ಕಾಂಗ್ರೆಸ್​ ಸೇರ್ಪಡೆಯಾಗಿದ್ದು ತಪ್ಪಾಯ್ತು, ಪಕ್ಷಕ್ಕೆ ರಾಜೀನಾಮೆ ನೀಡುವುದು ಅಷ್ಟೇ ಬಾಕಿ ಎಂದ ದತ್ತಾ

ಟಿಕೆಟ್​ ಕೈತಪ್ಪಿದ್ದಕ್ಕೆ ಸಿಡಿದೆದ್ದಿರುವ ವೈಎಸ್​ವಿ ದತ್ತಾ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ತೀರ್ಮಾನಿಸಿದ್ದಾರೆ. ಅಲ್ಲದೇ ಕಾಂಗ್ರೆಸ್​ಗೆ ಒಂದು ಬಿಗ್​ ಶಾಕ್ ಕೊಟ್ಟಿದ್ದಾರೆ.

ಕಾಂಗ್ರೆಸ್​ ಸೇರ್ಪಡೆಯಾಗಿದ್ದು ತಪ್ಪಾಯ್ತು, ಪಕ್ಷಕ್ಕೆ ರಾಜೀನಾಮೆ ನೀಡುವುದು ಅಷ್ಟೇ ಬಾಕಿ ಎಂದ ದತ್ತಾ
YSV Datta

Updated on: Apr 09, 2023 | 5:38 PM

ಮುಖ್ಯಾಂಶಗಳು

  • ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವುದು ಅಷ್ಟೇ ಬಾಕಿ ಇದೆ
  • ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ವೈಎಸ್​ವೈ ದತ್ತಾ ಹೇಳಿಕೆ
  • ಕಾಂಗ್ರೆಸ್​ ಸೇರ್ಪಡೆಯಾಗಿದ್ದು ತಪ್ಪಾಯ್ತು ಎಂದ ವೈಎಸ್​ವೈ ದತ್ತಾ

ಚಿಕ್ಕಮಗಳೂರು: ಕಾಂಗ್ರೆಸ್​ ಟಿಕೆಟ್​ ಕೈತಪ್ಪಿದ್ದಕ್ಕೆ ತೀವ್ರ ಅಸಮಾಧಾನಗೊಂಡಿರುವ ವೈಎಸ್​ವಿ ದತ್ತಾ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ. ಇಂದು(ಏಪ್ರಿಲ್ 09) ಕಡೂರಿನಲ್ಲಿ ನಡೆದ ಅಭಿಮಾನಿಗಳ ಸಭೆಯಲ್ಲಿ ದತ್ತಾ ಅವರು ಟವಲ್​ ಗುರುತಿನಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಯಿಸಿದ ದತ್ತಾ, ಕಾಂಗ್ರೆಸ್​ ಸೇರ್ಪಡೆಯಾಗಿದ್ದು ತಪ್ಪಾಗಿದೆ. ಈ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವುದು ಅಷ್ಟೇ ಬಾಕಿ ಇದೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಕಾಂಗ್ರೆಸ್​ ವಿರುದ್ಧ ಸ್ವಾಭಿಮಾನಿ ಕಹಳೆ ಮೊಳಗಿಸಿದ ದತ್ತಾ, ಟವಲ್ ಗುರುತಿನಿಂದ ಸ್ಪರ್ಧೆ ಮಾಡುವುದಾಗಿ ಘೋಷಣೆ

ಕಡೂರಿನಲ್ಲಿ ಮಾತನಾಡಿದ ದತ್ತಾ, ಕಾಂಗ್ರೆಸ್​ ಸೇರ್ಪಡೆಯಾಗಿದ್ದು ತಪ್ಪಾಗಿದೆ. ಈ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವುದು ಅಷ್ಟೇ ಬಾಕಿ ಇದೆ. ಅಭಿಮಾನಿಗಳು ಪಕ್ಷೇತರರಾಗಿ ನಿಲ್ಲುವಂತೆ ಹೇಳಿದ್ದಾರೆ. ಈ ಹಿಂದೆ ಕಾಂಗ್ರೆಸ್​​ ಪಕ್ಷ ಸೇರ್ಪಡೆಯಾಗುವಂತೆ ಅಭಿಮಾನಿಗಳೇ ಹೇಳಿದ್ದರು. ಹೀಗಾಗಿ ನಾನು ಕಾಂಗ್ರೆಸ್​ ಸೇರ್ಪಡೆಯಾಗಿದ್ದೆ. ಮುಂದಿನ ತೀರ್ಮಾನ ಎಲ್ಲವೂ ನನ್ನ ಅಭಿಮಾನಿಗಳು ಕೈಗೊಳ್ಳುತ್ತಾರೆ. ದೊಡ್ಡ ನಾಯಕರ ಬಗ್ಗೆ ಚರ್ಚೆ ಮಾಡುವಷ್ಟು ನಾನು ದೊಡ್ಡವನಲ್ಲ ಎಂದು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಡೂರು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ದತ್ತಾ ಸ್ಪರ್ಧೆ ವಿಚಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಅವರು ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಟಿಕೆಟ್​ ಕೊಡುತ್ತೇವೆ ಎಂದು ಷರತ್ತು ಹಾಕಿ ಪಕ್ಷಕ್ಕೆ ಸೇರಿಸಿಕೊಂಡಿರಲಿಲ್ಲ. YSV ದತ್ತಾ ಕಾಂಗ್ರೆಸ್ ಸೇರಬೇಕಾದರೆ ಏನು ಮಾತಾಡಿದ್ದರೆಂದು ಅದನ್ನು ಗಮನಿಸಿ ಅವರಿಗೆ ಪಕ್ಷದಲ್ಲಿ ಒಳ್ಳೆಯ ಸ್ಥಾನಮಾನ ಕೊಡಬೇಕು, ಕೊಡುತ್ತೇವೆ ಎಂದರು.

ಇನ್ನು ಇದೇ ವಿಚಾರವಾಗಿ ಮಂಗಳೂರಿನಲ್ಲಿ ರಾಜ್ಯಸಭಾ ಸದಸ್ಯ L.N.ಹನುಮಂತಯ್ಯ ಮಾಧ್ಯಮಗಳ ಜೊತೆ ಮಾತನಾಡಿದ್ದು,ಬಂಡಾಯ ಅಭ್ಯರ್ಥಿಗಳನ್ನು ಕರೆದು ಮಾತುಕತೆ ನಡೆಸಲಾಗುತ್ತಿದೆ. ಅಧಿಕಾರಕ್ಕೆ ಬಂದ ಮೇಲೆ ಬೇರೆ ಅವಕಾಶ ಮಾಡಿಕೊಡಲಾಗುತ್ತದೆ. ಒಂದೆರಡು ಕಡೆ ಪಕ್ಷೇತರವಾಗಿ ನಿಲ್ಲುವ ಬಗ್ಗೆ ಘೋಷಣೆ ಮಾಡಿದ್ದಾರೆ. ದತ್ತಾರನ್ನು ಸೇರಿಸಿಕೊಳ್ಳುವಾಗ ಟಿಕೆಟ್​ ಕೊಡುತ್ತೇವೆ ಎಂದು ಹೇಳಿರಲಿಲ್ಲ. ಆದರೆ ದತ್ತಾಗೆ ಟಿಕೆಟ್​​ ಸಿಗಬಹುದು ಎಂದು ಅಂದಾಜಿಸಲಾಗಿತ್ತು ಎಂದರು.

ಟಿಕೆಟ್ ಭರವಸೆ ಮೇಲೆ ಕಾಂಗ್ರೆಸ್ ಸೇರಿದ್ದ ದತ್ತಾ

ಟಿಕೆಟ್ ಭರವಸೆ ನೀಡಿಯೇ ದತ್ತಾ ಅವರನ್ನು ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಆದರೆ, ಕೊನೆಯ ಗಳಿಗೆಯಲ್ಲಿ ಟಿಕೆಟ್ ತಪ್ಪಿದ್ದು, ಕಾಂಗ್ರೆಸ್ ಹೈಕಮಾಂಡ್​ ಆನಂದ್ ಕೆಎಸ್ (Anand KS) ಅವರಿಗೆ ಟಿಕೆಟ್ ನೀಡಿದೆ. ಇದರಿಂದ ದತ್ತಾ ಭಾರೀ ನಿರಾಸೆಯಾಗಿದೆ. ಟಿಕೆಟ್ ‌ನೀಡದೆ ಇರಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೊತೆಗಿನ ಮುನಿಸು ಕಾರಣ ಎಂಬ ಮಾತೂ ಕೇಳಿಬರುತ್ತಿದೆ. ಆದರೆ ಕನಿಷ್ಠ ದತ್ತಾ ಅವರ ಜೊತೆಗೆ ಮಾತುಕತೆ ನಡೆಸುವ ಸೌಜನ್ಯವನ್ನೂ ಕಾಂಗ್ರೆಸ್ ನಾಯಕರು‌ ತೋರಿಸಿಲ್ಲ ಎಂಬ ಆಕ್ರೋಶಗಳು ವ್ಯಕ್ತವಾಗಿವೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕುರಿತು ವೈಎಸ್‌ವಿ ದತ್ತಾ ಮಾತನಾಡಿದ್ದಾರೆ ಎನ್ನಲಾಗಿದ್ದ ಆಡಿಯೋ ವೈರಲ್‌ ಆಗಿತ್ತು. ಆ ಆಡಿಯೋದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಡಿಕೆ ಶಿವಕುಮಾರ್‌ ಹೊರೆ, ಅವರನ್ನು ಸಮರ್ಥನೆ ಮಾಡಲು ಆಗಲ್ಲ ಎಂದು ವೈಎಸ್‌ವಿ ದತ್ತಾ ಹೇಳಿದ್ದರು ಎನ್ನಲಾಗಿತ್ತು. ಈ ಹಿನ್ನೆಲೆ ಕಾಂಗ್ರೆಸ್‌ ಟಿಕೆಟ್‌ ತಪ್ಪಿದೆ ಎನ್ನಲಾಗಿದೆ. ಇದೀಗ ದತ್ತಾ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಘೋಷಿಸಿದ್ದಾರೆ. ಅಲ್ಲದೇ ಕಾಂಗ್ರೆಸ್​ಗೆ ರಾಜೀನಾಮೆ ನೀಡುವ ಬಗ್ಗೆ ನಿರ್ಧಿರಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:38 pm, Sun, 9 April 23

Loading...
Unable to load recommendations.
Follow Us