AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Elections: ವಿಧಾನಸಭೆ ಚುನಾವಣೆ; ಜಿದ್ದಾಜಿದ್ದಿನ ಪೈಪೋಟಿಗೆ ಸಾಕ್ಷಿಯಾಗಲಿವೆ ಈ ಐದು ಕ್ಷೇತ್ರಗಳು

ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರದ ಕಾವು ಏರುತ್ತಿದ್ದು, ಬಹಳಷ್ಟು ಪೈಪೋಟಿ ಹೊಂದಿರುವ ಪ್ರಮುಖ ಕ್ಷೇತ್ರಗಳ ವಿವರ ಇಲ್ಲಿದೆ.

Karnataka Elections: ವಿಧಾನಸಭೆ ಚುನಾವಣೆ; ಜಿದ್ದಾಜಿದ್ದಿನ ಪೈಪೋಟಿಗೆ ಸಾಕ್ಷಿಯಾಗಲಿವೆ ಈ ಐದು ಕ್ಷೇತ್ರಗಳು
ಹೆಚ್​ಡಿ ಕುಮಾರಸ್ವಾಮಿ, ಬೊಮ್ಮಾಯಿ ಮತ್ತು ಡಿಕೆ ಶಿವಕುಮಾರ್
Ganapathi Sharma
|

Updated on:Apr 26, 2023 | 7:12 PM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ನಾಮಪತ್ರ ಹಿಂಪಡೆಯುವ ಅವಧಿ ಈಗಾಗಲೇ ಮುಕ್ತಾಯವಾಗಿದ್ದು, ಕಣದಲ್ಲಿ ಯಾರೆಲ್ಲ ಉಳಿದಿದ್ದಾರೆ ಎಂಬ ಸ್ಪಷ್ಟ ಚಿತ್ರಣ ದೊರೆತಿದೆ. ರಾಜ್ಯದ ಕೆಲವು ಕ್ಷೇತ್ರಗಳಲ್ಲಿ ಜಿದ್ದಾಜಿದ್ದಿನ ಪೈಪೋಟಿ ಏರ್ಪಡುವ ನಿರೀಕ್ಷೆ ಇದೆ. ಪ್ರಮುಖ ರಾಜಕೀಯ ಪಕ್ಷಗಳು ಕೆಲವು ಕ್ಷೇತ್ರಗಳಲ್ಲಿ ಘಟಾನುಘಟಿ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿವೆ. ಉದಾಹರಣೆಗೆ; ವರುಣಾದಲ್ಲಿ ಕಾಂಗ್ರೆಸ್​​ ಹಿರಿಯ ನಾಯಕ ಸಿದ್ದರಾಮಯ್ಯ ಕಣಕ್ಕಿಳಿದಿದ್ದರೆ ಬಿಜೆಪಿಯಿಂದ ವಿ ಸೋಮಣ್ಣ ಅಭ್ಯರ್ಥಿಯಾಗಿದ್ದಾರೆ. ಮತ್ತೊಂದೆಡೆ, ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಬಿಜೆಪಿಯ ಆರ್ ಅಶೋಕ ಮಧ್ಯೆ ಪೈಪೋಟಿ ಏರ್ಪಡಲಿದೆ. ಇನ್ನೂ ಯಾವೆಲ್ಲ ಕ್ಷೇತ್ರಗಳು ಈ ಬಾರಿ ಗಮನ ಸೆಳೆದಿವೆ? ಇಲ್ಲಿದೆ ಮಾಹಿತಿ.

ಅಥಣಿಯಲ್ಲಿ ಮಹೇಶ್ ಕುಮಟಳ್ಳಿ Vs ಲಕ್ಷ್ಮಣ ಸವದಿ

ಬೆಳಗಾವಿಯ ಅಥಣಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಹೇಶ್ ಕುಮಟಳ್ಳಿ ಮತ್ತು ಕಾಂಗ್ರೆಸ್​​ನಿಂದ ಲಕ್ಷ್ಮಣ ಸವದಿ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಲಕ್ಷ್ಮಣ ಸವದಿ ಬಿಜೆಪಿಯ ಹಿರಿಯ ನಾಯಕ ಯಡಿಯೂರಪ್ಪ ಅವರ ಸಂಬಂಧಿಯೂ ಹೌದು. ಇತ್ತೀಚೆಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು.

ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ Vs ಯೋಗೇಶ್ವರ್ ಕದನ

ಚನ್ನಪಟ್ಟಣ ಕ್ಷೇತ್ರವೂ ಪ್ರಬಲ ಪೈಪೋಟಿಗೆ ಸಾಕ್ಷಿಯಾಗಲಿದ್ದು, ಜೆಡಿಎಸ್​ನ ಹೆಚ್‌ಡಿ ಕುಮಾರಸ್ವಾಮಿ ಮತ್ತು ಬಿಜೆಪಿಯ ಸಿಪಿ ಯೋಗೇಶ್ವರ್ ಕಣದಲ್ಲಿದ್ದಾರೆ. ವಿಶೇಷವೆಂದರೆ, ಈವರೆಗೆ ನಾಲ್ಕು ಚುನಾವಣೆಗಳಲ್ಲಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದರೆ, ಸಿ.ಪಿ. ಯೋಗೇಶ್ವರ್ ಐದು ಬಾರಿ ಗೆದ್ದಿದ್ದಾರೆ. ಕಳೆದ ಬಾರಿ ಈ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿಪಿ ಯೋಗೇಶ್ವರ್ ಸೋಲು ಅನುಭವಿಸಿದ್ದರು.

ಹುಬ್ಬಳ್ಳಿ ಧಾರವಾಡ ಸೆಂಟ್ರಲ್​ನಲ್ಲಿ ಜಗದೀಶ್ ಶೆಟ್ಟರ್ Vs ಮಹೇಶ ಟೆಂಗಿನಕಾಯಿ

6 ಬಾರಿ ಶಾಸಕರಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿ ಅಲ್ಲಿ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿ ಮಹೇಶ ಟೆಂಗಿನಕಾಯಿ ಅವರಿಗೆ ಟಿಕೆಟ್ ನೀಡಿದೆ. ಶೆಟ್ಟರ್ ಅವರು ಟೆಂಗಿನಕಾಯಿ ಅವರ ರಾಜಕೀಯ ಗುರುವಾಗಿದ್ದು, ಈ ಕ್ಷೇತ್ರದಲ್ಲಿ ಗುರು ಶಿಷ್ಯರ ಮಧ್ಯೆ ಪೈಪೋಟಿ ನಡೆಯಲಿದೆ. ಬಿಜೆಪಿ ಇದನ್ನು ಪ್ರತಿಷ್ಠೆಯ ಕಣವಾಗಿ ಸ್ವೀಕರಿಸಿದೆ.

ವರುಣಾದಲ್ಲಿ ಸಿದ್ದರಾಮಯ್ಯ Vs ಸೋಮಣ್ಣ

ವರುಣಾ ಕ್ಷೇತ್ರ ಕಾಂಗ್ರೆಸ್‌ನ ಭದ್ರ ಕೋಟೆಯಾಗಿದ್ದು, ಕಳೆದ ಬಾರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಈ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ ಈ ಬಾರಿ ಸಿದ್ದರಾಮಯ್ಯ ಅವರೇ ಈ ಸ್ಥಾನದಿಂದ ಕಣಕ್ಕಿಳಿದಿದ್ದಾರೆ. ಅವರನ್ನು ಮಣಿಸಲು ಬಿಜೆಪಿ ಹಿರಿಯ ಬಿಜೆಪಿ ನಾಯಕ, ಮಾಜಿ ಸಚಿವ ವಿ ಸೋಮಣ್ಣ ಅವರನ್ನು ಕಣಕ್ಕಿಳಿಸಿದೆ. ಈ ಕ್ಷೇತ್ರವನ್ನು ಕಾಂಗ್ರೆಸ್‌ ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದೆ. ಸಿದ್ದರಾಮಯ್ಯ ಅವರ ಅದೃಷ್ಟದ ಕ್ಷೇತ್ರವೂ ಇದಾಗಿದ್ದು, ಈ ಬಾರಿ ಗೆಲ್ಲುವುದು ಅವರಿಗೆ ಮಹತ್ವದ್ದಾಗಿದೆ. ಏಕೆಂದರೆ ಇದು ತಮ್ಮ ಕೊನೆಯ ಚುನಾವಣೆ ಎಂದು ಸಿದ್ದರಾಮಯ್ಯ ಈಗಾಗಲೇ ಘೋಷಿಸಿದ್ದಾರೆ.

ಬಳ್ಳಾರಿ ನಗರ ಕ್ಷೇತ್ರದಲ್ಲಿ ಚತುಷ್ಕೋನ ಸ್ಪರ್ಧೆ

ಬಳ್ಳಾರಿ ನಗರದಲ್ಲಿ ಬಿಜೆಪಿಯಿಂದ ಜಿ ಸೋಮಶೇಖರ್ ರೆಡ್ಡಿ, ಜೆಡಿಎಸ್​ನಿಂದ ಅನಿಲ್ ಲಾಡ್ ಮತ್ತು ಕಾಂಗ್ರೆಸ್​ನಿಂದ ಭರತ್ ರೆಡ್ಡಿ ಕಣಕ್ಕಿಳಿದಿದ್ದಾರೆ. ಇಲ್ಲಿ ಕೆಜೆಪಿಪಿಯೂ ಪ್ರಮುಖ ಸ್ಪರ್ಧಿಯಾಗಿದ್ದು, ಚತುಷ್ಕೋನ ಸ್ಪರ್ಧೆ ಏರ್ಪಟ್ಟಿದೆ. ವಿಶೇಷವೆಂದರೆ ಇಲ್ಲಿ ಕೆಜೆಪಿಪಿಯು ಸೋಮಶೇಖರ ರೆಡ್ಡಿ ಅವರ ಸೊಸೆ ಅರುಣಾ ಅವರನ್ನೇ ಅಭ್ಯರ್ಥಿಯನ್ನಾಗಿ ಮಾಡಿದೆ. ಜೆಡಿಎಸ್ ಅಭ್ಯರ್ಥಿ ಅನಿಲ್ ಲಾಡ್ ಕೂಡ ತಮ್ಮ ಶಕ್ತಿ ಪ್ರದರ್ಶನ ಮಾಡುತ್ತಿದ್ದಾರೆ. ಇಲ್ಲಿ ಕಾಂಗ್ರೆಸ್​​ನ ಭರತ್ ರೆಡ್ಡಿ ಅವರನ್ನು ದುರ್ಬಲ ಅಭ್ಯರ್ಥಿ ಎನ್ನಲಾಗುತ್ತಿದೆ.

ಕನಕಪುರದಲ್ಲಿ ಡಿಕೆ ಶಿವಕುಮಾರ್ Vs ಆರ್ ಅಶೋಕ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಭದ್ರಕೋಟೆ ಕನಕಪುರದಲ್ಲಿ ಬಿಜೆಪಿ ಈ ಬಾರಿ ಸಚಿವ ಆರ್ ಅಶೋಕ ಅವರನ್ನು ಕಣಕ್ಕಿಳಿಸಿರುವುದು ಕುತೂಹಲ ಮೂಡಿಸಿದೆ. ಆರ್ ಅಶೋಕ ಈಗಾಗಲೇ ಕನಕಪುರದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಅತ್ತ ಡಿಕೆ ಶಿವಕುಮಾರ್ ಸಹ ಪ್ರಚಾರ ನಡೆಸಿದ್ದಾರೆ. ಕನಕಪುರಲ್ಲಿ ಬಂಡೆಯನ್ನು ಮಣಿಸಬೇಕೇಂಬ ಬಿಜೆಪಿ ತಂತ್ರ ಫಲಿಸುತ್ತಾ? ಡಿಕೆ ಶಿವಕುಮಾರ್ ಏನು ಪ್ರತಿದಾಳ ಉರುಳಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಮೇ 10ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, 13ರಂದು ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:07 pm, Wed, 26 April 23