ಅಹಂಕಾರ ಅಡಗಿ ಮನಸ್ಸು ಶಾಂತವಾಗುತ್ತೆ: ಮಹಾಕುಂಭಮೇಳದ ಬಗ್ಗೆ ಜಗ್ಗೇಶ್ ಮಾತು
‘ನವರಸ ನಾಯಕ’ ಜಗ್ಗೇಶ್ ಅವರು ಮಹಾಕುಂಭಮೇಳದಲ್ಲಿ ಪಾಲ್ಗೊಂಡಿದ್ದಾರೆ. ತಮ್ಮ ಅನುಭವವನ್ನು ಅವರು ವಿವರಿಸಿದ್ದಾರೆ. ಜಗ್ಗೇಶ್ ಅವರಿಗೆ ಅಪಾರ ದೈವ ಭಕ್ತಿ ಇದೆ. ಕುಂಭಮೇಳದಲ್ಲಿ ಭಾಗಿಯಾಗುವ ಅವಕಾಶವನ್ನು ಅವರು ಸದ್ಬಳಕೆ ಮಾಡಿಕೊಂಡಿದ್ದಾರೆ. ಸಿನಿಮಾ ಮತ್ತು ರಾಜಕೀಯದ ಕೆಲಸಗಳ ನಡುವೆ ಬಿಡುವು ಮಾಡಿಕೊಂಡು ಅವರು ಕುಂಭಮೇಳಕ್ಕೆ ಹೋಗಿ ಬಂದಿದ್ದಾರೆ.

ಮಹಾಕುಂಭಮೇಳದಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ. ನಟ ಜಗ್ಗೇಶ್ ಕೂಡ ಇದರಲ್ಲಿ ಪಾಲ್ಗೊಂಡಿದ್ದಾರೆ. ತಮ್ಮ ಅನುಭವದ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಈ ರೀತಿ ಬರೆದುಕೊಂಡಿದ್ದಾರೆ. ‘ಕಳೆದ ಬಾರಿ 1880ರಲ್ಲಿ ನಡೆದದ್ದು ಈ ಮಹಾಕುಂಭಮೇಳ. ನನ್ನ ತಾತನ ಜನನ ಆದದ್ದು 1896ರಲ್ಲಿ. ಅಂದರೆ ನಮ್ಮ ತಾತ ಹುಟ್ಟುವ 16ವರ್ಷದ ಹಿಂದೆ. ನಮ್ಮ ತಾತನಿಂದ ನನ್ನ ಮೊಮ್ಮಗ ಅರ್ಜುನ 5ನೇ ತಲೆಮಾರಿಗೆ ಬಂದಿದೆ. ಮುಂದಿನ ಬಾರಿ ಈ ಮಹಾಕುಂಭ ಬರೋದು 2170 ಇಸವಿಯಲ್ಲಿ. ಅಂದರೆ ನಮ್ಮ ಮುಂದಿನ 5 ತಲೆಮಾರಿನ ಬದುಕು ಇಲ್ಲವಾಗಿರುತ್ತದೆ.’
‘ನಾನು ನನ್ನದು ನನ್ನಹಣ ನನ್ನ ಮನೆ ನನ್ನ ಹೆಂಡತಿ ನನ್ನ ಮಕ್ಕಳು ನನ್ನ ಪರಿವಾರ ಎನ್ನುವ ಕಥೆ ಏನಾಗಿರುತ್ತದೆಯೋ ದೇವರೆ ಬಲ್ಲ. ಕಡೆಯಪಕ್ಷ ನಮ್ಮ ಚಿತ್ರಪಟವು ಗೋಡೆಯಿಂದ ಮರೆಯಾಗಿ ಅಟ್ಟ ಸೇರುತ್ತೆ, ಇಲ್ಲ ಕಸದ ಜೊತೆ ಲೀನ. ನಾವು ದುಡಿದದ್ದು ಮುಂದಿನವರು ಉಳಿಸಿಕೊಂಡಿದ್ದರೆ ಅಲ್ಪಸ್ವಲ್ಪ ಹರಟೆಯಲ್ಲಿ ನಮ್ಮ ಹೆಸರು ಬಂದುಹೋಗಬಹುದು.’
View this post on Instagram
‘ಆದರೆ ಯಾರು ಹೋದರೂ ಒಬ್ಬರು ನೆನಪಲ್ಲಿ ಉಳಿದೇ ಇರುತ್ತಾರೆ ಅವರೇ ಶಾರದಾಸುತರು ಅಂದರೆ ಗಾಯಕರು ನಟರು ನಟಿಯರು ಸಂಗೀತ ವಿದ್ವಾಂಸರು ಹಾಗು ಲೇಖಕರು. ಅಲ್ಲಿಗೆ ಯಾವ ಪುರುಷಾರ್ಥಕ್ಕೆ ಮನುಷ್ಯರು ನಾವು ನಾವೇ ,ನಮ್ಮದೇ, ನಂದೇ, ನಾನಿಲ್ಲದೇ, ಎಂಬ ಅಜ್ಞಾನ ಬೇರೂರಿದೆ ಒಳಗೆ. ಈ ಮಹಾಕುಂಭಕ್ಕೆ ಆಧ್ಯಾತ್ಮಿಕ ಸಾಧನೆಗೆ ಹೋದವರಿಗೆ ನಾನು ಮೇಲೆ ಹೇಳಿದ್ದ ಎಲ್ಲಾ ಮಾತುಗಳು ಮಾನಸದಲ್ಲಿ ಮಜ್ಜನವಾಗಿ, ನಾನು ದೇಹವಲ್ಲ ಮುಂದೆ ಮಣ್ಣು ಎಂಬ ಅರಿವು ಮನದ ಆಳಕ್ಕೆ ಹೋಗಿ, ಮನನವಾಗಿ ಮೌನವಾಗಿ ಅಹಂಕಾರ ಅಡಗಿ ಶಾಂತವಾಗುತ್ತದೆ ಮನಸ್ಸು.’
ಇದನ್ನೂ ಓದಿ: ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
‘ನಾನು ಹೋದೆ ನೋಡಿದೆ ಬಂದೆ ಎನ್ನುವವರಿಗೆ ಅವರ ಬದುಕಿನ ಮತ್ತೊಂದು ಪ್ರವಾಸ ಅನ್ನಿಸುತ್ತದೆ. ನಾನು ಭಾವುಕನಾದೆ ನನ್ನ ವಂಶದ ಎಲ್ಲಾ ಹಿರಿಯರ ನೆನೆದೆ ಮುಂದಿನ ಪೀಳಿಗೆಯ ಮಕ್ಕಳಿಗೆ ಶುಭಕೋರಿದೆ. ನನಗನ್ನಿಸಿದ್ದು ದೇವರ ಕೃಪೆಯಿಲ್ಲದೆ ನಮ್ಮ ಬದುಕಿನ ಆಟ ಯಾವುದೂ ನಡೆಯದು. ಇನ್ನೂ ಸಮಯವಿದೆ. ಹೋಗುವವರು ಹೋಗಿ ಬನ್ನಿ. ಮತ್ತೆ ನೋಡಲಾಗದು ಈ ಮಹಾಕುಂಭ. ಸರ್ವೇಜನಾಃಸುಖಿನೋಭವಂತು’
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.