ಹಣೆಗೆ ಗುಂಡಿಟ್ಟು ಸಾಯಿಸುತ್ತೇವೆ: ಗಾಯಕ ಬಾದ್​ಶಾಗೆ ಬಿಷ್ಣೋಯ್ ಗ್ಯಾಂಗ್​ನಿಂದ ಬೆದರಿಕೆ

ಅಸಭ್ಯ ಸಾಹಿತ್ಯದ ‘ಟಟೀರಿ’ ಹಾಡಿನ ಕಾರಣದಿಂದ ಗಾಯಕ ಬಾದ್​ಶಾಗೆ ತೀವ್ರ ಸಂಕಷ್ಟ ಶುರುವಾಗಿದೆ. ಒಂದೆಡೆ ಅವರಿಗೆ ಬಂಧನದ ಭೀತಿ ಇದೆ. ಇನ್ನೊಂದೆಡೆ ಕೊಲೆ ಬೆದರಿಕೆ ಹಾಕಲಾಗಿದೆ. ಲಾರೆಯ್ಸ್ ಬಿಷ್ಣೋಯ್ ಗ್ಯಾಂಗ್ ಸದಸ್ಯರಿಂದ ಬಾದ್​ಶಾಗೆ ಕೊಲೆ ಬೆದರಿಗೆ ಬಂದಿದೆ ಎನ್ನಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ..

ಹಣೆಗೆ ಗುಂಡಿಟ್ಟು ಸಾಯಿಸುತ್ತೇವೆ: ಗಾಯಕ ಬಾದ್​ಶಾಗೆ ಬಿಷ್ಣೋಯ್ ಗ್ಯಾಂಗ್​ನಿಂದ ಬೆದರಿಕೆ
Badshah

Updated on: Mar 15, 2026 | 2:31 PM

ಖ್ಯಾತ ರ‍್ಯಾಪರ್ ಮತ್ತು ಗಾಯಕ ಬಾದ್‌ಶಾ (Badshah) ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ಕಡೆ ಜೈಲಿನಲ್ಲಿರುವ ಕುಖ್ಯಾತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಕೊಲೆ ಬೆದರಿಕೆ ಬಂದಿದ್ದರೆ, ಮತ್ತೊಂದೆಡೆ ಕಾನೂನು ಕ್ರಮಗಳ ಅಡಿಯಲ್ಲಿ ಅವರ ಬಂಧನಕ್ಕೆ ಸಿದ್ಧತೆ ನಡೆಯುತ್ತಿದೆ. ಬಾದ್‌ಶಾ ಅವರ ಇತ್ತೀಚಿನ ‘ಟಟೀರಿ’ (Tateeree) ಹಾಡು ಈಗ ಅವರಿಗೆ ದೊಡ್ಡ ಕಂಟಕವಾಗಿ ಪರಿಣಮಿಸಿದೆ. ಈ ಹಾಡಿನಲ್ಲಿ ಹರಿಯಾಣದ ಸಂಸ್ಕೃತಿ ಮತ್ತು ಮಹಿಳೆಯರನ್ನು ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಎಂಬ ಆರೋಪದ ಬೆನ್ನಲ್ಲೇ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಅವರಿಗೆ ಪ್ರಾಣ ಬೆದರಿಕೆ (Death Threat) ಬಂದಿದೆ.

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಪೋಸ್ಟ್ ಒಂದರಲ್ಲಿ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ಎನ್ನಲಾದ ವ್ಯಕ್ತಿಯೊಬ್ಬ ಬಾದ್‌ಶಾಗೆ ಎಚ್ಚರಿಕೆ ನೀಡಿದ್ದಾನೆ. ‘ಗಾಯಕ ಬಾದ್‌ಶಾ, ನೀನು ಹರಿಯಾಣದ ಸಂಸ್ಕೃತಿಯನ್ನು ಹಾಳುಮಾಡಲು ಯತ್ನಿಸಿದೆ. 2024ರಲ್ಲಿ ನಿನ್ನ ಕ್ಲಬ್‌ನಲ್ಲಿ ನಾವು ಕೇವಲ ಟ್ರೈಲರ್ ತೋರಿಸಿದ್ದೆವು. ಆದರೆ ಈ ಬಾರಿ ನೇರವಾಗಿ ನಿನ್ನ ಹಣೆಗೆ ಗುಂಡಿಡುತ್ತೇವೆ’ ಎಂದು ಭಯಾನಕ ಸಂದೇಶ ರವಾನಿಸಲಾಗಿದೆ. ಈ ಪೋಸ್ಟ್ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇನ್ನೊಂದೆಡೆ ಬಾದ್​ಶಾ ಅವರಿಗೆ ಬಂಧನದ ಭೀತಿ ಎದುರಾಗಿದೆ. ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ಹರಿಯಾಣ ರಾಜ್ಯ ಮಹಿಳಾ ಆಯೋಗವು ಕಠಿಣ ನಿಲುವು ತಳೆದಿದೆ. ಮಾರ್ಚ್ 6ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದ್ದರೂ ಬಾದ್‌ಶಾ ಗೈರುಹಾಜರಾಗಿದ್ದರು. ಇದರಿಂದ ಕೆರಳಿದ ಮಹಿಳಾ ಆಯೋಗವು ಬಾದ್‌ಶಾ ಅವರ ಪಾಸ್‌ಪೋರ್ಟ್ ಜಪ್ತಿ ಮಾಡಲು ಪೊಲೀಸರಿಗೆ ಸೂಚಿಸಿದೆ.

ಅಲ್ಲದೇ, ಬಾದ್​ಶಾ ಅವರನ್ನು ಕೂಡಲೇ ಬಂಧಿಸಲು ಹರಿಯಾಣ ಪೊಲೀಸರಿಗೆ ಮಹಿಳಾ ಆಯೋಗವು ನಿರ್ದೇಶನ ನೀಡಿದೆ. ಹರಿಯಾಣದ ಹೆಣ್ಣುಮಕ್ಕಳನ್ನು ಹಾಡಿನ ಮೂಲಕ ಅವಮಾನಿಸಲಾಗಿದೆ ಎಂದು ಆಯೋಗ ಕಿಡಿಕಾರಿದೆ. ಈ ಸಂಬಂಧ ಈಗಾಗಲೇ ಎಫ್‌ಐಆರ್ ದಾಖಲಾಗಿದ್ದು, ಬಾದ್‌ಶಾ ಅವರ ಸುತ್ತ ಸಂಕಷ್ಟದ ಸುಳಿ ಸುತ್ತಿಕೊಂಡಿದೆ.

ಇದನ್ನೂ ಓದಿ: ಅಸಭ್ಯ ಸಾಹಿತ್ಯಕ್ಕೆ ವಿರೋಧ: ಕ್ಷಮೆ ಕೇಳಿ ರಾತ್ರೋರಾತ್ರಿ ಸಾಂಗ್ ಡಿಲೀಟ್ ಮಾಡಿದ ಬಾದ್​ಶಾ

‘ಟಟೀರಿ’ ಹಾಡಿನಲ್ಲಿ ಶಾಲಾ ಸಮವಸ್ತ್ರ ಧರಿಸಿದ ಹರಿಯಾಣದ ವಿದ್ಯಾರ್ಥಿನಿಯರು ಆಕ್ಷೇಪಾರ್ಹವಾಗಿ ಡ್ಯಾನ್ಸ್ ಮಾಡಿದ್ದಾರೆ ಹಾಗೂ ಅಸಭ್ಯ ಸನ್ನೆಗಳನ್ನು ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂತು. ಇದು ಹರಿಯಾಣದ ಸಂಸ್ಕೃತಿ ಹಾಗೂ ವಿದ್ಯಾರ್ಥಿನಿಯರ ಘನತೆಗೆ ಧಕ್ಕೆ ತಂದಿದೆ ಎಂದು ಅನೇಕರು ದೂರಿದರು. ಈ ಹಾಡಿನ ಸಾಹಿತ್ಯ ಅಸಭ್ಯವಾಗಿದೆ ಎಂದು ಹಲವರು ದೂರು ನೀಡಿದ್ದರು. ಆ ಬಳಿಕ ಹಾಡನ್ನು ರಿಲೀಟ್ ಮಾಡಿದ ಬಾದ್​ಶಾ ಅವರು ಕ್ಷಮೆ ಕೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us