Assembly Election Results 2022: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ

ಮಾರ್ಚ್ 10 ರಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮತಗಳ ಎಣಿಕೆಯಲ್ಲಿ ಮೊದಲು ಬ್ಯಾಲೆಟ್ ಪೇಪರ್ ಮತಗಳನ್ನು ಎಣಿಕೆ ಮಾಡಲಾಗುವುದು, ನಂತರ ಇವಿಎಂ ಮತಗಳನ್ನು ಎಣಿಕೆ ಮಾಡಲಾಗುತ್ತದೆ.

Assembly Election Results 2022: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ
ಪ್ರಾತಿನಿಧಿಕ ಚಿತ್ರ
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Mar 10, 2022 | 6:43 AM

ಐದು ರಾಜ್ಯಗಳಾದ ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರದಲ್ಲಿ ನಡೆದ ವಿಧಾನಸಭಾ ಚುನಾವಣೆಗಳ (Assembly Election) ಮತ ಎಣಿಕೆ (Counting Votes) ಗುರುವಾರ (ಮಾರ್ಚ್ 10) ನಡೆಯಲಿದ್ದು, ಪ್ರಸ್ತುತ ನಾಲ್ಕು ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಮತ್ತು ಪಂಜಾಬ್‌ನಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷದ  ಭವಿಷ್ಯ ಸಂಜೆ ವೇಳೆಗೆ ನಿರ್ಧಾರವಾಗಲಿದೆ. ಮಾರ್ಚ್ 10 ರಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮತಗಳ ಎಣಿಕೆಯಲ್ಲಿ ಮೊದಲು ಬ್ಯಾಲೆಟ್ ಪೇಪರ್ ಮತಗಳನ್ನು ಎಣಿಕೆ ಮಾಡಲಾಗುವುದು, ನಂತರ ಇವಿಎಂ ಮತಗಳನ್ನು ಎಣಿಕೆ ಮಾಡಲಾಗುತ್ತದೆ. ಉತ್ತರ ಪ್ರದೇಶ ಮತ್ತು ಮಣಿಪುರದಲ್ಲಿ ಬಿಜೆಪಿಗೆ ಸ್ಪಷ್ಟ ಗೆಲುವು, ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಉತ್ತರಾಖಂಡ ಮತ್ತು ಗೋವಾದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಐದು ರಾಜ್ಯಗಳ ಮತ ಎಣಿಕೆ ಪ್ರಾರಂಭವಾಗುತ್ತಿದ್ದಂತೆ, ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್ – http://www.eci.gov.in ನಲ್ಲಿ ಫಲಿತಾಂಶಗಳು ಲಭ್ಯವಿರುತ್ತವೆ.

ಉತ್ತರ ಪ್ರದೇಶ

ಫೆಬ್ರವರಿ 10 ಮತ್ತು ಮಾರ್ಚ್ 7 ರ ನಡುವೆ ಏಳು ಹಂತಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತಗಳ ಎಣಿಕೆ ನಡೆಯಲಿದ್ದು ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಸರ್ಕಾರದ ಭವಿಷ್ಯ ನಿರ್ಧಾರವಾಗಲಿದೆ. ಹಲವಾರು ಪಕ್ಷಗಳುಕಣದಲ್ಲಿದ್ದರೂ, ಈ ಚುನಾವಣೆಗಳು ಬಿಜೆಪಿ ಮತ್ತು ಸಮಾಜವಾದಿ ಪಕ್ಷದ ನಡುವಿನ ಪ್ರತಿಷ್ಠೆಯ ಕದನ ಎಂದು ಪರಿಗಣಿಸಲಾಗಿದೆ.   ಮೊದಲ ಹಂತದಲ್ಲಿ 623, ಎರಡನೇ ಹಂತದಲ್ಲಿ 586, ಮೂರನೇ ಹಂತದಲ್ಲಿ 627, ನಾಲ್ಕನೇಯಲ್ಲಿ 624, ಐದನೇಯಲ್ಲಿ 692, ಆರನೇಯಲ್ಲಿ 676 ಮತ್ತು ಏಳನೇ ಮತ್ತು ಕೊನೆಯ ಹಂತದ ಮತದಾನದಲ್ಲಿ 613 ಅಭ್ಯರ್ಥಿಗಳಿದ್ದು 4,441 ಅಭ್ಯರ್ಥಿಗಳ ಭವಿಷ್ಯವನ್ನು ಫಲಿತಾಂಶ ನಿರ್ಧರಿಸುತ್ತದೆ.

ಮಾರ್ಚ್ 7 ರಂದು ನಡೆದ ಏಳನೇ ಮತ್ತು ಕೊನೆಯ ಹಂತದ ಮತದಾನದ ನಂತರ ಪ್ರಕಟವಾದ ಚುನಾವಣೋತ್ತರ ಸಮೀಕ್ಷೆಗಳು ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಸ್ಪಷ್ಟ ಗೆಲುವು ಮತ್ತು ಸಮಾಜವಾದಿ ಪಕ್ಷಕ್ಕೆ ಕೆಲವು ಕ್ಷೇತ್ರಗಳಲ್ಲಿ ಹೆಚ್ಚಿನ ಲಾಭ ಪಡೆಯಲಿದೆ ಎಂದು ಭವಿಷ್ಯ ನುಡಿದಿವೆ. ಇದು ಕಾಂಗ್ರೆಸ್ ಮತ್ತು ಮಾಯಾವತಿಯ ಬಹುಜನ ಸಮಾಜ ಪಕ್ಷದ ಸ್ಥಾನಗಳಿಗೆ ಹೊಡೆತ ನೀಡಲಿದೆ ಎಂದು ಸಮೀಕ್ಷೆಗಳು ಹೇಳಿವೆ. ಚುನಾವಣೋತ್ತರ ಸಮೀಕ್ಷೆಗಳು ನುಡಿದದ್ದು ನಿಜವಾದರೆ ಕಳೆದ 37 ವರ್ಷಗಳಲ್ಲಿ ಸತತ ಎರಡನೇ ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಲಿರುವ ಮೊದಲ ನಾಯಕರಾಗಲಿದ್ದಾರೆ ಯೋಗಿ ಆದಿತ್ಯನಾಥ.

ಪಂಜಾಬ್ ಪಂಜಾಬ್ ಚುನಾವಣೆ ಬಗ್ಗೆ ಬಹುತೇಕ ಎಲ್ಲ ಪ್ರಮುಖ ಚುನಾವಣೋತ್ತರ ಸಮೀಕ್ಷೆಗಳು ಆಮ್ ಆದ್ಮಿ ಪಕ್ಷಕ್ಕೆ ಪ್ರಚಂಡ ವಿಜಯವನ್ನು ಭವಿಷ್ಯ ನುಡಿದಿವೆ. ಮಾರ್ಚ್ 7 ರ ಮುನ್ಸೂಚನೆಗಳು ವಾಸ್ತವಕ್ಕೆ ಬಂದರೆ, ಪಂಜಾಬ್ ನಲ್ಲಿ ಹೊಸ ಮುಖ್ಯಮಂತ್ರಿಯಾಗಿ ಎಎಪಿಯ ಭಗವಂತ್ ಮಾನ್ ಗದ್ದುಗೆಗೇರಲಿದ್ದಾರೆ. ವಿಧಾನಸಭಾ ಫಲಿತಾಂಶದ ಮುನ್ನ ಚುನಾವಣಾ ಆಯೋಗವು ಎಲೆಕ್ಟ್ರಾನಿಕ್ ಮತಯಂತ್ರಗಳು ಅಥವಾ ಇವಿಎಂಗಳ ಭದ್ರತೆಯ ವಿಷಯದಲ್ಲಿ ಕಟ್ಟುನಿಟ್ಟಾಗಿದೆ. ಇತ್ತೀಚಿನ ವರದಿಗಳ ಪ್ರಕಾರ ಪಂಜಾಬ್‌ನ ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ ಸುಮಾರು 50 ಕಂಪನಿಗಳ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ.

ಪಂಜಾಬ್‌ನ 117 ಅಸೆಂಬ್ಲಿ ಸ್ಥಾನಗಳ ಪೈಕಿ 116 ಕ್ಷೇತ್ರಗಳಲ್ಲಿ ಮತದಾನದಲ್ಲಿ ಗಮನಾರ್ಹ ಕುಸಿತ ಕಂಡುಬಂದಿದೆ ಎಂದು ಚುನಾವಣಾ ಸಮಿತಿಯ ಅಧಿಕೃತ ಅಂಕಿಅಂಶಗಳು ಸೂಚಿಸುತ್ತವೆ. 2017 ರ ಅಂಕಿಅಂಶಗಳಿಗೆ ಹೋಲಿಸಿದರೆ, 2022 ರ ಪಂಜಾಬ್ ಅಸೆಂಬ್ಲಿ ಚುನಾವಣೆಯಲ್ಲಿ 116 ಸ್ಥಾನಗಳ ಮತದಾನದಲ್ಲಿ ಶೇಕಡಾ 5 ರಷ್ಟು ಇಳಿಕೆ ಕಂಡುಬಂದಿದೆ. ಈ 117 ಸ್ಥಾನಗಳಿಗೆ ಕಳೆದ ತಿಂಗಳು ಫೆಬ್ರವರಿ 20 ರಂದು ಮತದಾನ ನಡೆದಿದ್ದು ನಾಳೆ 1304 ಅಭ್ಯರ್ಥಿಗಳ ಭವಿಷ್ಯ ಪ್ರಕಟವಾಗಲಿದೆ. ಬಹುತೇಕ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಎಎಪಿಗೆ ಸ್ಪಷ್ಟವಾದ ವಿಜಯವನ್ನು ಭವಿಷ್ಯ ನುಡಿದಿದ್ದರೂ, ಹಾಲಿ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಮತ್ತು ಪಿಸಿಸಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸ್ಪರ್ಧಿಸುತ್ತಿರುವ ಚಮ್ಕೌರ್ ಸಾಹಿಬ್ ಮತ್ತು ಅಮೃತಸರ ಪೂರ್ವದ ಫಲಿತಾಂಶಗಳು ಹೆಚ್ಚಿನ ಕುತೂಹಲ ಹುಟ್ಟಿಸಿವೆ.

ಗೋವಾ ಫೆಬ್ರವರಿ 14 ರಂದು ರಾಜ್ಯವು ಏಕ-ಹಂತದ ಚುನಾವಣೆಯಲ್ಲಿ ಮತ ಚಲಾಯಿಸಿದೆ. ಬಹುತೇಕ ಒಂದು ತಿಂಗಳ ನಂತರ ಫಲಿತಾಂಶಗಳು ಪ್ರಕಟವಾಗುವುದರಿಂದ, ಮತದಾರರು ಹಾಗೂ ರಾಜಕೀಯ ಮುಖಂಡರು 2022 ರ ಗೋವಾ ಚುನಾವಣಾ ಫಲಿತಾಂಶಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದಾರೆ.

ಗೋವಾದಲ್ಲಿ 40 ಸ್ಥಾನಗಳಿದ್ದು, 332 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್-ಜಿಎಫ್‌ಪಿ ತಲಾ 40 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಆಮ್ ಆದ್ಮಿ ಪಕ್ಷದಿಂದ 39 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕರಾವಳಿ ರಾಜ್ಯದಲ್ಲಿ ಪ್ರಸ್ತುತ ಬಿಜೆಪಿ ಆಡಳಿತ ನಡೆಸುತ್ತಿದ್ದು, ಕಾಂಗ್ರೆಸ್ ಪ್ರಮುಖ ವಿರೋಧ ಪಕ್ಷವಾಗಿದೆ. ಚುನಾವಣೋತ್ತರ ಸಮೀಕ್ಷೆಗಳು ಗೋವಾದಲ್ಲಿ ಅತಂತ್ರ ಅಸೆಂಬ್ಲಿ ಎಂದು ಭವಿಷ್ಯ ನುಡಿದಿವೆ ಏಕೆಂದರೆ ಬಿಜೆಪಿ ಅಥವಾ ಕಾಂಗ್ರೆಸ್ ಬಹುಮತದ ಮಾರ್ಕ್ 21 ಅನ್ನು ತಲುಪುವುದಿಲ್ಲ. ಈ ಸಂದರ್ಭದಲ್ಲಿ, ಪ್ರಾದೇಶಿಕ ಪಕ್ಷಗಳು ಮತ್ತು ಸ್ವತಂತ್ರರು ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಬಹುದು.

ಉತ್ತರಾಖಂಡ ಫೆಬ್ರವರಿ 14 ರಂದು ಮತದಾನ ನಡೆದ ಉತ್ತರಾಖಂಡ ವಿಧಾನಸಭೆಯ 70 ಸ್ಥಾನಗಳ ಮತ ಎಣಿಕೆಗೆ ವೇದಿಕೆ ಸಿದ್ಧವಾಗಿದೆ. 70 ಸ್ಥಾನಗಳಲ್ಲಿ ಒಟ್ಟು 632 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕೆಲವು ಸಮೀಕ್ಷೆಗಳು ಬಿಜೆಪಿ ಬಹುಮತ ಪಡೆಯುತ್ತದೆ ಎಂದು ಹೇಳಿದ್ದು ಇನ್ನು ಕೆಲವು ಸಮೀಕ್ಷೆಗಳು ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತದತ್ತ ಒಲವು ತೋರಿವೆ. 70 ಸದಸ್ಯರ ಸದನದಲ್ಲಿ ಬಹುಮತ ಪಡೆಯಲು 36 ಸ್ಥಾನ ಬೇಕಿದೆ. ಪ್ರಮುಖ ಅಭ್ಯರ್ಥಿಗಳಲ್ಲಿ ಖತಿಮಾ ಕ್ಷೇತ್ರದಿಂದ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಪುಷ್ಕರ್ ಸಿಂಗ್ ಧಾಮಿ, ಲಾಲ್ಕುವಾ ಕ್ಷೇತ್ರದಿಂದ ಹರೀಶ್ ರಾವತ್ ಮತ್ತು ಗಂಗೋತ್ರಿ ಕ್ಷೇತ್ರದಿಂದ ಕರ್ನಲ್ ಅಜಯ್ ಕೊಥಿಯಾಲ್ ಇದ್ದಾರೆ. ಎನ್‌ಡಿ ತಿವಾರಿ ಅವರನ್ನು ಹೊರತುಪಡಿಸಿ ರಾಜ್ಯದಲ್ಲಿ ಯಾವುದೇ ಮುಖ್ಯಮಂತ್ರಿ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿಲ್ಲ. ಅಲ್ಲದೆ, ರಾಜ್ಯದಲ್ಲಿ ಯಾವ ಹಾಲಿ ಮುಖ್ಯಮಂತ್ರಿಯೂ ಸತತ ಎರಡನೇ ಅವಧಿಗೆ ಅಧಿಕಾರ ನಡೆಸಿಲ್ಲ.

ಮಣಿಪುರ ಮಣಿಪುರದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆದಿದ್ದು, ಮೊದಲ ಹಂತದಲ್ಲಿ 38 ಮತ್ತು ಎರಡನೇ ಹಂತದಲ್ಲಿ 22 ಸ್ಥಾನಗಳಿಗೆ ಮತದಾನ ನಡೆದಿತ್ತು. ಮಣಿಪುರದಲ್ಲಿ 60 ಸ್ಥಾನಗಳಿದ್ದು, 265 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತ ನಡೆಸುತ್ತಿದೆ. ಆದಾಗ್ಯೂ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಈ ವರ್ಷ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು. ಚುನಾವಣೋತ್ತರ ಸಮೀಕ್ಷೆಗಳು ಮಣಿಪುರದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವನ್ನು ಭವಿಷ್ಯ ನುಡಿದಿವೆ. ಮೊದಲ ಹಂತದಲ್ಲಿ ಶೇ.78ಕ್ಕೂ ಹೆಚ್ಚು ಹಾಗೂ ಎರಡನೇ ಹಂತದಲ್ಲಿ ಶೇ.84ಕ್ಕೂ ಹೆಚ್ಚು ಮತದಾನವಾಗಿದೆ.

ಹೀಂಗಾಂಗ್ ಕ್ಷೇತ್ರದಿಂದ ಮುಖ್ಯಮಂತ್ರಿ ಮತ್ತು ಬಿಜೆಪಿ ಅಭ್ಯರ್ಥಿ ಎನ್ ಬಿರೇನ್ ಸಿಂಗ್, ಸಿಂಗ್ಜಮೇಯ್ ಕ್ಷೇತ್ರದಿಂದ ಸ್ಪೀಕರ್ ವೈ ಖೇಮ್‌ಚಂದ್ ಸಿಂಗ್ ಮತ್ತು ಉರಿಪೋಕ್ ಕ್ಷೇತ್ರದಿಂದ ಉಪ ಮುಖ್ಯಮಂತ್ರಿ ಮತ್ತು ಎನ್‌ಪಿಪಿ ಅಭ್ಯರ್ಥಿ ಯುಮ್ನಮ್ ಜಾಯ್‌ಕುಮಾರ್ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು.

ಇದನ್ನೂ ಓದಿ: ರಾಜೀವ್ ಗಾಂಧಿ ಹತ್ಯೆಯ ಅಪರಾಧಿ ಎಜಿ ಪೇರರಿವಾಲನ್‌ಗೆ ಸುಪ್ರೀಂಕೋರ್ಟ್ ಜಾಮೀನು

Published On - 6:32 pm, Wed, 9 March 22

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್