ತಮಿಳುನಾಡು ಚುನಾವಣೆ: ‘ಧುರಂಧರ್’ ಪ್ರದರ್ಶನಕ್ಕೆ ಇಲ್ಲ ತಡೆ; ಅರ್ಜಿ ವಜಾಗೊಳಿಸಿದ ಹೈಕೋರ್ಟ್
ತಮಿಳುನಾಡಿನಲ್ಲಿ ಚುನಾವಣೆ ಹತ್ತಿರವಾಗಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ. ಹಾಗಾಗಿ ರಾಜಕೀಯದ ಕಥೆ ಇರುವ ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾದ ಪ್ರದರ್ಶನಕ್ಕೆ ತಡೆ ನೀಡಬೇಕು ಎಂದು ಅರ್ಜಿ ಸಲ್ಲಿಸಲಾಗಿತ್ತು. ಆದರೆ ಮದ್ರಾಸ್ ಹೈಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ತಮಿಳುನಾಡು ವಿಧಾನಸಭಾ ಚುನಾವಣೆಯ ಈ ಸಂದರ್ಭದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಸಿನಿಮಾದ ಪ್ರದರ್ಶನಕ್ಕೆ ತಡೆ ನೀಡಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ. ಚಿತ್ರದ ಪ್ರದರ್ಶನವನ್ನು ನಿಲ್ಲಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ನ್ಯಾಯಾಲಯವು ಆರಂಭಿಕ ಹಂತದಲ್ಲೇ ವಜಾಗೊಳಿಸುವ ಮೂಲಕ ಚಿತ್ರತಂಡಕ್ಕೆ ದೊಡ್ಡ ರಿಲೀಫ್ ನೀಡಿದೆ.
ನ್ಯಾಯಮೂರ್ತಿ ಸಂಜಯ್ ಎ. ಧರ್ಮಾಧಿಕಾರಿ ಮತ್ತು ನ್ಯಾಯಮೂರ್ತಿ ಜಿ. ಅರುಳ್ ಮುರುಗನ್ ಅವರನ್ನೊಳಗೊಂಡ ಪೀಠವು ಈ ಆದೇಶ ನೀಡಿದೆ. ತಮಿಳುನಾಡು ಚುನಾವಣಾ ಫಲಿತಾಂಶ ಪ್ರಕಟವಾಗುವವರೆಗೆ ಚಿತ್ರಮಂದಿರ ಹಾಗೂ ಒಟಿಟಿ ಪ್ಲಾಟ್ಫಾರ್ಮ್ಗಳಲ್ಲಿ ಚಿತ್ರದ ಪ್ರದರ್ಶನಕ್ಕೆ ತಡೆ ನೀಡಬೇಕು ಎಂಬ ಮಧ್ಯಂತರ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಲಿಲ್ಲ.
ಅರ್ಜಿದಾರರ ವಾದವೇನಿತ್ತು? ಮಧುರೈ ನಿವಾಸಿಯೊಬ್ಬರು ಸಲ್ಲಿಸಿದ್ದ ಈ ಅರ್ಜಿಯಲ್ಲಿ ಕೆಲವು ಪ್ರಮುಖ ಅಂಶಗಳನ್ನು ಉಲ್ಲೇಖಿಸಲಾಗಿತ್ತು. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ ಇಂತಹ ರಾಜಕೀಯ ಪ್ರೇರಿತ ಚಿತ್ರಗಳ ಪ್ರದರ್ಶನವು ಮತದಾರರ ಮೇಲೆ ಪ್ರಭಾವ ಬೀರಬಹುದು. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯ ಆಶಯಕ್ಕೆ ಈ ಚಿತ್ರದ ಪ್ರದರ್ಶನ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು.
ಆದರೆ, ಈ ವಾದಗಳನ್ನು ಒಪ್ಪದ ಹೈಕೋರ್ಟ್, ಚಿತ್ರದ ಪ್ರದರ್ಶನ ನಿಲ್ಲಿಸಲು ಯಾವುದೇ ಬಲವಾದ ಕಾರಣಗಳಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಇದರಿಂದಾಗಿ ತಮಿಳುನಾಡಿನಲ್ಲಿ ‘ಧುರಂಧರ್ 2’ ಸಿನಿಮಾ ಎಂದಿನಂತೆ ಪ್ರದರ್ಶನ ಮುಂದುವರಿಸಲಿದೆ. ಈ ಸಿನಿಮಾದಲ್ಲಿ ಬಿಜೆಪಿ ಪರವಾದ ಪ್ರೊಪಗಾಂಡ ಇದೆ ಎಂದು ಅನೇಕರು ಆರೋಪಿಸಿದ್ದಾರೆ.
ಇದನ್ನೂ ಓದಿ: ‘ಧುರಂಧರ್ 2’ ಯಶಸ್ಸು: ಸಂಜಯ್ ದತ್ ಬಗ್ಗೆ ಮೆಚ್ಚುಗೆಯ ಮಾತಾಡಿದ ರಾಘವ್ ಚಡ್ಡಾ
ಆದಿತ್ಯ ಧರ್ ನಿರ್ದೇಶನದ ಮತ್ತು ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಈಗಾಗಲೇ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿದೆ. 2026ರ ಯಶಸ್ವಿ ಚಿತ್ರಗಳಲ್ಲಿ ಒಂದಾಗಿರುವ ಈ ಸಿನಿಮಾದ ಕಥಾವಸ್ತು ಸಾಕಷ್ಟು ಚರ್ಚೆಗೆ ಕಾರಣ ಆಗಿದೆ. ಅನೇಕ ಸೆಲೆಬ್ರಿಟಿಗಳು ಈ ಸಿನಿಮಾವನ್ನು ಹೊಗಳಿದ್ದಾರೆ. ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆ ನಡೆದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.




