ವಿಜಯಪುರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ: ತಲೆಕೆಳಗಾದ ಬಿಜೆಪಿ ಅಭ್ಯರ್ಥಿ ಯತ್ನಾಳ್​ ಲೆಕ್ಕಾಚಾರ

ಮತದಾನಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗಲೇ ಜೆಡಿಎಸ್ ಅಭ್ಯರ್ಥಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಬಿಜೆಪಿ ಅಭ್ಯರ್ಥಿಯ ಲೆಕ್ಕಾಚಾರಗಳು ತಲೆಕೆಳಗಾಗಿದೆ.

ವಿಜಯಪುರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ: ತಲೆಕೆಳಗಾದ ಬಿಜೆಪಿ ಅಭ್ಯರ್ಥಿ ಯತ್ನಾಳ್​ ಲೆಕ್ಕಾಚಾರ
ಬಸನಗೌಡ ಪಾಟೀಲ್ ಯತ್ನಾಳ್
Follow us
|

Updated on: Apr 30, 2023 | 4:30 PM

ವಿಜಯಪುರ: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣಾ (Karnataka Assembly Elections 2023) ಪ್ರಚಾರ ರಂಗೇರುತ್ತಿದೆ. ವಿವಿಧ ರಾಜಕೀಯ ಪಕ್ಷಗಳ ನಾಯಕರು ರೋಡ್ ಶೋ, ಮೆರವಣಿಗೆ, ಪಾದಯಾತ್ರೆ, ಸಮಾವೇಶ ಹಾಗೂ ಸಾರ್ವಜನಿಕರ ಸಭೆಗಳ ಮೂಲಕ ಬಿರುಸಿನ ಮತಯಾಚನೆಯಲ್ಲಿ ತೊಡಗಿದ್ದಾರೆ. ಇದರ ಮಧ್ಯೆ ವಿಜಯಪುರದಲ್ಲಿ (Vijayapura) ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದೆ. ಮತದಾನಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗಲೇ ಜೆಡಿಎಸ್ ಅಭ್ಯರ್ಥಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಅಲ್ಲದೇ ಕಾಂಗ್ರೆಸ್​ಗೆ ಬೆಂಬಲ ಘೋಷಿಸಿದ್ದಾರೆ. ಜೆಡಿಎಸ್​ ಅಭ್ಯರ್ಥಿಯ ನಡೆಯಿಂದ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ್ ಯತ್ನಾಳ್​ ವೋಟಿಂಗ್ ಲೆಕ್ಕಾಚಾರ ತಲೆಕೆಳಗಾಗಿದೆ.

ಇದನ್ನೂ ಓದಿ: ಕೊನೆ ಕ್ಷಣದಲ್ಲಿ ನಾಮಪತ್ರ ವಾಪಸ್ ಪಡೆದ ಮತ್ತೋರ್ವ ಜೆಡಿಎಸ್ ಅಭ್ಯರ್ಥಿ, ಪಕ್ಷದಿಂದ ಉಚ್ಚಾಟನೆಗೆ ತೀರ್ಮಾನ

ವಿಜಯಪುರ ನಗರದ ಕ್ಷೇತ್ರದಲ್ಲಿ ಜೆಡಿಎಸ್​ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಬಂದೇನವಾಜ್ ಮಹಾಬರಿ ಅವರು ಇದೀಗ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಅಲ್ಲದೇ ಕಾಂಗ್ರೆಸ್ ಅಭ್ಯರ್ಥಿ ನಿಂದ ಅಬ್ದುಲ್ ಹಮೀದ್ ಮುಶ್ರೀಫ್​ಗೆ ಬೆಂಬಲ ಘೋಷಿಸಿದ್ದಾರೆ. ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಬಂದೇನವಾಜ್ ಮಹಾಬರಿ, ನಗರ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಸಂಘಟನೆ ಇಲ್ಲ, ಕಾರ್ಯಕರ್ತರ ಪಡೆ ಇಲ್ಲ. ಎರಡು ದಿನ ಪ್ರಚಾರ ನಡೆಸಿದಾಗ ಯಾವುದೇ ಉತ್ತಮ ಪ್ರತಿಕ್ರಿಯೆ ಸಿಕ್ಕಿಲ್ಲ. ಹೀಗಾಗಿ ಕಣದಿಂದ ಹಿಂದಕ್ಕೆ ಸರಿದಿದ್ದೇನೆ. ವಿಜಯಪುರ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್​ಗೆ ಬೆಂಬಲ ನೀಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ನನ್ನ ಮೇಲೆ ಯಾವುದೇ ಒತ್ತಡವಿಲ್ಲ, ಸ್ವಯಂ ಪ್ರೇರಣೆಯಿಂದ ಕಣದಿಂದಕ್ಕೆ ಹಿಂದಕ್ಕೆ ಸರಿದಿದ್ದೇನೆ. ಈ ಹಿಂದೆ ಬಸನಗೌಡ ಪಾಟೀಲ್ ಯತ್ನಾಳ್ ಜೆಡಿಎಸ್ ಪಕ್ಷ ಸೇರಿ ಸಂಘಟನೆಯನ್ನ ಹಾಳು ಮಾಡಿದ್ದಾರೆ. ಹೀಗಾಗಿ ಕ್ಷೇತ್ರದಲ್ಲಿ ಜೆಡಿಎಸ್​ ಸಂಘಟನೆ ಇಲ್ಲ ಎಂದು ಕಿಡಿಕಾರಿದರು.

ಕೈ ಕೊಟ್ಟ ಯತ್ನಾಳ್ ಲೆಕ್ಕಾಚಾರ

ಹೌದು..ವಿಜಯಪುರ ನಗರ ಮುಸ್ಲಿಂ ಬಾಹುಳ್ಯದ​ ಕ್ಷೇತ್ರವಾಗಿದ್ದು, ಜೆಡಿಎಸ್​ ಹಾಗೂ ಕಾಂಗ್ರೆಸ್​​ನಿಂದ ಮುಸ್ಲಿಂ ಅಭ್ಯರ್ಥಿಗಳು ಕಣಕ್ಕಿಳಿದಿದ್ದರು. ಹೀಗಾಗಿ ಅಧಿಕವಾಗಿರುವ ಮುಸ್ಲಿಂ ಮತಗಳು ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಡಿವೈಡ್ ಆಗಲಿದ್ದು, ತಮ್ಮ ಗೆಲುವಿಗೆ ಸಹಕಾರಿಯಾಗಲಿದೆ ಎನ್ನುವ ವಿಶ್ವಾಸದಲ್ಲಿ ಯತ್ನಾಳ್ ಇದ್ದರು. ಆದ್ರೆ, ಇದೀಗ ಜೆಡಿಎಸ್ ಅಭ್ಯರ್ಥಿ ಬಂದೇನವಾಜ್ ಮಹಾಬರಿ ಕೊನೆ ಕ್ಷಣದಲ್ಲಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದು, ಕಾಂಗ್ರೆಸ್​​ಗೆ ಬೆಂಬಲ ಘೋಷಿಸಿದ್ದಾರೆ. ಇದರೊಂದಿಗೆ ಮುಸ್ಲಿಂ ಮತಗಳೊಂದಿಗೆ ಇತರೆ ಎಸ್​ಸಿ, ಎಸ್ಟಿ ಸೇರಿದಂತೆ ಇತರೆ ಸಮುದಾಯಗಳ ಅಲ್ಪ-ಸ್ವಲ್ಪ ಮಯತಗಳನ್ನು ಕಾಂಗ್ರೆಸ್ ಅಭ್ಯರ್ಥಿ ತೆಗೆದುಕೊಂಡರೆ ಯತ್ನಾಳ್​ಗೆ ಗೆಲುವು ಕಷ್ಟವಾಗಲಿದೆ. ಇದರಿಂದ ಬಿಜೆಪಿ ಅಭ್ಯರ್ಥಿ ಯತ್ನಾಳ್ ಅವರ ವೋಟಿಂಗ್ ಲೆಕ್ಕಾಚಾರ ತಲೆಕೆಳಗಾಗಿದೆ.

​ವಿಜಯಪುರ ನಗರ ಕ್ಷೇತ್ರದಲ್ಲಿ ಇತ್ತೀಚಿನ ಮಾಹಿತಿಯಂತೆ 2,62,645 ಮತದಾರರು ಇದ್ದು, ಮುಸ್ಲಿಮರು 67 ಸಾವಿರ, ಲಿಂಗಾಯಿತರು 53 ಸಾವಿರ, ಎಸ್‌ಸಿ ಎಸ್‌ಟಿ ಸಮುದಾಯದ 37 ಸಾವಿರ, ಗಾಣಿಗರು 20 ಸಾವಿರ, ಬ್ರಾಹ್ಮಣರು 15 ಸಾವಿರ ಮತದಾರರಿದ್ದಾರೆ. 67 ಸಾವಿರ ಇರುವ ಅಲ್ಪಸಂಖ್ಯಾತ ಮತಗಳನ್ನು ಜೆಡಿಎಸ್ ಹಾಗೂ ಕಾಂಗ್ರೆಸ್​ ಪಕ್ಷದ ಮುಸ್ಲಿಂ ಅಭ್ಯರ್ಥಿಗಳ ನಡುವೆ ಹರಿದು ಹಂಚಿಕೆಯಾಗಲಿದ್ದು, ಇನ್ನುಳಿದಂತೆ ಹಿಂದೂಗಳ ಮತಗಳನ್ನು ತೆಗೆದುಕೊಂಡರೆ ಸಾಕು ಎನ್ನುವ ಲೆಕ್ಕಾಚಾರದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಇದ್ದರು.

ಅಲ್ಪ ಮತಗಳ ಅಂತರದಲ್ಲಿ ಗೆದ್ದಿದ್ದ ಯತ್ನಾಳ್

2013ರಲ್ಲಿ ಕಾಂಗ್ರೆಸ್‌ನ ಮಕ್ಬುಲ್‌ ಎಸ್‌ ಭಗವಾನ್‌ 48,615 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರೆ, ಈಗ ಬಿಜೆಪಿ ಶಾಸಕರಾಗಿರುವ ಬಸನಗೌಡ ಪಾಟೀಲ್‌ ಯತ್ನಾಳ್‌ ಜೆಡಿಎಸ್‌ನಿಂದ ಸ್ಪರ್ಧಿಸಿ 39,235 ಮತ ಪಡೆದು ಸೋಲು ಅನುಭವಿಸಿದ್ದರು. ಬಿಜೆಪಿಯಿಂದ ಅಪ್ಪು ಪಟ್ಟಣಶೆಟ್ಟಿ ಅವರು 26,235 ಮತ ಪಡೆದು ತೀವ್ರ ಫೈಟ್‌ ನೀಡಿದ್ದರು. ಬಳಿಕ 2018ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಸನಗೌಡ ಪಾಟೀಲ್‌ ಯತ್ನಾಳ್‌ 76,308 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನ ಅಬ್ದುಲ್‌ ಹಮೀದ್‌ ಮುಷ್ರಿಫ್‌ 69,895 ಮತ ಪಡೆಯುವುದರೊಂದಿಗೆ ಸೋಲು ಅನುಭವಿಸಿದ್ದರು.  ಯತ್ನಾಳ್ ಕೇವಲ 6413 ಮತಗಳ ಅಂತರದಲ್ಲಿ ಮಾತ್ರ ಗೆಲುವು ಸಾಧಿಸಿದ್ದರು. ಇದೀಗ ಜೆಡಿಎಸ್​ ಸಹ ಕಾಂಗ್ರೆಸ್​ ಜೊತೆ ಕೈಜೋಡಿಸಿದ್ದು, ರಾಜಕೀಯ ಮತ್ತಷ್ಟು ರಂಗೇರಿದೆ.

ಒಟ್ಟಿನಲ್ಲಿ ಜೆಡಿಎಸ್ ಅಭ್ಯರ್ಥಿ ಕಾಂಗ್ರೆಸ್​ಗೆ ಬೆಂಬಲಿಸಿದ್ದು, ಅಂತಿಮವಾಗಿ ಫಲಿತಾಂಶ ಏನಾಗಲಿದೆ ಎನ್ನುವುದನ್ನು ಮೇ 13ರಂದು ಸ್ಪಷ್ಟ ಚಿತ್ರಣ ತಿಳಿಯಲಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ