ಇಂದಿಗೆ ದರ್ಶನ್ ನ್ಯಾಯಾಂಗ ಬಂಧನದ ಅವಧಿ ಪೂರ್ಣ; ಕೋರ್ಟ್​ಗೆ ಹಾಜರಾಗಲಿದ್ದಾರೆ ಆರೋಪಿಗಳು

ರೇಣುಕಾ ಸ್ವಾಮಿ ಕೊಲೆ ಪ್ರಕರಣ ಕುರಿತಂತೆ ಪೊಲೀಸರು ಸುದೀರ್ಘವಾದ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಆರೋಪ ಪಟ್ಟಿಯನ್ನು ಮಾನ್ಯ ಮಾಡಿರುವ ಕೋರ್ಟ್, ಆರೋಪಿ ಪರ ವಕೀಲರಿಗೆ ಒಂದೊಂದು ಪ್ರತಿ ನೀಡಿದೆ. ಈ ಮಧ್ಯೆ ಇಂದು ದರ್ಶನ್ ಅವರು ಕೋರ್ಟ್ ಎದುರು ಹಾಜರಾಗಲಿದ್ದಾರೆ.

ಇಂದಿಗೆ ದರ್ಶನ್ ನ್ಯಾಯಾಂಗ ಬಂಧನದ ಅವಧಿ ಪೂರ್ಣ; ಕೋರ್ಟ್​ಗೆ ಹಾಜರಾಗಲಿದ್ದಾರೆ  ಆರೋಪಿಗಳು
ದರ್ಶನ್

Updated on: Sep 12, 2024 | 7:00 AM

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಅವರು ಜೈಲಿನಲ್ಲಿದ್ದಾರೆ. ಇವರ ಜೊತೆ ಇನ್ನೂ 16 ಮಂದಿ ಕಂಬಿ ಎಣಿಸುತ್ತಿದ್ದಾರೆ. ದರ್ಶನ್ ಬಂಧನವಾಗಿ ಈಗಾಗಲೇ ಮೂರು ತಿಂಗಳುಗಳೇ ಕಳೆದು ಹೋಗಿವೆ. ಈವರೆಗೆ ದರ್ಶನ್ ಕಡೆಯಿಂದ ಜಾಮೀನಿಗೆ ಅರ್ಜಿ ಸಲ್ಲಿಕೆ ಆಗಿಲ್ಲ. ಇಂದು (ಸೆಪ್ಟೆಂಬರ್ 12) ಕೋರ್ಟ್​ ಎದುರು ದರ್ಶನ್ ಅವರನ್ನು ಹಾಜರುಪಡಿಸಲಾಗುತ್ತಿದೆ. ಇಂದಿಗೆ ಅವರ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳಲಿದೆ.

ಸೆಪ್ಟೆಂಬರ್ 9ರಂದು ದರ್ಶನ್ ಅವರ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಂಡಿತ್ತು. ಹೀಗಾಗಿ, ಅವರನ್ನು ಕೋರ್ಟ್ ಎದುರು ವಿಡಿಯೋ ಕಾನ್ಫರೆನ್ಸ್​ ಮೂಲಕ ಹಾಜರುಪಡಿಸಲಾಗಿತ್ತು. ಈ ವೇಳೆ ಚಾರ್ಜ್​ಶೀಟ್ ಪ್ರತಿಯನ್ನು ಆರೋಪಿ ಪರ ವಕೀಲರಿಗೆ ನೀಡಲಾಗಿತ್ತು. ಆ ಬಳಿಕ ಜಡ್ಜ್​ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 12ರವರೆಗೆ ವಿಸ್ತರಣೆ ಮಾಡಿದ್ದರು.

ಸೆಪ್ಟೆಂಬರ್ 9ರಂದು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ಗೆ ಹಾಜರಾಗಿದ್ದ ಸರ್ಕಾರಿ ಪರ ವಕೀಲ ಪ್ರಸನ್ನ ಕುಮಾರ್​​ ಅವರು ಪ್ರಕರಣಕ್ಕೆ ಸಂಬಂಧಿಸಿ ಪ್ರಾಥಮಿಕ ಸಾಕ್ಷ್ಯಾಧಾರಗಳ ಸಲ್ಲಿಕೆ ಮಾಡಿದ್ದರು. ಇವುಗಳನ್ನು ಜಡ್ಜ್ ಪರಿಶೀಲನೆ ಮಾಡುವುದಾಗಿ ಹೇಳಿದ್ದರು. ಇನ್ನು ಶೀಘ್ರವೇ ದರ್ಶನ್ ಅವರು ಜಾಮೀನು ಅರ್ಜಿ ಸಲ್ಲಿಕೆ ಮಾಡಲಿದ್ದಾರೆ. ಪೂರ್ತಿ ಚಾರ್ಜ್​ಶೀಟ್​ ನೋಡಿ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ದರ್ಶನ್ ಪರ ವಕೀಲ ಶಿವಕುಮಾರ್ ಅವರು ಹೇಳಿದ್ದರು.

ಇದನ್ನೂ ಓದಿ: ರೇಣುಕಾ ಸ್ವಾಮಿ ಪ್ರಕರಣ: ಚಾರ್ಜ್​ಶೀಟ್​ನಲ್ಲಿ ಇಬ್ಬರು ನಟಿಯರ ಹೆಸರು ಉಲ್ಲೇಖ

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 3991 ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಹೇಳಿಕೆ ಉಲ್ಲೇಖ ಆಗಿದೆ. ವಿಚಾರಣೆ ವೇಳೆ ದರ್ಶನ್ ಅವರು ತಾವು ಹಲ್ಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಆದರೆ, ಎಲ್ಲಿಯೂ ಕೊಲೆಯನ್ನು ಇವರೇ ಮಾಡಿದ್ದಾರೆ ಎಂಬ ವಿಚಾರ ಉಲ್ಲೇಖ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Follow Us