ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ತೀರ್ಮಾನ ಅಂತಿಮವಾಗಿಲ್ಲ; ರಣದೀಪ್ ಸುರ್ಜೇವಾಲ

ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಂತಿಮ ತೀರ್ಮಾನ ಆಗಿಲ್ಲ ಎಂದು ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ ಬುಧವಾರ ಮಧ್ಯಾಹ್ನ ತಿಳಿಸಿದರು. ಇದರೊಂದಿಗೆ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಮುಂದುವರಿದಂತಾಗಿದೆ.

ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ತೀರ್ಮಾನ ಅಂತಿಮವಾಗಿಲ್ಲ; ರಣದೀಪ್ ಸುರ್ಜೇವಾಲ
ರಣದೀಪ್ ಸಿಂಗ್ ಸುರ್ಜೇವಾಲ
Image Credit source: ndtv.com
Edited By:

Updated on: May 17, 2023 | 3:21 PM

ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಂತಿಮ ತೀರ್ಮಾನ ಆಗಿಲ್ಲ ಎಂದು ಕಾಂಗ್ರೆಸ್ (Congress) ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ (Randeep Surjewala) ಬುಧವಾರ ಮಧ್ಯಾಹ್ನ ತಿಳಿಸಿದರು. ಇದರೊಂದಿಗೆ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಮುಂದುವರಿದಂತಾಗಿದೆ. ಹೈಕಮಾಂಡ್ ಜತೆ ಹಲವು ಸುತ್ತಿನ ಸಭೆಗಳ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ಬಳಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸುರ್ಜೇವಾಲ, ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡಬೇಡಿ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಇಬ್ಬರೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. ಮುಖ್ಯಮಂತ್ರಿ ಆಯ್ಕೆ ಬಗ್ಗೆ ಎಐಸಿಸಿ ಅಧ್ಯಕ್ಷ ಖರ್ಗೆ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಎಂಬ ವದಂತಿಗಳು ಹರಡಿದ್ದು, ರಾಜ್ಯದ ಹಲವೆಡೆ ಸಿದ್ದರಾಮಯ್ಯ ಬೆಂಬಲಿಗರು ಸಂಭ್ರಮವನ್ನೂ ವ್ಯಕ್ತಪಡಿಸಿದ್ದರು. ಹಲವೆಡೆ ಸಂಭ್ರಮಾಚರಣೆ ಆರಂಭವಾಗಿತ್ತು. ಇದರ ಬೆನ್ನಲ್ಲೇ ಸುರ್ಜೇವಾಲ ಅವರು ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, 135 ಸ್ಥಾನ ಗಳಿಸುವ ಮೂಲಕ ಕಾಂಗ್ರೆಸ್ ಭರ್ಜರಿ ಬಹುತಮ ಗಳಿಸಿತ್ತು. ಭಾನುವಾರ ರಾತ್ರಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಲಾಗಿತ್ತು. ಅದರಲ್ಲಿ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲು ಸಾಧ್ಯವಾಗದ ಕಾರಣ ವೀಕ್ಷಕರು ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್​​ಗೆ ಮಾಹಿತಿ ರವಾನಿಸಿದ್ದರು. ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜತೆ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳಾದ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಾತುಕತೆ ನಡೆಸಿದ್ದರು. ಆದರೆ ಹಲವು ಸುತ್ತಿನ ಮಾತುಕತೆಗಳ ನಂತರವೂ ಒಮ್ಮತಕ್ಕೆ ಬರುವುದು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: ಮುಖ್ಯಮಂತ್ರಿ ಆಗಲು ಸಿದ್ಧ, ನಾನೂ 50 ಶಾಸಕರನ್ನು ಕರೆದೊಯ್ಯಬಹುದು; ಪರಮೇಶ್ವರ ಹೇಳಿಕೆಯ ಮರ್ಮವೇನು?

ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಆರೋಪ ಪಟ್ಟಿ!

ಮಂಗಳವಾರ ರಾತ್ರಿ ಮಲ್ಲಿಕಾರ್ಜುನ ಖರ್ಗೆ ಜತೆ ಸಮಾಲೋಚನೆ ನಡೆಸಿದ್ದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಕಾಂಗ್ರೆಸ್​ಗೆ ಬಂದಾಗಿನಿಂದ ಈವರೆಗೆ ನಡೆದಿರುವ ಸಂಪೂರ್ಣ ರಾಜಕೀಯ ಚಿತ್ರಣವನ್ನು ಖರ್ಗೆ ಮುಂದಿಟ್ಟಿದ್ದರು. ಸಮ್ಮಿಶ್ರ ಸರ್ಕಾರ ಪತನವನ್ನೇ ಟ್ರಂಪ್ ಕಾರ್ಡ್ ಮಾಡಿರುವ ಡಿಕೆ ಶಿವಕುಮಾರ್, 2021ರಲ್ಲಿ ಸರ್ಕಾರ ಬೀಳಲು ಕಾರಣ ಯಾರೆಂದು ನಿಮಗೆ ತಿಳಿದಿದೆ. ಚಾಮುಂಡೇಶ್ವರಿ ಉಪಚುನಾವಣೆಯಲ್ಲಿ ಸಿದ್ದರಾಮಯ್ಯ ಗೆಲುವಿಗೆ ನಾನೇ ಕಾರಣ. ವಿಧಾನಸಭೆ, ಲೋಕಸಭಾ ಚುನಾವಣೆಯಲ್ಲಿ ಸೋಲಿನ ಬಳಿಕ ಪಕ್ಷ ಕಟ್ಟಿದ್ದೇನೆ ಎಂದು ಖರ್ಗೆ ಬಳಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿದ್ದವು. ದಲಿತರೆಲ್ಲರೂ ಸಿದ್ದರಾಮಯ್ಯ ಹಿಂದೆ ಇದ್ದಾ ಎಂಬುದು ನಿಮಗೆ ತಿಳಿದಿಲ್ವಾ? ನೀವೇ ಹೇಳಿ ಎಂದು ಮಲ್ಲಿಕಾರ್ಜುನ ಖರ್ಗೆ ಅವರನ್ನೇ ಡಿಕೆಶಿ ಪ್ರಶ್ನಿಸಿದ್ದರು. ಈ ಬಾರಿ ಒಕ್ಕಲಿಗ ಹಾಗೂ ಲಿಂಗಾಯತ ಮತಗಳು ನಮ್ಮ ಕೈ ಹಿಡಿದಿವೆ. ಇದನ್ನು ಪರಿಗಣಿಸಿ ಈ ಬಾರಿ ನನಗೆ ಅವಕಾಶ ನೀಡಲೇಬೇಕೆಂದು ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ ಎನ್ನಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:01 pm, Wed, 17 May 23

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us