜೆಡಿಎಸ್​ನಲ್ಲಿ ರಾಜೀನಾಮೆ ಪರ್ವ ಶುರುವಾಗಿದೆ. ಜಿ.ಹೊಸಹಳ್ಳಿ ಗ್ರಾಮದಲ್ಲಿ ಸಾಲು ಸಾಲು ಜೆಡಿಎಸ್ ಕಾರ್ಯಕರ್ತ ರಾಜೀನಾಮೆ ನೀಡಿದ್ದಾರೆ. 300ಕ್ಕೂ ಹೆಚ್ಚು JDS ಮುಖಂಡರು, ಕಾರ್ಯಕರ್ತ, ಜೆಡಿಎಸ್​​​ ಬೂತ್ ಕಮಿಟಿ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಜೆಡಿಎಸ್​ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಕಚೇರಿಗೆ ರವಾನಿಸಿದ್ದಾರೆ. ಇನ್ನು ಕ್ಷೇತ್ರದಲ್ಲಿ ಹಲವು ಮುಖಂಡರು ಜೆಡಿಎಸ್​ಗೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಬಂಡಾಯದ ಎಚ್ಚರಿಕೆ :

ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಗೊಂಡು ಚುನಾವಣೆಗೆ ಸ್ಪರ್ಧಿಸುವುದಕ್ಕೆ ಗುಬ್ಬಿ ತಾಲೂಕು ಕಾಂಗ್ರೆಸ್ ಘಟಕದಿಂದ ವಿರೋಧ ವ್ಯಕ್ತವಾಗಿದೆ. ಅಲ್ಲದೆ ಒಂದು ವೇಳೆ ಶ್ರೀನಿವಾಸ್ ಚುನಾವಣೆಗೆ ಸ್ಪರ್ಧಿಸಿದ್ದೇ ಆದರೆ ಅವರನ್ನು ಸೋಲಿಸುವ ಪಣತೊಟ್ಟಂತಿದೆ. ಈ ಮೂಲಕ ಶ್ರೀನಿವಾಸ್ ಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ ಬಂಡಾಯ ಫಿಕ್ಸ್ ಎನ್ನುವ ಎಚ್ಚರಿಕೆಯ ಸಂದೇಶವನ್ನು ಕೂಡಾ ರವಾನಿಸಿದ್ದಾರೆ. ಮಾನವೂ ಇಲ್ಲದ ಮೌಲ್ಯವೂ ಇಲ್ಲದ ಹತ್ತು ಮುಖದ ರಾಜಕಾರಣಿ. ಮುಖವಾಡ ಕಳಚೋಣ ಬನ್ನಿ ಎಂದು ಈ ಪೋಸ್ಟರ್ ಮೂಲಕ ಸಂದೇಶ ಸಾರಿದ್ದರು. ಪ್ರಸನ್ನ ಕುಮಾರ್ ಹಾಗೂ ಹೊನ್ನಗಿರಿ ಗೌಡ ಗುಬ್ಬಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us