ಕರ್ನಾಟಕದ ಮುಖ್ಯಮಂತ್ರಿ ಯಾರು ಎಂಬುದು ಇನ್ನೂ ನಿರ್ಧಾರವಾಗಿಲ್ಲ; ಗುರುವಾರ ಪ್ರಮಾಣ ವಚನ?

ಸಿಎಂ ಆಯ್ಕೆಗಾಗಿ ಎಐಸಿಸಿ ,ಮೂವರು ವೀಕ್ಷಕರನ್ನು ನೇಮಿಸಿದೆ. ಸುಶೀಲ್​ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್​ ಹಾಗೂ ದೀಪಕ್ ಬಬಾರಿಯಾ ಅವರನ್ನು ವೀಕ್ಷಕರನ್ನಾಗಿ ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.

ಕರ್ನಾಟಕದ ಮುಖ್ಯಮಂತ್ರಿ ಯಾರು ಎಂಬುದು ಇನ್ನೂ ನಿರ್ಧಾರವಾಗಿಲ್ಲ; ಗುರುವಾರ ಪ್ರಮಾಣ ವಚನ?
ಕರ್ನಾಟಕ ಕಾಂಗ್ರೆಸ್
Edited By: ರಶ್ಮಿ ಕಲ್ಲಕಟ್ಟ

Updated on: May 14, 2023 | 6:39 PM

ಕರ್ನಾಟಕದಲ್ಲಿ (Karnataka Assembly Election) ಬಹುಮತ ಗಳಿಸಿರುವ ಕಾಂಗ್ರೆಸ್ (Congress) ಮುಖ್ಯಮಂತ್ರಿ (Chief Minister) ಸ್ಥಾನಕ್ಕೆ ಯಾರು ಎಂಬುದರ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಆದರೆ ಗುರುವಾರ ಪ್ರಮಾಣ ವಚನ ಸಮಾರಂಭ ನಡೆಯಲಿದೆ ಎಂದು ಎನ್​​ಡಿಟಿವಿ ವರದಿ ಮಾಡಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ  135 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಆದರೆ ಮುಖ್ಯಮಂತ್ರಿ ಯಾರು ಆಗುತ್ತಾರೆ ಎನ್ನುವುದೇ ಕುತೂಹಲ ಮೂಡಿಸಿದೆ. ಒಂದೆಡೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತೊಂದೆಡೆ ಸಿದ್ದರಾಮಯ್ಯ ಅವರು ಸಿಎಂ ಹುದ್ದೆಯ ರೇಸ್​ನಲ್ಲಿದ್ದಾರೆ. ಹೀಗಾಗಿ ಸಿಎಂ ಆಯ್ಕೆಗಾಗಿ ಎಐಸಿಸಿ ,ಮೂವರು ವೀಕ್ಷಕರನ್ನು ನೇಮಿಸಿದೆ. ಸುಶೀಲ್​ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್​ ಹಾಗೂ ದೀಪಕ್ ಬಬಾರಿಯಾ ಅವರನ್ನು ವೀಕ್ಷಕರನ್ನಾಗಿ ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್ ಎಲ್ಲಾ ಸಮಾನ ಮನಸ್ಕ ಪಕ್ಷಗಳಿಗೆ ಆಹ್ವಾನ ಕಳುಹಿಸಿದೆ. ಕರ್ನಾಟಕ ಸಚಿವ ಸಂಪುಟದ ಅಂತಿಮ ರೂಪುರೇಷೆ ಒಂದೆರೆಡು ದಿನದಲ್ಲಿ ರೂಪು ಪಡೆಯಲಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ವ್ಯಕ್ತಿಗಳು ಹೇಳಿರುವುದಾಗಿ ವರದಿಯಲ್ಲಿದೆ.

224 ಸದಸ್ಯರುವ ಸದನದಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಪಡೆದು ಅಧಿಕಾರಕ್ಕೇರಿದೆ. ಮುಖ್ಯಮಂತ್ರಿ ಯಾರಾಗಬಹುದು ಎಂದು ಚರ್ಚಿಸಲು ಕಾಂಗ್ರೆಸ್ ಇಂದು ತನ್ನ ಶಾಸಕರ ಸಭೆ ಕರೆದಿದೆ.

ಇದನ್ನೂ ಓದಿ: ಕರ್ನಾಟಕ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಗಾಗಿ ವೀಕ್ಷಕರನ್ನು ನೇಮಿಸಿ ಆದೇಶ ಹೊರಡಿಸಿದ ಎಐಸಿಸಿ

ಕಾಂಗ್ರೆಸ್ ಶಾಸಕಾಂಗ ಪಕ್ಷವು (ಸಿಎಲ್‌ಪಿ) ಮುಖ್ಯಮಂತ್ರಿ ಆಯ್ಕೆಯನ್ನು ನಿರ್ಧರಿಸಲು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಿಗೆ ಬಿಡುವ ನಿರ್ಣಯವನ್ನು ಅಂಗೀಕರಿಸುವ ನಿರೀಕ್ಷೆಯಿದೆ. ಇಂದು ಯಾವುದೇ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಿಲ್ಲ, ಆದರೆ ಎಲ್ಲಾ ಶಾಸಕರ ಅಭಿಪ್ರಾಯಗಳನ್ನು ಪರಿಶೀಲಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಪೈಪೋಟಿ ಏರ್ಪಟ್ಟಿದೆ. ಈಗಾಗಲೇ ಸಿದ್ದರಾಮಯ್ಯನವರ ಬೆಂಬಲಿಗರು ಸಭೆ ಮಾಡಿದ್ದಾರೆ. ಇದರ ಬೆನ್ನಲೇ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡುವಂತೆ ಒಕ್ಕಲಿಗ ನಾಯಕರು ಮನವಿ ಮಾಡಿದ್ದು, ಈ ಬಗ್ಗೆ ಒಟ್ಟಾಗಿ ಒತ್ತಡ ಹೇರಲು ಇಂದು ಸಭೆ ಕರೆದಿದೆ. ಇವರಿಬ್ಬರ ಮಧ್ಯೆ ಡಾ.ಜಿ. ಪರಮೇಶ್ವರ್ ಅವರ ಹೆಸರು ತೇಲಿ ಬಂದಿದೆ. ಪರಮೇಶ್ವರ್ ಪರವಾಗಿ ದಲಿತ ನಾಯಕರು ಸಹ ಸಭೆ  ಮಾಡುವ ಮೂಲಕ ಸಂದೇಶ ರವಾನಿಸಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 6:08 pm, Sun, 14 May 23

Web contact

TV9 Kannada

Read More
Follow Us