ಬದಲಾಗಲಿದ್ದಾರೆ ದರ್ಶನ್ ಕೇಸ್ ವಿಚಾರಣೆ ನಡೆಸುತ್ತಿರುವ ಜಡ್ಜ್; ಕಾರಣ ಇಲ್ಲಿದೆ
ದರ್ಶನ್ಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಒಂದು ವರ್ಷದವರೆಗೆ ಜಾಮೀನು ಸಿಗುವುದು ಕಷ್ಟ ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಪ್ರಕರಣದ ವಿಚಾರಣೆ ನಡೆಸುವ ಕೋರ್ಟ್ ಮತ್ತು ನ್ಯಾಯಾಧೀಶರು ಬದಲಾಗಿದ್ದು, ಹೊಸದಾಗಿ ಜಡ್ಜ್ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು ಜವಾಬ್ದಾರಿ ವಹಿಸಲಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದಂತೆ ಪ್ರಕರಣವು ಒಂದು ವರ್ಷದೊಳಗೆ ನಿರಂತರ ವಿಚಾರಣೆಗೆ ಒಳಪಡುವ ಸಾಧ್ಯತೆ ಇದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ಗೆ (Darshan) ಸದ್ಯಕ್ಕೆ ಜಾಮೀನು ಸೀಗೋದಿಲ್ಲ ಎಂಬುದು ಖಾತ್ರಿಯಾಗಿದೆ. ಮುಂದಿನ ವರ್ಷ ಮೇ ಒಳಗೆ ಪ್ರಕರಣದ ವಿಚಾರಣೆ ಪೂರ್ಣಗೊಳ್ಳದಿದ್ದರೆ ದರ್ಶನ್ ಜಾಮೀನು ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂಕೋರ್ಟ್ ಇತ್ತೀಚೆಗೆ ಹೇಳಿದೆ. ಈ ಬೆನ್ನಲ್ಲೇ ಒಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ ಕೋರ್ಟ್ ಮತ್ತು ಜಡ್ಜ್ ಬದಲಾಗಲಿದ್ದಾರೆ.
ಕೆಲ ಕೋರ್ಟ್ಗಳ ಪೊಲೀಸ್ ಠಾಣೆ ವ್ಯಾಪ್ತಿ ಮರು ನಿಗದಿ ಆಗಿದೆ, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಈ ಕೇಸ್ ಸಿಸಿಹೆಚ್ 57ರನಿಂದ ಸಿಸಿಹೆಚ್ 59ನೇ ಕೋರ್ಟ್ಗೆ ವರ್ಗಾವಣೆಯಾಗಲಿದೆ. ಸಿಟಿ ಸಿವಿಲ್ ಕೋರ್ಟ್ನ ಡೆಪ್ಯುಟಿ ರಿಜಿಸ್ಟ್ರಾರ್ ಈ ಕುರಿತು ಆದೇಶ ಹೊರಡಿಸಿದ್ದು, ಜೂನ್ 1ರಿಂದ ಅಧಿಕೃತವಾಗಿ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ. ಹೊಸದಾಗಿ ಜಡ್ಜ್ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು ಈ ಹೈಪ್ರೊಫೈಲ್ ಪ್ರಕರಣದ ವಿಚಾರಣೆ ನಡೆಸಲಿದ್ದಾರೆ.
ಒಂದು ವರ್ಷದ ಒಳಗಾಗಿ ಈ ಪ್ರಕರಣದ ಎಲ್ಲಾ ಸಾಕ್ಷಿಗಳ ವಿಚಾರಣೆಯನ್ನು ಪೂರ್ಣಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಕಡಕ್ ಸೂಚನೆ ನೀಡಿದೆ. ಸುಪ್ರೀಂ ಕೋರ್ಟ್ನ ಈ ಆದೇಶದ ಪ್ರತಿಯನ್ನು ದರ್ಶನ್ ಪರ ವಕೀಲರು ಈಗಾಗಲೇ ಸೆಷನ್ಸ್ ಕೋರ್ಟ್ಗೆ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಕೋರ್ಟ್ ವಾರಕ್ಕೆ ಕನಿಷ್ಠ ಎರಡು ಬಾರಿ, ಅಥವಾ ವಾರದಲ್ಲಿ ನಾಲ್ಕು ದಿನಗಳ ಕಾಲ ನಿರಂತರವಾಗಿ ಪ್ರಕರಣದ ವಿಚಾರಣೆ ನಡೆಸುವ ಸಾಧ್ಯತೆ ಇದೆ.
ಇದನ್ನೂ ಓದಿ: ದರ್ಶನ್ಗೆ ಸಿಗಲಿಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಸುಪ್ರೀಂ ಕೋರ್ಟ್ನಲ್ಲಿ ಈಗಾಗಲೇ ಜಾಮೀನು ಅರ್ಜಿ ವಜಾಗೊಂಡಿರುವುದು ದರ್ಶನ್ಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದರ ಬೆನ್ನಲ್ಲೇ ಒಂದು ವರ್ಷದವರೆಗೆ ಜಾಮೀನು ಸಿಗುವುದಿಲ್ಲ ಎಂಬುದು ಖಾತ್ರಿಯಾಗಿರುವುದರಂದ ಅವರು ಹಾಗೂ ಅವರ ಕುಟುಂಬ ಆತಂಕದಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.





