ಏ. 30ರಂದು ಚನ್ನಪಟ್ಟಣಕ್ಕೆ ಪ್ರಧಾನಿ ಮೋದಿ; ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಬಿಜೆಪಿ ಮಾಸ್ಟರ್ ಪ್ಲ್ಯಾನ್

|

Updated on: Apr 22, 2023 | 2:36 PM

ಹಳೇ ಮೈಸೂರು ಭಾಗದಲ್ಲಿ ಹೇಗಾದರೂ ಮಾಡಿ ಕಮಲ ಅರಳಿಸಬೇಕೆಂದು ಪಣ ತೊಟ್ಟಿರುವ ಬಿಜೆಪಿ ನಾಯಕರು, ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ನಾನಾ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯನ್ನೂ ಕೂಡ ಇದಕ್ಕಾಗಿ ಬಳಸಿಕೊಳ್ಳಲು ಮುಂದಾಗಿರುವ ಬಿಜೆಪಿ ಏಪ್ರಿಲ್ 30ರಂದು ರಾಮನಗರದಲ್ಲಿ ಬೃಹತ್ ಸಮಾವೇಶ ಆಯೋಜಿಸಲು ಮುಂದಾಗಿದೆ.

ರಾಮನಗರ: ಹಳೇ ಮೈಸೂರು ಭಾಗದಲ್ಲಿ ಹೇಗಾದರೂ ಮಾಡಿ ಕಮಲ ಅರಳಿಸಬೇಕೆಂದು ಪಣ ತೊಟ್ಟಿರುವ ಬಿಜೆಪಿ (BJP)  ನಾಯಕರು, ವಿಧಾನಸಭೆ ಚುನಾವಣೆ (Karnataka Assembly Elections) ಸಮೀಪಿಸುತ್ತಿದ್ದಂತೆಯೇ ನಾನಾ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯನ್ನೂ ಕೂಡ ಇದಕ್ಕಾಗಿ ಬಳಸಿಕೊಳ್ಳಲು ಮುಂದಾಗಿರುವ ಬಿಜೆಪಿ ಏಪ್ರಿಲ್ 30ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಬೃಹತ್ ಸಮಾವೇಶ ಆಯೋಜಿಸಲು ಮುಂದಾಗಿದೆ. ಸಮಾವೇಶದಲ್ಲಿ ಮೋದಿ ಭಾಗವಹಿಸಲಿದ್ದು, ಇದಕ್ಕಾಗಿ ಸಿದ್ಧತೆ ಭರದಿಂದ ಸಾಗಿದೆ.

ಚನ್ನಪಟ್ಟಣ ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದ ಬಳಿ ಸುಮಾರು ಮೂವತ್ತು ಎಕರೆ ಪ್ರದೇಶದಲ್ಲಿ ಸಮಾವೇಶ ನಡೆಯಲಿದೆ. ಎರಡರಿಂದ ಮೂರು ಲಕ್ಷಕ್ಕೂ ಹೆಚ್ಚು ಜನ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ವೇದಿಕೆ ನಿರ್ಮಾಣ ಕಾರ್ಯ ಈಗಾಗಲೇ ಭರದಿಂದ ಸಾಗುತ್ತಿದೆ. ಸ್ಥಳಕ್ಕೆ ತೆರಳಿರುವ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಪರಿಶೀಲನೆ ನಡೆಸಿದ್ದಾರೆ. ರಾಮನಗರ, ಮಂಡ್ಯ ಹಾಗೂ ತುಮಕೂರು ಜಿಲ್ಲೆಯ ಕುಣಿಗಲ್ ಕ್ಷೇತ್ರದ ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎನ್ನಲಾಗಿದೆ.

ಸಮಾವೇಶದ ಸಿದ್ಧತೆ ಬಗ್ಗೆ ಸಿಪಿ ಯೋಗೇಶ್ವರ್ ಮಾಹಿತಿ ನೀಡಿ, ರೋಡ್​ ಶೋ ಇರುವುದಿಲ್ಲ. ವೇದಿಕೆಯಲ್ಲಷ್ಟೇ ಸುಮಾರು ಒಂದೂವರೆಯಿಂದ ಎರಡು ಗಂಟೆಯಷ್ಟು ಸಮಯ ಸಮಾವೇಶ ನಡೆಯಲಿದೆ. ಹಳೆ ಮೈಸೂರು ಭಾಗದಲ್ಲಿ ಪಕ್ಷದ ಹೆಚ್ಚು ಅಭ್ಯರ್ಥಿಗಳು ಗೆಲ್ಲಬೇಕೆಂಬುದು ಬಿಜೆಪಿಯ ಬಯಕೆಯಾಗಿದೆ. ಕಳೆದ ತಿಂಗಳು ಪ್ರಧಾನಿ ಮೋದಿಯವರು ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​​ ವೇ ಲೋಕಾರ್ಪಣೆಗೊಳಿಸಿದ್ದರು. ಅಮಿತ್ ಶಾ ಅವರೂ ಮಂಡ್ಯ ಜಿಲ್ಲೆಯಲ್ಲಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿದ್ದರು. ವಿವಿಧ ಅಭಿಯಾನಗಳೊಂದಿಗೆ ಪಕ್ಷ ಸಂಘಟನೆ ಕೆಲಸ ನಡೆಯುತ್ತಿದೆ. ಇದರ ಮುಂದುವರಿದ ಭಾಗವಾಗಿ ಪ್ರಧಾನಿಯವರು ಚನ್ನಪಟ್ಟಣಕ್ಕೆ ಬರಲಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯರನ್ನ ವರುಣಾದಲ್ಲಿ ಮುಗಿಸಲು ಕಾಂಗ್ರೆಸ್​ನವರು ಹುನ್ನಾರ ಮಾಡಿದ್ದಾರೆಂದು ಜಗತ್ತಿಗೆ ಗೊತ್ತಿದೆ: ಸಿಎಂ ಬೊಮ್ಮಾಯಿ

ಹಳೆ ಮೈಸೂರು ಭಾಗದಲ್ಲಿ ಈಗಾಗಲೇ ಬಿಜೆಪಿ ಪರ ಅಲೆ ಸೃಷ್ಟಿಯಾಗಿದೆ. ಮುಂದಿನ ದಿನಗಳಲ್ಲಿ ಅದು ಇನ್ನಷ್ಟು ಹೆಚ್ಚಾಗಲಿದೆ. ಬಿಜೆಪಿಗೆ ಹೆಚ್ಚಿನ ಜನ ಬೆಂಬಲ ಸಿಗಲಿದೆ ಎಂದು ಯೋಗೇಶ್ವರ್ ಹೇಳಿದ್ದಾರೆ.

ಕಳೆದ ಕೆಲವು ತಿಂಗಳುಗಳಲ್ಲಿ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ 8 ಬಾರಿ ಆಗಮಿಸಿದ್ದಾರೆ. ವಿವಿಧ ಅಭಿಬವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಪಕ್ಷದ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಇದೀಗ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಅವರನ್ನು ಹಲವು ಬಾರಿ ರಾಜ್ಯಕ್ಕೆ ಕರೆಸಿಕೊಂಡು ಪ್ರಚಾರ ನಡೆಸುವ ಉದ್ದೇಶ ಬಿಜೆಪಿಯದ್ದಾಗಿದೆ. ಮೋದಿ ಅವರ ಜನಪ್ರಿಯತೆಯನ್ನು ಬಳಸಿಕೊಂಡು ರಾಜ್ಯದಲ್ಲಿ ಮರಳಿ ಅಧಿಕಾರ ಹಿಡಿಯಬೇಕೆಂದು ಬಿಜೆಪಿ ಶತಾಯಗತಾಯ ಯತ್ನಿಸುತ್ತಿದೆ. ಇದಕ್ಕಾಗಿ ಹಳೇ ಮೈಸೂರು ಭಾಗದಲ್ಲಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿವುಸುವ ಗುರಿಹಾಕಿಕೊಂಡಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:33 pm, Sat, 22 April 23