ಅತಂತ್ರ ಫಲಿತಾಂಶ ಬಂದರೆ ಕುಮಾರಸ್ವಾಮಿ ಕಾಂಗ್ರೆಸ್​ಗೆ ಬೆಂಬಲ ನೀಡುತ್ತಾರೆ; ಸತೀಶ್ ಜಾರಕಿಹೊಳಿ

ಜೆಡಿಎಸ್ ಜೊತೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯ ಸುಳಿವು ನೀಡಿರುವ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಜತೆಗೂಡಿ ಸರ್ಕಾರ ರಚಿಸಲು ಹೆಚ್‌ಡಿ ಕುಮಾರಸ್ವಾಮಿ ಒಲವು ಹೊಂದಿದ್ದಾರೆ ಎಂದು ಶುಕ್ರವಾರ ಹೇಳಿದ್ದಾರೆ.

ಅತಂತ್ರ ಫಲಿತಾಂಶ ಬಂದರೆ ಕುಮಾರಸ್ವಾಮಿ ಕಾಂಗ್ರೆಸ್​ಗೆ ಬೆಂಬಲ ನೀಡುತ್ತಾರೆ; ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ

Updated on: May 12, 2023 | 5:30 PM

ಬೆಂಗಳೂರು: ಜೆಡಿಎಸ್ ಜೊತೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯ ಸುಳಿವು ನೀಡಿರುವ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಜತೆಗೂಡಿ ಸರ್ಕಾರ ರಚಿಸಲು ಹೆಚ್‌ಡಿ ಕುಮಾರಸ್ವಾಮಿ ಒಲವು ಹೊಂದಿದ್ದಾರೆ ಎಂದು ಶುಕ್ರವಾರ ಹೇಳಿದ್ದಾರೆ. ಚುನಾವಣಾ ಫಲಿತಾಂಶ ಪ್ರಕಟವಾಗಲು ಒಂದು ದಿನ ಬಾಕಿ ಇರುವಾಗಲೇ ಅವರಿಂದ ಈ ಹೇಳಿಕೆ ಮೂಡಿಬಂದಿದೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತಂತ್ರ ವಿಧಾನಸಭೆ ಸಾಧ್ಯತೆ ಇಲ್ಲ. ಒಂದು ವೇಳೆ, ಹಾಗಾದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲಿದೆ. ಅದಕ್ಕೆ ಕುಮಾರಸ್ವಾಮಿ ಬೆಂಬಲ ನೀಡಲಿದ್ದಾರೆ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷವು 2004 ಮತ್ತು 2018 ರಲ್ಲಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು ಸರ್ಕಾರವನ್ನು ರಚಿಸಿತ್ತು. ಎರಡೂ ಸಂದರ್ಭಗಳಲ್ಲಿ, ಪೂರ್ಣಾವಧಿ ಸರ್ಕಾರ ನೀಡಲು ಸಾಧ್ಯವಾಗಿರಲಿಲ್ಲ.

ಈ ಮಧ್ಯೆ, ಬಿಜೆಪಿ ನಾಯಕ ಆರ್ ಅಶೋಕ ಅವರು ಫಲಿತಾಂಶದ ನಂತರ ‘ಆಪರೇಷನ್ ಕಮಲ’ವನ್ನು ಮರುಪ್ರಾರಂಭಿಸುವ ಸುಳಿವು ನೀಡಿದ್ದರು. ಕಳೆದ ಬಾರಿಯೂ ಸೇರಿದಂತೆ ಈ ಹಿಂದೆ ಹಲವು ಬಾರಿ ಈ ತಂತ್ರದ ಮೂಲಕವೇ ಬಿಜೆಪಿಯು ರಾಜ್ಯದಲ್ಲಿ ಸರ್ಕಾರ ರಚಿಸಿದೆ.

ನಾವು ಅದನ್ನು (ಬೇರೆ ಪಕ್ಷ ಅಥವಾ ಶಾಸಕರ ಬೆಂಬಲ ಪಡೆದರೆ) ಮಾಡಿದರೆ ಅದು ಆಪರೇಷನ್ ಕಮಲ ಎನ್ನುತ್ತೀರಿ. ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಮಾಡಿದರೆ ಅದನ್ನು ಏನೆಂದು ಕರೆಯುತ್ತೀರಿ? ಬಿಜೆಪಿಯಿಂದ ಮಾತ್ರ ಸುಸ್ಥಿರ ಸರ್ಕಾರ ಕೊಡಲು ಸಾಧ್ಯ ಎಂಬುದು ರಾಜ್ಯದ ಜನತೆಗೆ ಗೊತ್ತಿದೆ. ಆದ್ದರಿಂದ, ನಾವು ಲಭ್ಯವಿರುವ ಎಲ್ಲಾ ಆಯ್ಕೆಗಳನ್ನು ನೋಡುತ್ತೇವೆ ಮತ್ತು ಕಾರ್ಯತಂತ್ರವನ್ನು ಯೋಜಿಸುತ್ತೇವೆ ಅಶೋಕ್ ಹೇಳಿದ್ದರು.

ಇದನ್ನೂ ಓದಿ: ಕಾಂಗ್ರೆಸ್​​ನ 20 ಮಂದಿ ರಾಜೀನಾಮೆ ನೀಡಿ ಬಿಜೆಪಿ ಸೇರುತ್ತಾರೆ; ಲಖನ್ ಜಾರಕಿಹೊಳಿ

ಇದಕ್ಕೆ ಪ್ರತಿಕ್ರಿಯಿಸಿರುವ ಸತೀಶ್ ಜಾರಕಿಹೊಳಿ, ಬಿಜೆಪಿ 80 ಸ್ಥಾನಗಳನ್ನು ದಾಟುವುದಿಲ್ಲ ಮತ್ತು ಆದ್ದರಿಂದ ‘ಆಪರೇಷನ್ ಕಮಲ’ ಹಗಲುಗನಸು. ಅವರಿಗೆ ಕನಿಷ್ಠ 35-40 ಸೀಟುಗಳು ಬೇಕಾಗುತ್ತವೆ. ಅಂಥ ಪರಿಸ್ಥಿತಿಯಲ್ಲಿ ‘ಆಪರೇಷನ್ ಕಮಲ’ವನ್ನು ಕಾರ್ಯಗತಗೊಳಿಸುವುದು ಅಸಾಧ್ಯ. ಅವರು ಪ್ರತಿಪಕ್ಷ ಸ್ಥಾನದಲ್ಲಿ ಕುಳಿತುಕೊಳ್ಳಬೇಕಾಗಿದೆ. ‘ಆಪರೇಷನ್ ಕಮಲ’ ಯಾವಾಗಲೂ ಯಶಸ್ವಿಯಾಗಲು ಸಾಧ್ಯವಿಲ್ಲ. ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಅವರು ಹೇಳಿದ್ದಾರೆ.

ಫಲಿತಾಂಶದ ಲೈವ್​ ಅಪ್​ಡೇಟ್​​ಗೆ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Follow Us