AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರ ಪ್ರಶಸ್ತಿ ವಿಜೇತ ಹಿರಿಯ ನಟ ಸಲೀಂ ಕುಮಾರ್ ನಿಧನ: ಕಂಬನಿ ಮಿಡಿದ ಮಮ್ಮುಟ್ಟಿ

ಖ್ಯಾತ ನಟ ಸಲೀಂ ಕುಮಾರ್ ಅವರು ಅನಾರೋಗ್ಯದಿಂದ ಕೊನೆಯುಸಿರು ಎಳೆದಿದ್ದಾರೆ. ಸುಮಾರು ಮೂರು ದಶಕಗಳ ವೃತ್ತಿಜೀವನದಲ್ಲಿ ಅವರು 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು. ಹಲವು ಪ್ರಶಸ್ತಿಗಳು ಅವರಿಗೆ ಸಿಕ್ಕಿದ್ದವು. ಸಲೀಂ ಕುಮಾರ್ ನಿಧನಕ್ಕೆ ಮಮ್ಮುಟ್ಟಿ, ವಿ.ಡಿ. ಸತೀಶನ್ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ.

ರಾಷ್ಟ್ರ ಪ್ರಶಸ್ತಿ ವಿಜೇತ ಹಿರಿಯ ನಟ ಸಲೀಂ ಕುಮಾರ್ ನಿಧನ: ಕಂಬನಿ ಮಿಡಿದ ಮಮ್ಮುಟ್ಟಿ
Salim KumarImage Credit source: X/@mammukka
ಮದನ್​ ಕುಮಾರ್​
|

Updated on: Jun 07, 2026 | 9:03 AM

Share

ಮಲಯಾಳಂ ಚಿತ್ರರಂಗದ ಖ್ಯಾತ ಹಾಸ್ಯ ಕಲಾವಿದ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಲೀಂ ಕುಮಾರ್ (Salim Kumar) ಶನಿವಾರ (ಜೂನ್ 6) ರಾತ್ರಿ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು. ನ್ಯುಮೋನಿಯಾ ಹಾಗೂ ಲಿವರ್ (Liver) ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಶನಿವಾರ ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಿ ವೆಂಟಿಲೇಟರ್‌ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ 10.43ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಸಲೀಂ ಕುಮಾರ್ ಅವರು ಪತ್ನಿ ಸುನಿತಾ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ಪುತ್ರ ಚಂದು ಇತ್ತೀಚೆಗೆ ಸೂಪರ್ ಹಿಟ್ ಆದ ‘ಮಂಜುಮ್ಮೆಲ್ ಬಾಯ್ಸ್’ ಚಿತ್ರದಲ್ಲಿ ನಟಿಸಿದ್ದರು ಎಂಬುದು ಉಲ್ಲೇಖನೀಯ. ಸಲೀಂ ಕುಮಾರ್ ನಿಧನಕ್ಕೆ ಮಾಲಿವುಡ್ ಚಿತ್ರರಂಗದ ದಿಗ್ಗಜರು ಕಂಬನಿ ಮಿಡಿದಿದ್ದಾರೆ. ಸೂಪರ್ ಸ್ಟಾರ್ ಮಮ್ಮುಟ್ಟಿ ಅವರು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಅತ್ಯಂತ ಭಾವುಕ ಸಾಲುಗಳನ್ನು ಬರೆದುಕೊಂಡಿದ್ದಾರೆ.

‘ಬೇರೆಯವರನ್ನು ನಗಿಸುತ್ತಾ, ಯೋಚಿಸುವಂತೆ ಮಾಡುತ್ತಾ, ಕೆಲವೊಮ್ಮೆ ತಾವೂ ಅತ್ತು ಬೇರೆಯವರನ್ನೂ ಅಳಿಸುತ್ತಿದ್ದ ಸಲೀಂ. ಈಗ ನೀನು ಕೇವಲ ನನ್ನನ್ನು ಕಣ್ಣೀರಿಡುವಂತೆ ಮಾಡಿ ಹೊರಟುಹೋಗಿದ್ದೀಯ. ನಿನ್ನ ಈ ಅಗಲಿಕೆ ಎಂದಿಗೂ ಮುಗಿಯದ ಮೌನ ಮತ್ತು ಅಪಾರ ದುಃಖವನ್ನು ತಂದಿದೆ ಸಹೋದರ’ ಎಂದು ಮಮ್ಮುಟ್ಟಿ ಕಣ್ಣೀರು ಹಾಕಿದ್ದಾರೆ.

90ರ ದಶಕದ ಕೊನೆಯಲ್ಲಿ ಮಿಮಿಕ್ರಿ ಮತ್ತು ಹಾಸ್ಯ ಕಲಾವಿದರಾಗಿ ಚಿತ್ರರಂಗಕ್ಕೆ ಪ್ರವೇಶಿಸಿದ ಸಲೀಂ ಕುಮಾರ್, ಕೇವಲ ಕಾಮಿಡಿ ಪಾತ್ರಗಳಿಗೆ ಸೀಮಿತವಾಗದೆ ಅದ್ಭುತ ಪೋಷಕ ನಟನಾಗಿ ಗುರುತಿಸಿಕೊಂಡರು. 2005ರಲ್ಲಿ ‘ಅಚ್ಚನುರಂಗತ ವೀಡು’ ಚಿತ್ರದ ನಟನೆಗಾಗಿ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದರು. ಇನ್ನು 2010ರಲ್ಲಿ ತೆರೆಕಂಡ ‘ಆದಾಮಿಂತೆ ಮಕನ್ ಅಬು’ ಚಿತ್ರದ ಅಭಿನಯಕ್ಕಾಗಿ ಅವರಿಗೆ ರಾಷ್ಟ್ರ ಪ್ರಶಸ್ತಿ ಒಲಿದಿತ್ತು.

ಇದನ್ನೂ ಓದಿ: ಖ್ಯಾತ ನಿರ್ಮಾಪಕ, ಸಿಬಿಎಫ್‌ಸಿ ಮಾಜಿ ಅಧ್ಯಕ್ಷ ಪಹ್ಲಾಜ್ ನಿಹಲಾನಿ ನಿಧನ

ಕೇರಳದ ಸಿಎಂ ವಿ.ಡಿ. ಸತೀಶನ್ ಸೇರಿದಂತೆ ಹಲವು ಗಣ್ಯರು ಸಲೀಂ ಕುಮಾರ್ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. ‘ಅವರು ಕೇವಲ ಒಬ್ಬ ಚಿತ್ರನಟನಷ್ಟೇ ಅಲ್ಲ, ನಮಗೆ ಕುಟುಂಬದ ಸದಸ್ಯರಂತಿದ್ದರು’ ಎಂದು ಸತೀಶನ್ ಸ್ಮರಿಸಿದ್ದಾರೆ. ಸಲೀಂ ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಮಲಯಾಳಂ ಚಿತ್ರರಂಗದ ನಟ ದಿಲೀಪ್ ಸೇರಿದಂತೆ ಹಲವು ತಾರೆಯರು ಆಸ್ಪತ್ರೆಗೆ ಧಾವಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More