
ದುನಿಯಾ ವಿಜಯ್ (Duniya Vijay) ಕನ್ನಡ ಚಿತ್ರರಂಗದ ಜನಪ್ರಿಯ ನಟ ಮತ್ತು ನಿರ್ದೇಶಕ. ಅವರ ಇಬ್ಬರು ಪುತ್ರಿಯರು ಇದೀಗ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ. ದುನಿಯಾ ವಿಜಯ್ ಅವರ ಕಿರಿಯ ಪುತ್ರಿ ಮೊನಿಷಾ ಅವರು ವಿನಯ್ ರಾಜ್ಕುಮಾರ್ ಜೊತೆಗೆ ‘ಸಿಟಿಲೈಟ್ಸ್’ ಸಿನಿಮಾನಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ವಿಜಿ ಅವರ ಮೊದಲ ಪುತ್ರಿ ರಿತನ್ಯಾ ಅವರು ಈಗಾಗಲೇ ತಂದೆಯ ಜೊತೆಗೆ ‘ಲ್ಯಾಂಡ್ ಲಾರ್ಡ್’ ಸಿನಿಮಾನಲ್ಲಿ ನಟಿಸಿದ್ದಾರೆ. ಆದರೆ ನಾಯಕಿಯಾಗಿ ಈಗ ಹೊಸ ಸಿನಿಮಾ ಮೂಲಕ ಅಧಿಕೃತವಾಗಿ ಎಂಟ್ರಿ ಕೊಡುತ್ತಿದ್ದಾರೆ.
‘ಯಲಾ ಕುನ್ನಿ’ ಸಿನಿಮಾ ಖ್ಯಾತಿಯ ನಿರ್ದೇಶಕ ಪ್ರದೀಪ್ ದಳವಾಯ್ ಹೊಸ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ಸಿನಿಮಾಕ್ಕೆ ‘ಜವರ’ ಎಂದು ಹೆಸರಿಡಲಾಗಿದೆ. ಸಿನಿಮಾನಲ್ಲಿ ‘ಆಪರೇಷನ್ ಅಲಮೇಲಮ್ಮ’ ಖ್ಯಾತಿಯ ನಟ ರಿಷಿ ನಾಯಕನಾಗಿ ನಟಿಸುತ್ತಿದ್ದಾರೆ. ಈ ಸಿನಿಮಾನಲ್ಲಿ ದುನಿಯಾ ವಿಜಯ್ ಮೊದಲ ಪುತ್ರಿ ರಿತನ್ಯಾ ನಾಯಕಿಯಾಗಿ ನಟಿಸಲಿದ್ದಾರೆ. ಚಿದಾವೃಷಭ ಅವರು ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
‘ಜವರ’ ಸಿನಿಮಾದ ಮುಹೂರ್ತ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿಅದ್ದೂರಿಯಾಗಿ ನೆರವೇರಿದೆ. ಸ್ಮಶಾನದಲ್ಲಿ ಶವಗಳನ್ನು ಹೂಳುವ ಕೆಲಸ ಮಾಡುತ್ತಿರುವ ನೀಲಮ್ಮ ‘ಜವರ’ ಸಿನಿಮಾಕ್ಕೆ ಕ್ಲಾಪ್ ಮಾಡುವ ಮೂಲಕ ಸಿನಿಮಾಕ್ಕೆ ಚಾಲನೆ ನೀಡಿದ್ದಾರೆ. ಸಿನಿಮಾದ ವಿಶೇಷ ಪಾತ್ರಗಳಲ್ಲಿ ಹಿರಿಯ ನಟ ರಂಗಾಯಣ ರಘು ಮತ್ತು ನಟಿ ಶ್ರುತಿ ಅವರುಗಳು ನಟಿಸುತ್ತಿದ್ದಾರೆ. ಇವರ ಪಾತ್ರಗಳು ಸಹ ಸಿನಿಮಾದ ಪ್ರಮುಖ ಪಾತ್ರಗಳೇ ಆಗಿರಲಿವೆಯಂತೆ.
ಈ ಸಿನಿಮಾದಲ್ಲಿ ರಿತನ್ಯಾ ವಿಜಿ, ಭೂಮಿ ಹೆಸರಿನ ಪಾತ್ರದಲ್ಲಿ ನಟಿಸಲಿದ್ದಾರೆ. ಈ ಬಗ್ಗೆ ಮಾತನಾಡಿದ ರಿತನ್ಯಾ, ‘ವೈದ್ಯಕೀಯ ವಿದ್ಯಾರ್ಥಿನಿ ಪಾತ್ರದಲ್ಲಿ ನಟಿಸಲಿದ್ದೇನೆ. ದೊಡ್ಡ ದೊಡ್ಡ ಕಲಾವಿದರು ಈ ಸಿನಿಮಾದಲ್ಲಿದ್ದಾರೆ ಅವರ ಜೊತೆ ನಟಿಸುತ್ತಿರುವುದು ತುಂಬಾ ಖುಷಿ ಇದೆ. ನಾನು ತುಂಬಾ ಅದೃಷ್ಟವಂತೆ ಎನಿಸುತ್ತೆ, ಕಲಿಕೆಗೆ ಸಾಕಷ್ಟು ಅವಕಾಶ ಇಲ್ಲಿ ಇದೆ’ ಎಂದರು.
ಇದನ್ನೂ ಓದಿ:ತಮಿಳು ಸಿನಿಮಾ ಚಿತ್ರೀಕರಣ ಮುಗಿಸಿದ ದುನಿಯಾ ವಿಜಯ್: ವಿಡಿಯೋ
ರಂಗಾಯಣ ರಘು ಈ ಸಿನಿಮಾದಲ್ಲಿ ಗೌರಿ ಹೆಸರಿನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಪಾತ್ರದ ಬಗ್ಗೆ ಮಾತನಾಡಿದ ರಂಗಾಯಣ ರಘು ‘ಶ್ರುತಿ ಅವರ ಜೊತೆ ಮತ್ತೆ ನಟಿಸುತ್ತಿದ್ದೀನಿ. ಪಾತ್ರ ತುಂಬಾ ಅದ್ಭುತವಾಗಿದೆ. ಈ ಸಿನಿಮಾದಲ್ಲಿ ನಾನು ಇರುವ ಜಾಗ ತುಂಬಾ ಪ್ರಶಾಂತವಾಗಿರುತ್ತೆ, ಶಿವ ಇರುವ ಜಾಗವದು. ಅಂಥ ಅದ್ಭುತ ಪಾತ್ರದಲ್ಲಿ ನಟಿಸುತ್ತಿದ್ದೇನೆ’ ಎಂದು ಹೇಳಿದರು. ನಟಿ ಶ್ರುತಿ ರಾಯಲ್ ಮೀನಾಕ್ಷಿ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ತನ್ನ ಪಾತ್ರದ ಬಗ್ಗೆ ತುಂಬಾ ಖುಷಿಯಾಗಿರುವ ಶ್ರುತಿ, ‘ಕಥೆ ತುಂಬಾ ಚೆನ್ನಾಗಿದೆ. ಬದುಕೆಲ್ಲ ಮುಗಿದ ಮೇಲೆ ಹೊರಡುವ ಜಾಗದಲ್ಲಿ ಇರ್ತೀನಿ’ ಎಂದು ಹೇಳಿದರು.
ನಟ ರಿಷಿ ರುದ್ರ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಮಾತನಾಡಿ, ಕಥೆ ತುಂಬಾ ಇಷ್ಟವಾಯಿತು, ನಿರ್ದೇಶಕರು ಕಥೆ ಹೇಳುವಾಗಲೇ ಸ್ಕ್ರೀನ್ ಪ್ಲೇ ಕೂಡ ರೆಡಿಮಾಡಿಕೊಂಡಿದ್ದರು. ಅದು ತುಂಬಾ ಇಷ್ಟ ಆಯ್ತು. ನಿರ್ದೇಶಕರು ತುಂಬಾ ಯೋಚಿಸಿ ಮಾಡಿರುವ ಕಥೆ ಇದು.ನಿರ್ದೇಶಕ ಎನ್ನುವುದಕ್ಕಿಂತ ಕ್ರಿಯೇಟಿವ್ ಹೆಡ್ ಎನ್ನುಬಹುದು. ರಿತನ್ಯಾ ತುಂಬಾ ಚೆನ್ನಾಗಿ ನಟಿಸುತ್ತಾರೆ’ ಎಂದು ಹೇಳಿದರು.
ನಿರ್ದೇಶಕ ಪ್ರದೀಪ್ ಈ ಸಿನಿಮಾದಲ್ಲಿ ನಿರ್ದೇಶನದ ಜೊತೆಗೆ ಸಂಭಾಷಣೆಯ ಜಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಧರ್ಮ ವಿಶ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಯಲಾ ಕುನ್ನಿ ಸಿನಿಮಾದಲ್ಲೂ ನಿರ್ದೇಶಕ ಪ್ರದೀಪ್ ಮತ್ತು ಧರ್ಮವಿಶ್ ಒಟ್ಟಿಗೆ ಕೆಲಸ ಮಾಡಿದ್ದರು ಇದೀಗ ಜವರ ಸಿನಿಮಾದಲ್ಲೂ ಇಬ್ಬರ ಕಾಂಬಿನೇಷನ್ ಮುಂದುವರೆದಿರುವುದು ವಿಶೇಷ. ಹಾಲೇಶ್ ಕ್ಯಾಮರಾ ವರ್ಕ್ ಸಿನಿಮಾಗಿರಲಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:48 pm, Sun, 7 December 25