ಕಂಗನಾ ನಟನೆಯ ‘ಎಮರ್ಜೆನ್ಸಿ’ ಸಿನಿಮಾಗೆ ಪಂಜಾಬ್​ನಲ್ಲಿ ತೀವ್ರ ವಿರೋಧ

ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಕುರಿತು ಮೂಡಿಬಂದಿರುವ ‘ಎಮರ್ಜೆನ್ಸಿ’ ಸಿನಿಮಾ ಇಂದು (ಜನವರಿ 17) ಬಿಡುಗಡೆ ಆಗಿದೆ. ಈ ಚಿತ್ರದ ಸುತ್ತ ಇರುವ ವಿವಾದಗಳು ಒಂದೆರಡಲ್ಲ. ಪಂಜಾಬ್​ನಲ್ಲಿ ‘ಎಮರ್ಜೆನ್ಸಿ’ ಸಿನಿಮಾಗೆ ವಿರೋಧ ವ್ಯಕ್ತವಾಗಿದೆ. ಸಿನಿಮಾವನ್ನು ರಾಜ್ಯದಲ್ಲಿ ಬ್ಯಾನ್ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಕಂಗನಾ ನಟನೆಯ ‘ಎಮರ್ಜೆನ್ಸಿ’ ಸಿನಿಮಾಗೆ ಪಂಜಾಬ್​ನಲ್ಲಿ ತೀವ್ರ ವಿರೋಧ
Emergency Movie Poster

Updated on: Jan 17, 2025 | 3:42 PM

ನಟಿ ಕಂಗನಾ ರಣಾವತ್ ಅವರು ಸಾಕಷ್ಟು ಶ್ರಮವಹಿಸಿ ‘ಎಮರ್ಜೆನ್ಸಿ’ ಸಿನಿಮಾ ಮಾಡಿದ್ದಾರೆ. ಅವರೇ ನಿರ್ದೇಶನ ಕೂಡ ಮಾಡಿದ್ದಾರೆ. ಹಲವು ಅಡೆತಡೆಗಳು ಈ ಚಿತ್ರಕ್ಕೆ ಎದುರಾಗಿದ್ದವು. ಬಿಡುಗಡೆ ಸಮಯದಲ್ಲಿ ಕೂಡ ತೊಂದರೆ ಉಂಟಾಯಿತು. ಎಲ್ಲ ವಿಘ್ನಗಳನ್ನು ನಿವಾರಿಸಿಕೊಂಡು ಈಗ ‘ಎಮರ್ಜೆನ್ಸಿ’ ತೆರೆಕಂಡಿದೆ. ಈ ಸಿನಿಮಾದಲ್ಲಿ ಕಂಗನಾ ರಣಾವತ್ ಅವರು ಇಂದಿರಾ ಗಾಂಧಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಈ ಸಿನಿಮಾ ಮೂಲಕ ಗೆಲುವು ಕಾಣುವ ಹಂಬಲ ಅವರದ್ದು. ಆದರೆ ಕೆಲವು ಕಡೆಗಳಲ್ಲಿ ‘ಎಮರ್ಜೆನ್ಸಿ’ ಚಿತ್ರಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಪಂಜಾಬ್​ನಲ್ಲಿ ಈ ಸಿನಿಮಾವನ್ನು ನಿಷೇಧ ಮಾಡಬೇಕು ಎಂದು ಒತ್ತಾಯಿಸಲಾಗುತ್ತಿದೆ.

ಸಿಖ್ ಸಮುದಾಯದವರು ‘ಎಮರ್ಜೆನ್ಸಿ’ ಸಿನಿಮಾವನ್ನು ತೀವ್ರವಾಗಿ ವಿರೋಧಿಸಿದ್ದಾರೆ. ‘ಶಿರೋಮಣಿ ಗುರುದ್ವಾರ ಪ್ರತಿಬಂಧಕ ಸಮಿತಿ’ ಈ ಚಿತ್ರದ ಬಗ್ಗೆ ತಕರಾರು ತೆಗೆದಿದೆ. ಈ ಸಿನಿಮಾದಲ್ಲಿ ಸಿಖ್ ಸಮುದಾಯಕ್ಕೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಸಿನಿಮಾವನ್ನು ಬ್ಯಾನ್ ಮಾಡಬೇಕು ಎಂದು ಒತ್ತಾಯಿಸಿ ಅಮೃತಸರದಲ್ಲಿ ಪ್ರತಿಭಟನೆ ಮಾಡಲಾಗಿದೆ.

ಇದನ್ನೂ ಓದಿ:  ಕಂಗನಾ ನಟನೆಯ ‘ಎಮರ್ಜೆನ್ಸಿ’ ಚಿತ್ರಕ್ಕೆ ಸೆನ್ಸಾರ್ ಮಂಡಳಿಯೇ ವಿಲನ್; ಹೇಗಿದೆ ಸಿನಿಮಾ?

‘ಎಮರ್ಜೆನ್ಸಿ’ ಸಿನಿಮಾ ಪ್ರದರ್ಶನ ಆಗುತ್ತಿದ್ದ ಚಿತ್ರಮಂದಿರದ ಎದುರು ಪೊಲೀಸರನ್ನು ನಿಯೋಜಿಸಲಾಗಿದೆ. ಟ್ರೇಲರ್​ ಬಿಡುಗಡೆ ಆದಾಗಲೂ ಕೂಡ ಸಿಖ್ ಸಮುದಾಯದವರು ಈ ಚಿತ್ರಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಸಿಖ್ಖರಿಗೆ ಸಂಬಂಧಿಸಿದ ಇತಿಹಾಸದ ವಿವರಗಳನ್ನು ‘ಎಮರ್ಜೆನ್ಸಿ’ ಸಿನಿಮಾದಲ್ಲಿ ತಿರುಚಲಾಗಿದೆ ಎಂದು ಹಲವರು ಆರೋಪಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಕಂಗನಾ ರಣಾವತ್ ಅವರು ಪ್ರತಿಕ್ರಿಯಿಸಿದ್ದಾರೆ. ‘ಇದು ಕಲೆ ಮತ್ತು ಕಲಾವಿದರ ಮೇಲೆ ಆಗುತ್ತಿರುವ ಕಿರುಕುಳ. ಪಂಜಾಬ್​ನ ಅನೇಕ ನಗರಗಳಲ್ಲಿ ಎಮರ್ಜೆನ್ಸಿ ಸಿನಿಮಾದ ಪ್ರದರ್ಶನಕ್ಕೆ ಅಡ್ಡಿ ಮಾಡಲಾಗುತ್ತಿದೆ. ನನಗೆ ಎಲ್ಲ ಧರ್ಮದ ಬಗ್ಗೆ ಗೌರವ ಇದೆ. ಚಂಡೀಗಡದಲ್ಲಿ ಓದಿ, ಬೆಳೆದ ನಾನು ಸಿಖ್ ಧರ್ಮವನ್ನು ಹತ್ತಿರದಿಂದ ನೋಡಿದ್ದೇನೆ, ಅನುಸರಿಸಿದ್ದೇನೆ. ಸಿನಿಮಾದಲ್ಲಿ ಸಿಖ್ ಧರ್ಮಕ್ಕೆ ಅವಮಾನ ಆಗಿದೆ ಎಂಬುದು ಶುದ್ಧ ಸುಳ್ಳು. ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ತರಬೇಕು ಹಾಗೂ ಸಿನಿಮಾಗೆ ಹಾನಿ ಮಾಡಬೇಕು ಎಂಬ ಪ್ರಯತ್ನವಷ್ಟೇ’ ಎಂದು ಕಂಗನಾ ರಣಾವತ್ ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us