‘ಸಿಎಎ ಅಂದ್ರೆ ಏನು ಅಂತ ಮೊದಲು ತಿಳಿದುಕೊಳ್ಳಿ’: ವಿರೋಧಿಗಳಿಗೆ ಕಂಗನಾ ಸಂದೇಶ

ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ಬಗ್ಗೆ ಸಖತ್​ ಚರ್ಚೆ ಆಗುತ್ತಿದೆ. ಕೇಂದ್ರ ಸರ್ಕಾರದ ಕ್ರಮಕ್ಕೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ವಿಚಾರದಲ್ಲಿ ನಟಿ ಕಂಗನಾ ರಣಾವತ್​ ಅವರು ಕೇಂದ್ರ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದಾರೆ. ಸಿಎಎ ಬಗ್ಗೆ ನರೇಂದ್ರ ಮೋದಿ ಅವರು 2014ರಲ್ಲಿ ಮಾತನಾಡಿದ ವಿಡಿಯೋವನ್ನು ಕಂಗನಾ ಈಗ ಶೇರ್​ ಮಾಡಿಕೊಂಡಿದ್ದಾರೆ.

‘ಸಿಎಎ ಅಂದ್ರೆ ಏನು ಅಂತ ಮೊದಲು ತಿಳಿದುಕೊಳ್ಳಿ’: ವಿರೋಧಿಗಳಿಗೆ ಕಂಗನಾ ಸಂದೇಶ
ಕಂಗನಾ ರಣಾವತ್​

Updated on: Mar 12, 2024 | 5:26 PM

ಪೌರತ್ವ ತಿದ್ದುಪಡಿ ಕಾಯ್ದೆ (Citizenship Amendment Act) ಜಾರಿಗೊಳಿಸುವ ಕುರಿತು ಕೇಂದ್ರ ಸರ್ಕಾರ ಮಾರ್ಚ್​ 11ರಂದು ಅಧಿಸೂಚನೆ ಹೊರಡಿಸಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಪರ-ವಿರೋಧದ ಚರ್ಚೆ ಜೋರಾಗಿದೆ. ಜನ ಸಾಮಾನ್ಯರು ಮಾತ್ರವಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಈ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ನಟಿ ಕಂಗನಾ ರಣಾವತ್​ (Kangana Ranaut) ಅವರು ಕೂಡ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಕೇಂದ್ರ ಸರ್ಕಾರದ ನಿರ್ಧಾರವನ್ನು ಅವರು ಸ್ವಾಗತಿಸಿದ್ದಾರೆ. ಆದರೆ ದಳಪತಿ ವಿಜಯ್​ ಸೇರಿದಂತೆ ಕೆಲವು ಸೆಲೆಬ್ರಿಟಿಗಳು ಪೌರತ್ವ ತಿದ್ದುಪಡಿ ಕಾಯ್ದೆಯ (CAA) ಬಗ್ಗೆ ತಕರಾರು ತೆಗೆದಿದ್ದಾರೆ.

ಕಂಗನಾ ರಣಾವತ್ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್​ ಶಾ ಅವರ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಸಿಎಎ ಎಂದು ಕ್ಯಾಪ್ಷನ್​ ನೀಡಿದ್ದು ಇಂಡಿಯನ್​ ಫ್ಲ್ಯಾಗ್​ ಎಮೋಜಿಯನ್ನು ಅವರು ಬಳಸಿದ್ದಾರೆ. ಆ ಮೂಲಕ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಆಗುತ್ತಿರುವುದಕ್ಕೆ ತಮ್ಮ ಬೆಂಬಲ ಇದೆ ಎಂಬುದನ್ನು ಅವರು ಸೂಚಿಸಿದ್ದಾರೆ.

2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಮಾತನಾಡಿದ ವಿಡಿಯೋವನ್ನು ಕಂಗನಾ ರಣಾವತ್​ ಅವರು ಈಗ ಹಂಚಿಕೊಂಡಿದ್ದಾರೆ. ‘ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ನಿಮ್ಮ ಭಾವನೆ ಮತ್ತು ಅಭಿಪ್ರಾಯವನ್ನು ವ್ಯಕ್ತಪಡಿಸುವುದಕ್ಕೂ ಮುನ್ನ ಸಿಎಎ ಎಂದರೆ ಏನು ಎಂಬುದನ್ನು ತಿಳಿದುಕೊಳ್ಳಿ’ ಎಂದು ಕಂಗನಾ ರಣಾವತ್​ ಅವರು ಕ್ಯಾಪ್ಷನ್​ ನೀಡಿದ್ದಾರೆ.

ಇದನ್ನೂ ಓದಿ: ಸಿಎಎ ಸ್ವೀಕಾರಾರ್ಹವಲ್ಲ ತಮಿಳುನಾಡಿನಲ್ಲಿ ಜಾರಿಯಾಗದಂತೆ ನೋಡಿಕೊಳ್ಳಬೇಕು: ದಳಪತಿ ವಿಜಯ್

ಕಂಗನಾ ರಣಾವತ್​ ಅವರು ಇನ್ನೂ ನೇರವಾಗಿ ರಾಜಕೀಯಕ್ಕೆ ಕಾಲಿಟ್ಟಿಲ್ಲ. ಆದರೂ ಅವರು ರಾಜಕೀಯದ ಕುರಿತು ಅನೇಕ ವಿಚಾರಗಳ ಬಗ್ಗೆ ತಮ್ಮ ಅನಿಸಿಕೆ ತಿಳಿಸುತ್ತಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿಯನ್ನು ಆಧರಿಸಿ ಕಂಗನಾ ಅವರು ‘ಎಮರ್ಜೆನ್ಸಿ’ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಮುಖ್ಯ ಪಾತ್ರ ಮಾಡುವುದರ ಜೊತೆ ನಿರ್ದೇಶಕವನ್ನೂ ಅವರೇ ಮಾಡಿದ್ದಾರೆ.

ಇದನ್ನೂ ಓದಿ: ಭಾರತೀಯ ಮುಸ್ಲಿಮರು ಸಿಎಎ ಸ್ವಾಗತಿಸಬೇಕು: ಅಖಿಲ ಭಾರತ ಮುಸ್ಲಿಂ ಜಮಾತ್ ಮುಖ್ಯಸ್ಥ

ಟಿವಿ9 ನೆಟ್​ವರ್ಕ್​ ನಡೆಸಿದ ‘ವಾಟ್​ ಇಂಡಿಯಾ ಥಿಂಕ್ಸ್​ ಟುಡೇ’ ಕಾನ್​ಕ್ಲೇವ್​ನ ಸಂವಾದದಲ್ಲಿ ಕಂಗನಾ ಅವರು ರಾಜಕೀಯದ ಎಂಟ್ರಿ ಕುರಿತ ಪ್ರಶ್ನೆಗೆ ಉತ್ತರಿಸಿದ್ದರು. ‘ದೇಶಕ್ಕಾಗಿ ಏನನ್ನಾದರೂ ಮಾಡಲು ನನಗೆ ಸೀಟ್​, ಟಿಕೆಟ್​​ ಅಥವಾ ಅಧಿಕಾರ ಬೇಕಿಲ್ಲ. ನಟಿಯಾಗಿಯೇ ನಾನು ರಾಜಕೀಯ ಪಕ್ಷಗಳ ಎದುರು ಹೋರಾಡಿದ್ದೇನೆ. ಒಂದು ವೇಳೆ ನಾನು ರಾಜಕೀಯಕ್ಕೆ ಬರಬೇಕು ಎಂದರೆ ಇದು ಸರಿಯಾದ ಸಮಯ’ ಎಂದು ಕಂಗನಾ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us