ಆಸ್ಪತ್ರೆಯಿಂದ ಮನೆಗೆ ಮರಳಿದ ರಜನಿಕಾಂತ್​; ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ ಸೂಪರ್ ಸ್ಟಾರ್

ರಜನಿಕಾಂತ್​ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ತಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿದ ಎಲ್ಲರಿಗೂ ಅವರು ಧನ್ಯವಾದ ತಿಳಿಸಿದ್ದಾರೆ. ಅಮಿತಾಭ್​ ಬಚ್ಚನ್​, ನರೇಂದ್ರ ಮೋದಿ, ಚಂದ್ರಬಾಬು ನಾಯ್ಡು ಸೇರಿದಂತೆ ಹಲವು ಗಣ್ಯರಿಗೆ ರಜನಿ ಥ್ಯಾಂಕ್ಸ್​ ಹೇಳಿದ್ದಾರೆ. ಅಲ್ಲದೇ ಅಭಿಮಾನಿಗಳು, ಸೆಲೆಬ್ರಿಟಿಗಳು ಹಾಗೂ ಆಪ್ತರಿಗೂ ಅವರು ಧನ್ಯವಾದ ಸಲ್ಲಿಸಿದ್ದಾರೆ.

ಆಸ್ಪತ್ರೆಯಿಂದ ಮನೆಗೆ ಮರಳಿದ ರಜನಿಕಾಂತ್​; ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ ಸೂಪರ್ ಸ್ಟಾರ್
ರಜನಿಕಾಂತ್​, ನರೇಂದ್ರ ಮೋದಿ

Updated on: Oct 04, 2024 | 9:08 PM

‘ಸೂಪರ್​ ಸ್ಟಾರ್​’ ರಜನಿಕಾಂತ್ ಅವರಿಗೆ ಇತ್ತೀಚೆಗೆ ಆರೋಗ್ಯ ಸಮಸ್ಯೆ ಎದುರಾಗಿತ್ತು. ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಯಿತು. ಹೃದಯ ಸಂಬಂಧಿ ಸಮಸ್ಯೆ ಉಂಟಾಗಿದ್ದರಿಂದ ಅವರಿಗೆ ಸ್ಟೆಂಟ್​ ಹಾಕಲಾಗಿದೆ. ಈಗ ರಜನಿಕಾಂತ್​ ಅವರು ಡಿಸ್ಚಾರ್ಜ್​ ಆಗಿ ಮನೆಗೆ ಬಂದಿದ್ದಾರೆ. ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿ ಅವರು ವಿಶ್ರಾಂತಿ ಪಡೆಯಬೇಕಿದೆ. ರಜನಿಕಾಂತ್​ ಆಸ್ಪತ್ರೆಗೆ ಸೇರಿದಾಗ ಅವರ ಆರೋಗ್ಯಕ್ಕಾಗಿ ಅನೇಕರು ಪ್ರಾರ್ಥಿಸಿದ್ದರು. ಅವರೆಲ್ಲರಿಗೂ ಈಗ ರಜನಿ ಧನ್ಯವಾದ ತಿಳಿಸಿದ್ದಾರೆ. ನರೇಂದ್ರ ಮೋದಿ, ಅಮಿತಾಭ್​ ಬಚ್ಚನ್​ ಸೇರಿದಂತೆ ಹಲವರಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ.

ಗುರುವಾರ (ಅ.3) ರಾತ್ರಿ ರಜನಿಕಾಂತ್ ಅವರ ಡಿಸ್ಚಾರ್ಜ್​ ಆಗಿದೆ. ಮನೆಗೆ ಮರಳಿದ ಬಳಿಕ ಸ್ವಲ್ಪ ಚೇತರಿಸಿಕೊಂಡ ಅವರು ಸೋಶಿಯಲ್​ ಮೀಡಿಯಾದಲ್ಲಿ ಸರಣಿ ಪೋಸ್ಟ್​ ಮಾಡಿದ್ದಾರೆ. ತಮ್ಮ ಬಗ್ಗೆ ಕಾಳಜಿ ತೋರಿಸಿ ರಾಜಕೀಯದ ಗಣ್ಯರು, ಅಭಿಮಾನಿಗಳು, ಮಾಧ್ಯಮದವರು, ಸಿನಿಮಾದ ಸೆಲೆಬ್ರಿಟಿಗಳು ಹಾಗೂ ಆಪ್ತರಿಗೆ ಧನ್ಯವಾದ ಎಂದು ಅವರು ತಮಿಳಿನಲ್ಲಿ ಪೋಸ್ಟ್​ ಮಾಡಿದ್ದಾರೆ.

ವಿಶೇಷವಾಗಿ ನರೇಂದ್ರ, ಅಮಿತಾಭ್​ ಬಚ್ಚನ್​, ಚಂದ್ರಬಾಬು ನಾಯ್ಡು, ತಮಿಳುನಾಡು ಗವರ್ನರ್​ ರವಿ ಅವರಿಗೆ ರಜನಿಕಾಂತ್ ಧನ್ಯವಾದ ತಿಳಿಸಿದ್ದಾರೆ. ‘ನನ್ನ ಆರೋಗ್ಯದ ಬಗ್ಗೆ ಕಾಳಜಿ ತೋರಿಸಿದ್ದಕ್ಕೆ ಮತ್ತು ವೈಯಕ್ತಿಕವಾಗಿ ವಿಚಾರಿಸಿದ್ದಕ್ಕಾಗಿ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು’ ಎಂದು ರಜನಿಕಾಂತ್​ ಅವರು ‘ಎಕ್ಸ್​’ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ರಜನಿಕಾಂತ್​ಗೆ ಹೃದಯ ಸಮಸ್ಯೆ: ಸ್ಟೆಂಟ್ ಹಾಕಲಾಗಿದೆ; ಆರೋಗ್ಯದ ಬಗ್ಗೆ ಆಸ್ಪತ್ರೆಯಿಂದ ಮಾಹಿತಿ

‘ಅಮಿತಾಭ್ ಬಚ್ಚನ್​ ಅವರೇ.. ನೀವು ತೋರಿಸಿದ ಪ್ರೀತಿ ಮತ್ತು ಕಾಳಜಿಗೆ ಧನ್ಯವಾದಗಳು’ ಎಂದು ಕೂಡ ರಜನಿಕಾಂತ್ ಅವರು ಪೋಸ್ಟ್ ಮಾಡಿದ್ದಾರೆ. ಅವರಿಗೆ ಈಗ 73 ವರ್ಷ ವಯಸ್ಸು. ಈ ಮೊದಲು ಅವರು ಅನೇಕ ಬಾರಿ ಆಸ್ಪತ್ರೆಗೆ ತೆರಳಿದ್ದರು. ವಯೋ ಸಹಜವಾಗಿ ಅವರಿಗೆ ಆರೋಗ್ಯ ಆಗಾಗ ಕೈಕೊಡುತ್ತಿದೆ. ಆದ್ದರಿಂದ ಅಭಿಮಾನಿಗಳಿಗೆ ಆತಂಕ ಆಗಿತ್ತು. ಈಗ ಅವರು ಡಿಸ್ಚಾರ್ಜ್​ ಆಗಿ ಮನೆಗೆ ಮರಳಿರುವ ವಿಷಯ ತಿಳಿದು ಅಭಿಮಾನಿಗಳಿಗೆ ಸಮಾಧಾನ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us