
ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ವಿಚಾರಣೆ ಚಾಲ್ತಿಯಲ್ಲಿರುವಾಗಲೇ, ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಬೆಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದರು. ಇದೀಗ ಆ ಮೂವರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಸಾಕ್ಷಿಯೊಂದಕ್ಕೆ ಬೆದರಿಕೆ ಹಾಕಿದ ಆರೋಪದ ಮೇಲೆ ಸುಹಾಸ್, ವೈಭವ್ ಮತ್ತು ಪುನೀತ್ ಎಂಬುವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದರು. ಈ ಮೂವರು ಆರೋಪಿಗಳಿಗೆ 59ನೇ ಸಿಸಿಎಚ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಬಂಧಿತರಾಗಿದ್ದ ಸುಹಾಸ್, ವೇಣು ಮತ್ತು ಪುನೀತ್ ಅವರುಗಳು ದರ್ಶನ್ ಅಭಿಮಾನಿಗಳಾಗಿದ್ದು, ಮೂವರು ಮೂಲತಃ ತುಮಕೂರಿನವರು. ಪುನೀತ್ ʻಡಿ-ಕಮ್ಯುನಿಟಿʼ ಫೇಸ್ಬುಕ್ ಪೇಜ್ನ ಅಡ್ಮಿನ್ ಸಹ ಆಗಿದ್ದ. ಆರೋಪಿಗಳ ಬಂಧಿಸಿದ್ದ ಕಾಮಾಕ್ಷಿಪಾಳ್ಯ ಪೊಲೀಸರು ಆರೋಪಿಗಳ ಮೊಬೈಲ್ ವಶಕ್ಕೆ ಪಡೆದು ಫಾರೆನ್ಸಿಕ್ ಲ್ಯಾಬ್ಗೆ ಕಳಿಸಿದ್ದರು. ಈ ಮೂವರ ಹಿಂದೆ ಪ್ರಭಾವಿಗಳು ಇದ್ದಾರೆಂಬ ಗುಮಾನಿಯನ್ನು ಸಹ ವ್ಯಕ್ತಪಡಿಸಲಾಗಿತ್ತು. ಆದರೆ ಈಗ ಆರೋಪಿಗಳು ಜಾಮೀನು ಪಡೆಯುವಲ್ಲಿ ಯಶಸ್ವಿ ಆಗಿದ್ದಾರೆ.
ಇದನ್ನೂ ಓದಿ:ರೇಣುಕಾ ಸ್ವಾಮಿ ಪ್ರಕರಣ: ಆರೋಪಿ ಪವನ್ ವಕೀಲರಿಗೆ ದಂಡ
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಗಳಲ್ಲಿ ಒಬ್ಬರಾಗಿರುವ ಸಂದೀಪ್ ಎನ್ನುವರಿಗೆ ಈ ಮೂವರು ಬೆದರಿಕೆ ಹಾಕಿದ್ದರು ಹಾಗೂ ಸುಳ್ಳು ಮಾಹಿತಿಯನ್ನು ನ್ಯಾಯಾಲಯಕ್ಕೆ ನೀಡುವಂತೆ ಸೂಚಿಸಿದ್ದರು ಎನ್ನಲಾಗಿದೆ. ಆದರೆ ಸಂದೀಪ್ ಅವರು ನ್ಯಾಯಾಲಯದಲ್ಲಿ ಹೇಳಿಕೆ ನೀಡುವಾಗ ತಮಗೆ ಬೆದರಿಕೆ ಹಾಕಿರುವ ಬಗ್ಗೆ ನ್ಯಾಯಾಧೀಶರ ಮುಂದೆ ನುಡಿದಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಕಾಮಾಕ್ಷಿಪಾಳ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವರ ವಿಚಾರಣೆ ಚಾಲ್ತಿಯಲ್ಲಿದೆ. ಸುಪ್ರೀಂ ಕೋರ್ಟ್, ಒಂದು ವರ್ಷದ ಗಡುವನ್ನು ಕೆಳಹಂತದ ನ್ಯಾಯಾಲಯಕ್ಕೆ ನೀಡಿದ್ದು, ವರ್ಷದ ಒಳಗಾಗಿ ನಿಯಮಿತ ಸಂಖ್ಯೆಯ ಸಾಕ್ಷಿಗಳ ವಿಚಾರಣೆ ನಡೆಯದೇ ಹೋದಲ್ಲಿ ದರ್ಶನ್, ಜಾಮೀನಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈಗ ನ್ಯಾಯಾಲಯವು ತ್ವರಿತವಾಗಿ ಸಾಕ್ಷಿಗಳ ವಿಚಾರಣೆಯನ್ನು ನಡೆಸುತ್ತಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:10 pm, Tue, 28 July 26