ಶಸ್ತ್ರ ಚಿಕಿತ್ಸೆ ಬಳಿಕ ಪವನ್ ಕಲ್ಯಾಣ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಚಿರಂಜೀವಿ
ಏಕಾಏಕಿ ಅನಾರೋಗ್ಯಕ್ಕೆ ಒಳಗಾದ ಪವನ್ ಕಲ್ಯಾಣ್ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಈ ಬಗ್ಗೆ ಅಭಿಮಾನಿಗಳಿಗೆ ಆತಂಕ ಮೂಡಿದೆ. ಅವರ ಆರೋಗ್ಯದ ಪರಿಸ್ಥಿತಿ ಈಗ ಹೇಗಿದೆ ಎಂಬುದರ ಬಗ್ಗೆ ಸಹೋದರ ಚಿರಂಜೀವಿ ಅವರು ಅಪ್ಡೇಟ್ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಖ್ಯಾತ ನಟ ಪವನ್ ಕಲ್ಯಾಣ್ (Pawan Kalyan) ಅವರು ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದ ಲಕ್ಷಾಂತರ ಅಭಿಮಾನಿಗಳಿಗೆ ಮೆಗಾ ಸ್ಟಾರ್ ಚಿರಂಜೀವಿ (Chiranjeevi) ಅವರು ಅಪ್ಡೇಟ್ ನೀಡುವ ಮೂಲಕ ಸಮಾಧಾನ ಪಡಿಸಿದ್ದಾರೆ. ಪವನ್ ಕಲ್ಯಾಣ್ ಅವರ ಆರೋಗ್ಯದ ಬಗ್ಗೆ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಚಿರಂಜೀವಿ, ‘ಕಲ್ಯಾಣ್ ಬಾಬು ಯಶಸ್ವಿಯಾಗಿ ವೈದ್ಯಕೀಯ ಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಈಗ ಸುರಕ್ಷಿತವಾಗಿದ್ದಾರೆ. ಆರೋಗ್ಯ ಸ್ಥಿರವಾಗಿದೆ ಮತ್ತು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ’ ಎಂದು ಬರೆದುಕೊಂಡಿದ್ದಾರೆ.
ವೈದ್ಯರ ಸಲಹೆಯಂತೆ ಪವನ್ ಕಲ್ಯಾಣ್ ಅವರು ಇನ್ನು ಒಂದು ವಾರದಲ್ಲಿ ತಮ್ಮ ಎಂದಿನ ದಿನಚರಿಗೆ ಮರಳಲಿದ್ದಾರೆ ಎಂದು ಚಿರಂಜೀವಿ ಭರವಸೆ ವ್ಯಕ್ತಪಡಿಸಿದ್ದಾರೆ. ‘ನಿಮ್ಮ ಪ್ರೀತಿ, ಕಾಳಜಿ ಮತ್ತು ಪ್ರಾರ್ಥನೆಗಳಿಗೆ ಧನ್ಯವಾದಗಳು. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವೆಲ್ಲರೂ ಹಾರೈಸೋಣ’ ಎಂದು ಅವರು ತಿಳಿಸಿದ್ದಾರೆ. ಇದನ್ನು ಕೇಳಿ ಅಭಿಮಾನಿಗಳಿಗೆ ಸಮಾಧಾನ ಆಗಿದೆ.
ಆಂಧ್ರ ಉಪಮುಖ್ಯಮಂತ್ರಿಗಳ ಕಚೇರಿಯ ಅಧಿಕೃತ ಹೇಳಿಕೆಯ ಪ್ರಕಾರ, ಶುಕ್ರವಾರ (ಏಪ್ರಿಲ್ 17) ಬೆಳಿಗ್ಗೆ ಅಧಿಕಾರಿಗಳೊಂದಿಗೆ ಆಡಳಿತಾತ್ಮಕ ವಿಷಯಗಳ ಬಗ್ಗೆ ಚರ್ಚಿಸುತ್ತಿದ್ದಾಗ ಪವನ್ ಕಲ್ಯಾಣ್ ಅವರು ಇದ್ದಕ್ಕಿದ್ದಂತೆಯೇ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಕಳೆದ ಕೆಲವು ತಿಂಗಳುಗಳಿಂದ ಅವರು ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರು.
Kalyan Babu has successfully undergone a medical procedure and is now safe, stable, and recovering well.
As per the doctors, it may take about a week for him to return to his normal routine. There is no cause for concern.
Thank you all for your love, concern, and prayers. Let…
— Chiranjeevi Konidela (@KChiruTweets) April 19, 2026
ಶುಕ್ರವಾರ ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಎಂಆರ್ಐ ಸೇರಿದಂತೆ ಹಲವು ಪರೀಕ್ಷೆಗಳನ್ನು ನಡೆಸಲಾಯಿತು. ಪರೀಕ್ಷಾ ವರದಿಗಳನ್ನು ಪರಿಶೀಲಿಸಿದ ವೈದ್ಯರು ಶಸ್ತ್ರಚಿಕಿತ್ಸೆ ಅನಿವಾರ್ಯ ಎಂದು ನಿರ್ಧರಿಸಿದರು. ಅದರಂತೆ ಶನಿವಾರ ಸಂಜೆ ಅವರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಲಾಯಿತು. ಶಸ್ತ್ರಚಿಕಿತ್ಸೆಯ ನಂತರ ವೈದ್ಯರು ಪವನ್ ಕಲ್ಯಾಣ್ ಅವರಿಗೆ ಕನಿಷ್ಠ 10 ದಿನಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ.
ಇದನ್ನೂ ಓದಿ: ಹನುಮ ಜಂತಿಯಂದು ಮೆಗಾಸ್ಟಾರ್ ಚಿರಂಜೀವಿ ಮನೆಯಲ್ಲಿ ನಡೆಯಿತು ಅದ್ಭುತ
ಸದ್ಯಕ್ಕೆ ಅವರು ತಮ್ಮ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಒಂದು ವಾರ ಅಥವಾ ಹತ್ತು ದಿನಗಳ ನಂತರ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳಬಹುದು ಎಂದು ಹೇಳಲಾಗಿದ್ದರೂ, ಸಂಪೂರ್ಣ ಗುಣಮುಖರಾಗಲು ದೀರ್ಘಕಾಲದ ಮುನ್ನೆಚ್ಚರಿಕೆಗಳನ್ನು ವಹಿಸುವುದು ಅವಶ್ಯಕ ಎಂದು ವೈದ್ಯಕೀಯ ತಂಡ ತಿಳಿಸಿದೆ. ಪವನ್ ಕಲ್ಯಾಣ್ ಶೀಘ್ರವಾಗಿ ಗುಣಮುಖರಾಗಲಿ ಎಂದು ರಾಜಕೀಯ ಗಣ್ಯರು ಮತ್ತು ಚಿತ್ರರಂಗದ ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಾರೈಸುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 5:54 pm, Mon, 20 April 26




