ನಮ್ಮ ಮೆಟ್ರೋಗೆ ಧ್ವನಿ ಆಗಿದ್ದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ; ಕ್ಯಾನ್ಸರ್​ನಿಂದ ನಿಧನ

|

Updated on: Jul 11, 2024 | 10:49 PM

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ ಅವರು ಮೃತರಾಗಿದ್ದಾರೆ. ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಅವರು ಇಂದು (ಜುಲೈ 11) ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಿರೂಪಣೆ ಮಾತ್ರವಲ್ಲದೇ ನಟನೆ ಮೂಲಕವೂ ಅಪರ್ಣಾ ಅವರು ಗುರುತಿಸಿಕೊಂಡಿದ್ದಾರೆ. ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಅಭಿನಯಿಸಿ ಖ್ಯಾತಿ ಪಡೆದಿದ್ದರು.

ನಮ್ಮ ಮೆಟ್ರೋಗೆ ಧ್ವನಿ ಆಗಿದ್ದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ; ಕ್ಯಾನ್ಸರ್​ನಿಂದ ನಿಧನ
ಅಪರ್ಣಾ
Follow us on

ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ ಅವರು ನಿಧನರಾಗಿದ್ದಾರೆ. ಕ್ಯಾನ್ಸರ್​​ನಿಂದ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ನಿರೂಪಕಿಯಾಗಿ ಮಾತ್ರವಲ್ಲದೇ ನಟಿಯಾಗಿ ಕೂಡ ಅವರು ಗುರುತಿಸಿಕೊಂಡಿದ್ದಾರೆ. ಸಿನಿಮಾ ಮತ್ತು ಸೀರಿಯಲ್​ಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು. ಕಿರಿತೆರೆಯ ಅನೇಕ ಕಾರ್ಯಕ್ರಮಗಳನ್ನು ಅಪರ್ಣಾ ನಡೆಸಿಕೊಟ್ಟಿದ್ದರು. ನಮ್ಮ ಮೆಟ್ರೋ ಅನೌನ್ಸ್​ಮೆಂಟ್​ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಅವರು ಧ್ವನಿ ನೀಡಿದ್ದರು.

ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ಅಪರ್ಣಾ ಅವರು ನಿರೂಪಿಸಿದರು. ನಂತರ ಭಾರತ ಸರ್ಕಾರದ ‘ವಿವಿಧ ಭಾರತಿ’ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. 1998ರಲ್ಲಿ ನಡೆದ ದೀಪಾವಳಿ ಕಾರ್ಯಕ್ರವೊಂದನ್ನು ಸತತ ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

ಇದನ್ನೂ ಓದಿ: ‘ಬಾಗಿಲುಗಳು ಎಡಕ್ಕೆ ತೆರೆಯುತ್ತವೆ..’: ಮೆಟ್ರೋ ರೈಲಿನಲ್ಲಿ ಕೇಳಿಸುವ ಅಪರ್ಣಾ ಧ್ವನಿಯ ಹಿಂದಿದೆ ಜವಾಬ್ದಾರಿಯ ಕಥೆ

ಕಿರುತೆರೆಯಲ್ಲಿ ‘ಮೂಡಲಮನೆ’, ‘ಮುಕ್ತ’ ಮುಂತಾದ ಧಾರಾವಾಹಿಗಳಲ್ಲಿ ಅಪರ್ಣಾ ನಟಿಸಿದ್ದರು. 2013ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್​ನಲ್ಲಿ ಅವರು ಭಾಗವಹಿಸಿದ್ದರು. 2015ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ ‘ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಎಂಬ ಪಾತ್ರವನ್ನು ಅಪರ್ಣಾ ಮಾಡಿದ್ದರು.

ಬೆಂಗಳೂರಿನ ‘ನಮ್ಮ ಮೆಟ್ರೋ’ ರೈಲಿನಲ್ಲಿ ಕೇಳಿಬರುವ ಪ್ರಯಾಣಿಕರ ಸೂಚನೆಗಳಿಗೆ ಅಪರ್ಣಾ ಧ್ವನಿ ನೀಡಿದ್ದರು. ಆ ಮೂಲಕ ಅವರು ಜನರಿಗೆ ಇನ್ನಷ್ಟು ಹತ್ತಿರ ಆಗಿದ್ದರು. ಪುಟ್ಟಣ್ಣ ಕಣಗಾಲ್​ ನಿರ್ದೇಶನದ ‘ಮಸಣದ ಹೂವು’ ಸಿನಿಮಾ ಮೂಲಕ ಅಪರ್ಣಾ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಅವರು ಕೊನೆಯದಾಗಿ ನಟಿಸಿದ್ದ ‘ಗ್ರೇ ಗೇಮ್ಸ್​’ ಸಿನಿಮಾ ಇತ್ತೀಚೆಗೆ ತೆರೆಕಂಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:39 pm, Thu, 11 July 24