ಏಪ್ರಿಲ್ 26ರಂದು ಕರ್ನಾಟಕಕ್ಕೆ ಬುಲ್ಡೋಜರ್ ಖ್ಯಾತಿಯ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭೇಟಿ

|

Updated on: Apr 24, 2023 | 8:42 PM

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಪ್ರಚಾರ ನಡೆಸಲು ಕೇಂದ್ರ ಬಿಜೆಪಿಯ ಘಟಾನುಘಟಿ ನಾಯಕರು ಆಗಮಿಸುತ್ತಿದ್ದಾರೆ. ಮೋದಿ, ಅಮಿತ್ ಶಾ ಬೆನ್ನಲ್ಲೇ ಇದೀಗ ಯುಪಿ ಸಿಎಂ ಯೋಗಿ ಆದಿತ್ಯನಾಥ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಏಪ್ರಿಲ್ 26ರಂದು ಕರ್ನಾಟಕಕ್ಕೆ ಬುಲ್ಡೋಜರ್ ಖ್ಯಾತಿಯ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭೇಟಿ
ಯೋಗಿ ಆದಿತ್ಯನಾಥ್, ರಾಜನಾಥ್ ಸಿಂಗ್, ನಿರ್ಮಲಾ ಸೀತರಾಮಾನ್ ಕರ್ನಾಟಕ ಭೇಟಿ
Follow us on

ವಿಜಯಪುರ: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನೆಲೆ ರಾಜ್ಯದಲ್ಲಿ ಪ್ರಚಾರ ನಡೆಸಲು ಕೇಂದ್ರ ಬಿಜೆಪಿಯ ಘಟಾನುಘಟಿ ನಾಯಕರು ಆಗಮಿಸುತ್ತಿದ್ದಾರೆ. ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಬೆನ್ನಲ್ಲೇ ಇದೀಗ ಯುಪಿ ಸಿಎಂ ಯೋಗಿ ಆದಿತ್ಯನಾಥ್ (Yogi Adityanath), ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಹಾಗೂ ನಿರ್ಮಲಾ ಸೀತಾರಾಮನ್ (Nirmala Sitharaman) ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಹೌದು, ಏಪ್ರಿಲ್ 26ರಂದು ಮೂವರು ನಾಯಕರು ವಿಜಯಪುರ, ಬೆಳಗಾವಿ, ಬಾಗಲಕೋಟೆ, ಕಲಬುರಗಿ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ನಡೆಸಲಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಜಯಪುರ ಜಿಲ್ಲೆಗೆ ಆಗಮಿಸುತ್ತಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್ 26ರ ಮಧ್ಯಾಹ್ನ 2.30ಕ್ಕೆ ಬಸವನಬಾಗೇವಾಡಿಗೆ ಆಗಮಿಸಲಿರುವ ಯೋಗಿ ಆದಿತ್ಯನಾಥ್, 2.40ಕ್ಕೆ ಮೂಲನಂದೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ನಂತರ ಜೈನಾಪುರ ರಸ್ತೆಯಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಬಿಜೆಪಿ ಅಭ್ಯರ್ಥಿ ಎಸ್.ಕೆ.ಬೆಳ್ಳುಬ್ಬಿ ಪರ ಮತಯಾಚನೆ ನಡೆಸಲಿದ್ದಾರೆ. ಸಂಜೆ 5.50ಕ್ಕೆ ಇಂಡಿ ಪಟ್ಟಣದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿ ಬಿಜೆಪಿ ಅಭ್ಯರ್ಥಿ ಕಾಸುಗೌಡ ಬಿರಾದರ್​ ಪರ ಮತಯಾಚನೆ ನಡೆಸಲಿದ್ದಾರೆ. ಅಲ್ಲಿಂದ ಮಹಾರಾಷ್ಟ್ರದ ಸೊಲ್ಲಾಪುರ ಮಾರ್ಗವಾಗಿ ಲಖನೌಗೆ ಪ್ರಯಾಣ ಬೆಳೆಸಲಿದ್ದಾರೆ.

ಇದನ್ನೂ ಓದಿ: PM Narendra Modi: ಎಲ್ಲ ಸಮುದಾಯ ಗೌರವಿಸುವ ಗುಣಕ್ಕೆ ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಧಾರ್ಮಿಕ ಮುಖಂಡರು

ರಾಜನಾಥ್​ ಸಿಂಗ್ ಬೆಳಗಾವಿ, ಬಾಗಲಕೋಟೆ ಜಿಲ್ಲಾ ಪ್ರವಾಸ

ವಿಜಯಪುರದಲ್ಲಿ ಯೋಗಿ ಆದಿತ್ಯನಾಥ್ ಪ್ರಚಾರ ಕೈಗೊಂಡರೆ, ಇತ್ತ ಬೆಳಗಾವಿಯಲ್ಲಿ ಅದೇ ದಿನ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಪ್ರವಾಸ ಕೈಗೊಳ್ಳಲಿದ್ದಾರೆ. ಏ.26ರ ಬೆಳಗ್ಗೆ 11ಕ್ಕೆ ಬೆಳಗಾವಿ ಜಿಲ್ಲೆ ಕಾಗವಾಡದಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾದ ನಂತರ ರಾಜನಾಥ್ ಸಿಂಗ್ ಅವರು ಮಧ್ಯಾಹ್ನ 1.15ಕ್ಕೆ ಬೈಲಹೊಂಗಲ ಸಮಾವೇಶದಲ್ಲಿ ಪಾಲ್ಗೊಂಡು ಪ್ರಚಾರ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಸಮಾವೇಶ ನಡೆಸಿ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ನಡೆಸಲಿದ್ದಾರೆ. ನಂತರ ದೆಹಲಿಗೆ ತೆರಳಲಿದ್ದಾರೆ.

ನಿರ್ಮಲಾ ಸೀತಾರಾಮ್ ಕಲಬುರಗಿ ಜಿಲ್ಲಾ ಪ್ರವಾಸ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಏಪ್ರಿಲ್ 26ರಂದು ಕಲಬುರಗಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ಕಲಬುರಗಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ನಂತರ ವಿತ್ತಸಚಿವರು 11 ಗಂಟೆಗೆ ನಡೆಯುವ ಪ್ರಬುದ್ಧರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಂವಾದ ನಡೆಸಲಿದ್ದಾರೆ. ಮಧ್ಯಾಹ್ನ 12.45ಕ್ಕೆ ಅಳಂದದಲ್ಲಿ ನಡೆಯುವ ಮಹಿಳಾ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ನಂತರ ಮಧ್ಯಾಹ್ನ 3 ಗಂಟೆಗೆ ಕಲಬುರಗಿ ನಗರದಲ್ಲಿ ನಡೆಯುವ ಮಹಿಳಾ ಸಮಾವೇಶದಲ್ಲಿ ಹಾಗೂ ಸಂಜೆ 4 ಗಂಟೆಗೆ ನಡೆಯುವ ಕಲಬುರಗಿ ದಕ್ಷಿಣ ಕ್ಷೇತ್ರದಲ್ಲಿ ಮಹಾ ಸಂಪರ್ಕ ಅಭಿಯಾನದಲ್ಲಿ ಮನೆ ಮನೆ ಭೇಟಿ ನೀಡಲಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ