‘ದಿ ಕೇರಳ ಸ್ಟೋರಿ 2’ ಸಿನಿಮಾದ ಶೀರ್ಷಿಕೆ ಬಗ್ಗೆ ತಕರಾರು; ರಾಜ್ಯದ ಹೆಸರು ಕೈಬಿಡಲು ಆಗ್ರಹ

‘ದಿ ಕೇರಳ ಸ್ಟೋರಿ 2’ ಚಿತ್ರದ ಶೀರ್ಷಿಕೆ ಪ್ರಶ್ನಿಸಿ ಕೇರಳ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಈ ಸಿನಿಮಾದಲ್ಲಿ ವಿವಾದಾತ್ಮಕ ಕಥೆ ಇದ್ದು, ಕೇರಳ ರಾಜ್ಯದ ಘನತೆಗೆ ಧಕ್ಕೆ ಆಗಲಿದೆ ಎಂದು ವಾದಿಸಲಾಗಿದೆ. ಈಗಾಗಲೇ ಈ ಸಿನಿಮಾ ಬಿಡುಗಡೆ ಆಗಿದೆ. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಕಲೆಕ್ಷನ್ ಮಾಡಲು ಸಾಧ್ಯವಾಗಿಲ್ಲ.

‘ದಿ ಕೇರಳ ಸ್ಟೋರಿ 2’ ಸಿನಿಮಾದ ಶೀರ್ಷಿಕೆ ಬಗ್ಗೆ ತಕರಾರು; ರಾಜ್ಯದ ಹೆಸರು ಕೈಬಿಡಲು ಆಗ್ರಹ
The Kerala Story 2

Updated on: Mar 04, 2026 | 7:15 PM

‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾದ ವಿವಾದ ಮುಂದುವರಿಯುತ್ತಲೇ ಇದೆ. ಮಾರ್ಚ್ 3ರಂದು ಒಬ್ಬ ನಿವೃತ್ತ ಸಮಾಜ ವಿಜ್ಞಾನ ಶಿಕ್ಷಕರು ಹಾಗೂ ಒಬ್ಬ ವಕೀಲರು ಜಂಟಿಯಾಗಿ ಕೇರಳ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಚಿತ್ರದ ಶೀರ್ಷಿಕೆಯಿಂದ ‘ಕೇರಳ’ (Kerala) ಎಂಬ ಪದವನ್ನು ತೆಗೆದುಹಾಕಬೇಕು ಮತ್ತು ಚಿತ್ರದ ಬಿಡುಗಡೆಗೆ ತಡೆ ನೀಡಬೇಕು ಎಂಬುದು ಅರ್ಜಿದಾರರ ಪ್ರಮುಖ ವಾದವಾಗಿದೆ. ಅರ್ಜಿಯಲ್ಲಿ ‘ದಿ ಕೇರಳ ಸ್ಟೋರಿ 2’ ಚಿತ್ರದ ವಿರುದ್ಧ ಕೆಲವು ಗಂಭೀರ ಆರೋಪಗಳನ್ನು ಮಾಡಲಾಗಿದೆ.

‘ದಿ ಕೇರಳ ಸ್ಟೋರಿ 2’ ಚಿತ್ರವು ಕೇರಳದ ಇಮೇಜ್‌ಗೆ ಧಕ್ಕೆ ತರುತ್ತದೆ ಎಂದು ಆರೋಪಿಸಾಗಿದೆ. ಕೇರಳ ರಾಜ್ಯವನ್ನು ಬಲವಂತದ ಧಾರ್ಮಿಕ ಮತಾಂತರದ ಕೇಂದ್ರ ಎಂಬಂತೆ ಬಿಂಬಿಸಲಾಗುತ್ತಿದೆ. ಇದು ರಾಜ್ಯದ ಸಾಮಾಜಿಕ ಮತ್ತು ಸಾಂಸ್ಕೃತಿಕ ಗೌರವಕ್ಕೆ ಧಕ್ಕೆ ತರುತ್ತದೆ ಎಂದು ಅರ್ಜಿದಾರರು ವಾದಿಸಿದ್ದಾರೆ. ಸಮುದಾಯಗಳ ನಡುವೆ ದ್ವೇಷ ಮೂಡಿಸುತ್ತದೆ ಎಂದು ಕೂಡ ಹೇಳಲಾಗಿದೆ.

ಈ ಚಿತ್ರವು ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಭಾವನೆಯನ್ನು ಪ್ರಚೋದಿಸುವಂತಿದೆ. ಇದು ಕೇರಳದ ಕೋಮು ಸೌಹಾರ್ದತೆಯನ್ನು ಹಾಳುಮಾಡಬಹುದು ಎಂಬ ಆತಂಕವನ್ನು ದೂರುದಾರರು ವ್ಯಕ್ತಪಡಿಸಿದ್ದಾರೆ. ಪ್ರೇಕ್ಷಕರು ಈ ಕಥೆಯನ್ನು ವಾಸ್ತವ ಎಂದು ನಂಬುವ ಸಾಧ್ಯತೆ ಇರುವುದರಿಂದ, ಈ ಸಿನಿಮಾ ‘ಸಂಪೂರ್ಣ ಕಾಲ್ಪನಿಕ’ ಎಂಬ ಸ್ಪಷ್ಟವಾದ ಸೂಚನೆಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಕೋರಲಾಗಿದೆ.

ಕೇವಲ ಈ ಸಿನಿಮಾದ ಬಗ್ಗೆ ಮಾತ್ರವಲ್ಲದೆ, ಅರ್ಜಿದಾರರು ಕೇಂದ್ರ ಸರ್ಕಾರ ಮತ್ತು ಸೆನ್ಸಾರ್ ಮಂಡಳಿಗೆ ಒಂದು ಮಹತ್ವದ ನಿರ್ದೇಶನ ನೀಡುವಂತೆ ಹೈಕೋರ್ಟ್​​ಗೆ ಮನವಿ ಮಾಡಿಕೊಂಡಿದ್ದಾರೆ. ‘ಯಾವುದೇ ಸಿನಿಮಾ, ತನ್ನ ಶೀರ್ಷಿಕೆ ಅಥವಾ ಪ್ರಚಾರದ ಮೂಲಕ ಯಾವುದೇ ರಾಜ್ಯ, ಪ್ರಾದೇಶಿಕ ಅಸ್ಮಿತೆ, ಜಾತಿ ಅಥವಾ ಧರ್ಮವನ್ನು ಅವಹೇಳನ ಮಾಡಬಾರದು. ಈ ಬಗ್ಗೆ ಸಮಗ್ರ ಮಾರ್ಗಸೂಚಿಗಳನ್ನು ರೂಪಿಸಬೇಕು’ ಎಂದು ಕೋರಲಾಗಿದೆ.

ಇದನ್ನೂ ಓದಿ: ಹೀನಾಯವಾಗಿ ಕುಸಿದ ‘ದಿ ಕೇರಳ ಸ್ಟೋರಿ 2’ ಬಾಕ್ಸ್ ಆಫೀಸ್ ಕಲೆಕ್ಷನ್

ಕೇರಳ ಹೈಕೋರ್ಟ್ ಸದ್ಯದಲ್ಲೇ ಈ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳುವ ನಿರೀಕ್ಷೆಯಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಾಮಾಜಿಕ ಜವಾಬ್ದಾರಿಯ ನಡುವಿನ ಈ ಕಾನೂನು ಸಂಘರ್ಷ ಈಗ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ನಾಂದಿ ಹಾಡಿದೆ. ಈಗಾಗಲೇ ‘ದಿ ಕೇರಳ ಸ್ಟೋರಿ’ ಸಿನಿಮಾಗೆ ಕೇರಳದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಿರೀಕ್ಷಿತ ಪ್ರಮಾಣದಲ್ಲಿ ಈ ಸಿನಿಮಾ ಕಲೆಕ್ಷನ್ ಮಾಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us