AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಟ್ನೆಸ್​ಗೆ ಒತ್ತು ನೀಡುತ್ತಿದ್ದ ಪುನೀತ್ ಸಾವು ವಿಧಿಯ ಕ್ರೂರತನಕ್ಕೆ ಸಾಕ್ಷಿ; ಡಿಕೆ ಶಿವಕುಮಾರ್

ಫಿಟ್ನೆಸ್ ವಿಚಾರವಾಗಿ ಪುನೀತ್ ರಾಜ್​ಕುಮಾರ್ ಯುವಕರಿಗೆ ರೋಲ್ ಮಾಡೆಲ್ ಆಗಿದ್ದರು. ಅಂತಹವರನ್ನು ಭಗವಂತ ಇಷ್ಟು ಬೇಗ ಕರೆಸಿಕೊಳ್ಳುತ್ತಾನೆ ಎಂದು ಕನಸಿನಲ್ಲಿಯೂ ಊಹಿಸಿರಲಿಲ್ಲ ಎಂದು ಡಿ.ಕೆ. ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.

ಫಿಟ್ನೆಸ್​ಗೆ ಒತ್ತು ನೀಡುತ್ತಿದ್ದ ಪುನೀತ್ ಸಾವು ವಿಧಿಯ ಕ್ರೂರತನಕ್ಕೆ ಸಾಕ್ಷಿ; ಡಿಕೆ ಶಿವಕುಮಾರ್
ಪುನೀತ್ ರಾಜ್​ಕುಮಾರ್- ಡಿಕೆ ಶಿವಕುಮಾರ್
TV9 Web
| Updated By: ಸುಷ್ಮಾ ಚಕ್ರೆ|

Updated on:Oct 29, 2021 | 3:13 PM

Share

ಬೆಂಗಳೂರು: ಸ್ಯಾಂಡಲ್​ವುಡ್​ನ ಪವರ್ ಸ್ಟಾರ್, ಆಪ್ತರು ಹಾಗೂ ಅಭಿಮಾನಿಗಳಿಂದ ಅಪ್ಪು ಎಂದೇ ಕರೆಸಿಕೊಳ್ಳುತ್ತಿದ್ದ ಪುನೀತ್ ರಾಜ್​ಕುಮಾರ್ ತಮ್ಮ 46ನೇ ವಯಸ್ಸಿನಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಎಸ್​.ಎಂ. ಕೃಷ್ಣ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಪ್ರಧಾನಿ ದೇವೇಗೌಡರು ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಡಾ. ರಾಜ್​ಕುಮಾರ್ ಕುಟುಂಬದ ಜೊತೆ ಆಪ್ತ ಸಂಬಂಧ ಹೊಂದಿದ್ದ ಡಿಕೆ ಶಿವಕುಮಾರ್ ಅಪ್ಪು ಜೊತೆಗಿನ ತಮ್ಮ ಒಡನಾಟವನ್ನು ಮೆಲುಕು ಹಾಕಿದ್ದಾರೆ.

ನನ್ನ ನೆರೆಹೊರೆಯವರಾದ, ಸ್ವಂತ ಸಹೋದರನಂತಿದ್ದ ಪುನೀತ್ ಇನ್ನಿಲ್ಲ ಎಂಬ ಸುದ್ದಿಯನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಇಷ್ಟು ಚಿಕ್ಕವಯಸ್ಸಿನಲ್ಲಿ ಅವರನ್ನು ಕೊಂಡೊಯ್ದ ವಿಧಿ ಬಹಳ ಕ್ರೂರಿ. ಪುನೀತ್ ರಾಜ್​ಕುಮಾರ್ ನನಗೆ ಆತ್ಮೀಯರಾಗಿದ್ದರು. ನಮ್ಮ ಕುಟುಂಬದ ಆತ್ಮೀಯ ಸ್ನೇಹಿತರಾಗಿದ್ದರು. ನಮ್ಮಿಬ್ಬರ ಕುಟುಂಬ ಸದಸ್ಯರ ನಡುವೆ ಉತ್ತಮ ಒಡನಾಟವಿತ್ತು. ಅವರಿಗೆ ಯಾವ ಕೆಟ್ಟ ಅಭ್ಯಾಸವೂ ಇರಲಿಲ್ಲ. ಬೇರೆ ಅಭ್ಯಾಸ ಅಂಟಿಸಲು, ರಾಜಕಾರಣಕ್ಕೂ ಎಳೆಯಲು ನಾವು ಸಾಕಷ್ಟು ಪ್ರಯತ್ನ ಮಾಡಿದ್ದೆವು. ಆದರೆ, ಅದು ಸಾಧ್ಯವಾಗಿರಲಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ನಾವಿಬ್ಬರೂ ಒಟ್ಟಿಗೆ ವಾಕಿಂಗ್ ಮಾಡಿದ್ದೇವೆ. ಜಿಮ್ ಮಾಡಿದ್ದೇವೆ. ಚಿತ್ರರಂಗ ಸೇರಿ ಅನೇಕ ವಿಚಾರಗಳನ್ನು ಚರ್ಚೆ ಮಾಡಿದ್ದೇವೆ. ಶಿಸ್ತುಬದ್ಧ ಜೀವನ, ಕಟ್ಟುನಿಟ್ಟಿನ ವ್ಯಾಯಾಮದ ಮೂಲಕ ಪುನೀತ್ ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದರು. ಫಿಟ್ನೆಸ್ ವಿಚಾರವಾಗಿ ಯುವಕರಿಗೆ ರೋಲ್ ಮಾಡೆಲ್ ಆಗಿದ್ದರು. ಅಂತಹವರನ್ನು ಭಗವಂತ ಇಷ್ಟು ಬೇಗ ಕರೆಸಿಕೊಳ್ಳುತ್ತಾನೆ ಎಂದು ಕನಸಿನಲ್ಲಿಯೂ ಊಹಿಸಿರಲಿಲ್ಲ ಎಂದು ಡಿ.ಕೆ. ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.

6 ತಿಂಗಳ ಮಗುವಾಗಿದ್ದಾಗಿನಿಂದಲೇ ರಾಜ್ ಕುಮಾರ್ ಅವರ ಚಿತ್ರಗಳಲ್ಲಿ ನಟಿಸಿದ್ದ ಪುನೀತ್, ನಂತರ ವಸಂತಾ ಗೀತಾ, ಚಲಿಸುವ ಮೋಡಗಳು, ಬೆಟ್ಟದ ಹೂವು ಸೇರಿದಂತೆ ಅನೇಕ ಚಿತ್ರಗಳಲ್ಲಿ ಬಾಲ ನಟರಾಗಿ ಮನ ಗೆದ್ದಿದ್ದರು. ಬೆಟ್ಟದ ಹೂವು ಚಿತ್ರದ ನಟನೆಗೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ಇಡೀ ಕುಟುಂಬದವರು ಕುಳಿತುಕೊಂಡು ನೋಡುವಂತಹ ಸಿನಿಮಾ ಮಾಡುತ್ತಿದ್ದವರು ಪುನೀತ್. ನಾನು ರಾಜ್ ಕುಮಾರ್ ಚಿತ್ರಗಳನ್ನು ನೋಡುತ್ತಾ ಬೆಳೆದವನು. ಅದೇ ರೀತಿ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಪುನೀತ್ ಅವರ ಚಿತ್ರಗಳನ್ನು ನೋಡುತ್ತಾ ಬಂದಿದ್ದೇನೆ. ಒಬ್ಬರಿಗಿಂತ ಮತ್ತೊಬ್ಬರು ಮಿಗಿಲಾದ ನಟರು ಎಂದು ಡಿಕೆ ಶಿವಕುಮಾರ್ ನೆನಪಿಸಿಕೊಂಡಿದ್ದಾರೆ.

ಪುನೀತ್ ರಾಜ್​ಕುಮಾರ್ ಅಗಲಿಕೆ ಕೇವಲ ಚಿತ್ರರಂಗಕ್ಕಷ್ಟೇ ಅಲ್ಲ, ಇಡೀ ನಾಡಿಗೆ ತುಂಬಲಾರದ ನಷ್ಟ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರಿಗಷ್ಟೇ ಅಲ್ಲ, ಇಡೀ ನಾಡಿಗೇ ಆ ಭಗವಂತ ನೀಡಲಿ ಎಂದು ಶಿವಕುಮಾರ್ ಅವರು ಶೋಕಸಂದೇಶದಲ್ಲಿ ತಿಳಿಸಿದ್ದಾರೆ.

ಪುನೀತ್ ರಾಜ್​ಕುಮಾರ್ ಅವರಿಗೆ ಕೇವಲ 46 ವರ್ಷವಾಗಿತ್ತು. ಇಂದು ಬೆಳಗ್ಗೆ ಜಿಮ್​ನಲ್ಲಿ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಇಂದು ಬೆಳಿಗ್ಗೆ 11.30ಕ್ಕೆ ಪುನೀತ್​ ಅವರಿಗೆ ಹೃದಯಾಘಾತವಾಗಿದ್ದು, ಮನೆಯ ಬಳಿಯೇ ಇರುವ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಂಡಿದ್ದರು. ಬಳಿಕ ಅವರು ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಪುನೀತ್​ ರಾಜ್​ಕುಮಾರ್​ ನಿಧನ; ಕ್ಷಣಕ್ಷಣದ ಮಾಹಿತಿಗೆ ಇಲ್ಲಿ ಕ್ಲಿಕ್​ ಮಾಡಿ

ಇದನ್ನೂ ಓದಿ: Puneeth Rajkumar Eye Donation: ಅಪ್ಪನ ಹಾದಿಯಲ್ಲೇ ಸಾಗಿದ ಯುವ ನಟ ಪುನೀತ್​ ರಾಜ್​ ಕುಮಾರ್​ರಿಂದ ನೇತ್ರ ದಾನ

Puneeth Rajkumar Obituary: ಹೃದಯ ಬಡಿತ ನಿಲ್ಲಿಸುವುದಕ್ಕೂ ಮುನ್ನ ಕೋಟ್ಯಂತರ ಜನರ ಹೃದಯ ಗೆದ್ದಿದ್ದ ಪುನೀತ್

Published On - 3:11 pm, Fri, 29 October 21