AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮೂರು ನಮ್ಮವರು’ ಆಲ್ಬಂ ಸಾಂಗ್ ಮೂಲಕ ಜನಜಾಗೃತಿ ಮೂಡಿಸುವ ಕೆಲಸ

‘ನಮ್ಮೂರು ನಮ್ಮವರು’ ಹಾಡಿಗೆ ತೇಜಸ್ ಕಿರಣ್ ಹಾಗೂ ಮಯೂರ್ ಅಂಬೆಕಲ್ಲು ಒಟ್ಟಾಗಿ ತಮ್ಮ ಪರಿಕಲ್ಪನೆಯ ದೃಶ್ಯರೂಪ ಕೊಟ್ಟು ನಿರ್ದೇಶನ ಮಾಡಿದ್ದಾರೆ. ಹಾನಗಲ್ ಮೂಲದ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ಸಂದೀಪ್ ಪಾಟೀಲ್ ಈ ಸಾಮಾಜಿಕ ಸಂಘಟನೆಯ ಗೀತೆಗೆ ಬೆಂಬಲವಾಗಿ ನಿಂತಿದ್ದಾರೆ. ‘ಆರೋಹ ಫಿಲಂಸ್’ ಮತ್ತು ‘ಆರಾ ಫಿಲಂಸ್’ ಸಹಯೋಗದಲ್ಲಿ ಈ ಹಾಡು ನಿರ್ಮಾಣವಾಗಿದೆ. ಇತ್ತೀಚೆಗೆ ಈ ಹಾಡು ಬಿಡುಗಡೆ ಆಗಿದೆ.

‘ನಮ್ಮೂರು ನಮ್ಮವರು’ ಆಲ್ಬಂ ಸಾಂಗ್ ಮೂಲಕ ಜನಜಾಗೃತಿ ಮೂಡಿಸುವ ಕೆಲಸ
Nammuru Nammavaru Team
ಮದನ್​ ಕುಮಾರ್​
|

Updated on: Jun 08, 2026 | 8:21 PM

Share

ಇತ್ತೀಚಿನ ದಿನಗಳಲ್ಲಿ ಸರ್ಕಾರ ಮತ್ತು ಸಾಮಾಜಿಕ ವ್ಯವಸ್ಥೆಯಲ್ಲಿ ಮಿತಿಮೀರಿದ ಭ್ರಷ್ಟಾಚಾರದಿಂದ ಬಡವರು, ಜನಸಾಮಾನ್ಯರು ಹೈರಾಣಾಗುತ್ತಿದ್ದಾರೆ. ಭ್ರಷ್ಟಾಚಾರ, ಅನ್ಯಾಯ, ಅಸಮಾನತೆ ವಿರುದ್ಧ ಅಲ್ಲಲ್ಲಿ ಹೋರಾಟಗಳು, ಪ್ರತಿಭಟನೆಗಳು ನಡೆಯುತ್ತಿದ್ದರೂ, ಅದಾವುದಕ್ಕೂ ಇನ್ನೂ ಪೂರ್ಣ ಕಡಿವಾಣವಂತೂ ಬಿದ್ದಿಲ್ಲ ಎಂಬುದು ವಾಸ್ತವ. ಈಗ ಇದೇ ಭ್ರಷ್ಟಾಚಾರ, ಅನ್ಯಾಯ, ಸಾಮಾಜಿಕ ಅಸಮಾನತೆಯ ವಿರುದ್ಧ ಕನ್ನಡ ಚಿತ್ರರಂಗದ ಯುವ ಪ್ರತಿಭೆಗಳ ತಂಡವೊಂದು ‘ನಮ್ಮೂರು ನಮ್ಮವರು’ ಎಂಬ ಮ್ಯೂಸಿಕ್ ವಿಡಿಯೋ (Kannada Album Song) ಮೂಲಕ ಜನಜಾಗೃತಿ ಮೂಡಿಸುವ ಕೆಲಸಕ್ಕೆ ಮುಂದಾಗುತ್ತಿದೆ.

‘ನಮ್ಮೂರು ನಮ್ಮವರು’ ಶೀರ್ಷಿಕೆಯಲ್ಲಿ ತಯಾರಾಗಿರುವ ಈ ಮ್ಯೂಸಿಕ್ ವಿಡಿಯೋದಲ್ಲಿ ‘ಭಾವತೀರ ಯಾನ’ ಚಿತ್ರದ ಹೀರೋ ತೇಜಸ್ ಕಿರಣ್, ‘ಡಿಕೆಡಿ’ ಖ್ಯಾತಿಯ ಶಶಿನ್ ಆರ್. ‘ಶ್ರೀರಾಘವೇಂದ್ರ ಮಹಾತ್ಮೆ’ ಧಾರಾವಾಹಿ ಖ್ಯಾತಿಯ ಭವಾನಿ ಪುರೋಹಿತ್, ‘ಮಗ್ಗಿ ಪುಸ್ತಕ’ ಚಿತ್ರದ ಖ್ಯಾತಿಯ ನಟ ಸಂದೀಪ್ ರಾಜಗೋಪಾಲ್, ನಟರಾದ ಸುನಿಲ್, ಅರುಣ್, ಮುರುಡಯ್ಯ ಸೇರಿದಂತೆ ಅನೇಕ ಕಲಾವಿದರು ತೆರೆಮೇಲೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದಾರೆ.

ಈ ಮೊದಲು ‘ಶಾಖಾಹಾರಿ’, ‘ಭಾವತೀರ ಯಾನ’, ‘ಪಬ್ಬಾರ್’ ಸೇರಿದಂತೆ ಹಲವು ಸದಭಿರುಚಿ ಸಿನಿಮಾಗಳಿಗೆ ವಿಭಿನ್ನ ರೀತಿಯಲ್ಲಿ ಸಂಗೀತ ಸಂಯೋಜಿಸಿ, ಯುವ ಸಂಗೀತ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ಮಯೂರ್ ಅಂಬೇಕಲ್ಲು ಅವರು ‘ನಮ್ಮೂರು ನಮ್ಮವರು’ ಗೀತೆಗೆ ಸಂಗೀತ ಸಂಯೋಜಿಸಿ, ಧ್ವನಿ ನೀಡಿದ್ದಾರೆ. ವಿಶಾಕ್ ನಾಗಲಾಪುರ ಈ ಹಾಡಿನ ಸಾಹಿತ್ಯ ರಚಿಸಿದ್ದಾರೆ.

‘ನಮ್ಮೂರು ನಮ್ಮವರು’ ಮ್ಯೂಸಿಕ್ ವಿಡಿಯೋ:

‘ಭಾವತೀರ ಯಾನ’, ‘ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ’, ‘ಉಡಾಳ’, ‘ಇನ್ ಹಿಸ್ ನೇಮ್’ ಮುಂತಾದ ಸಿನಿಮಾಗಳಿಗೆ ಛಾಯಾಗ್ರಹಣ ಮಾಡಿದ ಅನುಭವ ಹೊಂದಿರುವ ಛಾಯಾಗ್ರಹಕ ಶಿವಶಂಕರ ನೂರಂಬಡ ಅವರು ಈ ಹಾಡಿಗೆ ಛಾಯಾಗ್ರಹಣ ಮಾಡಿದ್ದಾರೆ. ಅನು ರಂಜನ್ ಹೆಚ್.ಆರ್. ಅವರು ಸಂಕಲನ ಮತ್ತು ಡಿಐ ಕೆಲಸ ಮಾಡಿದ್ದಾರೆ. ಶಿಬಿನ್ ನಡು ವೀಟ್ಟಿಲ್ ಆಡಿಯೋಗ್ರಫಿ ಕಾರ್ಯ ನಿರ್ವಹಿಸಿದ್ದಾರೆ.

ಇದನ್ನೂ ಓದಿ: ‘ನೀ ನಂಗೆ ಅಲ್ಲವ’ ಹಾಡನ್ನು ಸಂಜಿತ್ ಹಾಡಿದ್ದು ಯಾರಿಗಾಗಿ? ಉತ್ತರಿಸಿದ ಗಾಯಕ

‘ನಮ್ಮೂರು ನಮ್ಮವರು’ ಮ್ಯೂಸಿಕ್ ವಿಡಿಯೋ ಬಗ್ಗೆ ತಂಡದವರು ಮಾತನಾಡಿದ್ದಾರೆ. ‘ಇದು ಯಾವುದೇ ಫಲಾಪೇಕ್ಷೆ ಇಲ್ಲದೆ ಮಾಡಿರುವ ಒಂದು ಕಾರ್ಯ. ಹಾಡಿನ ಮೂಲಕ ಸಂಘಟನೆಯ ಆಶಯ, ಮಣ್ಣಿನ ನಂಟು, ಜನರ ಆತ್ಮೀಯತೆ ಹಾಗೂ ಸಮುದಾಯದ ಒಗ್ಗಟ್ಟಿನ ದನಿ, ಹಾಗೂ ಅದರ ಶಕ್ತಿಗಳನ್ನು, ಸಂಗೀತ ಮತ್ತು ದೃಶ್ಯ ರೂಪದಲ್ಲಿ ಅಭಿವ್ಯಕ್ತಿಸುವ ಪ್ರಯತ್ನವನ್ನ ಮಾಡಲಾಗಿದೆ. ಇದು ಕೇವಲ ಒಂದು ಗೀತೆಯಲ್ಲ. ಬದ್ಧತೆಯನ್ನು ಪ್ರತಿಧ್ವನಿಸುವ ಸಮೂಹ ಧ್ವನಿಯಾಗಿದೆ. ಈ ಗೀತೆಯ ಮೂಲಕ ನಮ್ಮೂರು ನಮ್ಮವರು ಎಂಬ ದೃಷ್ಟಿಕೋನವನ್ನು ಜನಸಾಮಾನ್ಯರ ಹೃದಯಕ್ಕೆ ಹತ್ತಿರವಾಗುವಂತೆ ಪರಿಚಯಿಸಲಾಗುತ್ತದೆ’ ಎಂದು ತಂಡದವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More