ರೇಣುಕಾ ಸ್ವಾಮಿ ಪ್ರಕರಣ: ದರ್ಶನ್ ಮತ್ತು ಸಂಗಡಿಗರಿಗೆ ನ್ಯಾಯಾಂಗ ಬಂಧನ ವಿಸ್ತರಣೆ

|

Updated on: Aug 14, 2024 | 3:23 PM

Darshan Thoogudeepa: ದರ್ಶನ್ ತೂಗುದೀಪ ಸೇರಿದಂತೆ ರೇಣುಕಾ ಸ್ವಾಮಿ ಕೊಲೆ ಆರೋಪಿಗಳೆಲ್ಲರಿಗೂ ಆಗಸ್ಟ್ 28ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ನೀಡಲಾಗಿದೆ.

ರೇಣುಕಾ ಸ್ವಾಮಿ ಪ್ರಕರಣ: ದರ್ಶನ್ ಮತ್ತು ಸಂಗಡಿಗರಿಗೆ ನ್ಯಾಯಾಂಗ ಬಂಧನ ವಿಸ್ತರಣೆ
Follow us on

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳಿಗೆ ನಿರೀಕ್ಷೆಯಂತೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಈ ಹಿಂದೆ ಆಗಸ್ಟ್ 14 ರ ವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ನೀಡಲಾಗಿತ್ತು. ಇಂದು (ಆಗಸ್ಟ್ 14) ಮಧ್ಯಾಹ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ನಟ ದರ್ಶನ್ ಮತ್ತು ಪ್ರಕರಣದ ಇತರೆ ಆರೋಪಿಗಳನ್ನು 24ನೇ ಎಸಿಎಂಎಂ ಇನ್ಚಾರ್ಜ್ ಕೋರ್ಟ್​ ಎದುರು ಹಾಜರುಪಡಿಸಲಾಯ್ತು. ಪೊಲೀಸರ ರಿಮ್ಯಾಂಡ್ ಅರ್ಜಿಯನ್ನು ಪುರಸ್ಕರಿಸಿದ ಮ್ಯಾಜಿಸ್ಟ್ರೇಟರು, ಪ್ರಕರಣದ ಎಲ್ಲ ಆರೋಪಿಗಳಿಗೂ ಆಗಸ್ಟ್ 28ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ನೀಡಿದರು.

ಬೆಂಗಳೂರು ಜೈಲಿನಲ್ಲಿರುವ ಆರೋಪಿಗಳು ಹಾಗೂ ತುಮಕೂರು ಜೈಲಿನಲ್ಲಿರುವ ಮೂವರು ಆರೋಪಿಗಳನ್ನು ಪೊಲೀಸರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಹಾಜರು ಪಡಿಸಿದ್ದರು. ಈ ಸಮಯದಲ್ಲಿ ಪೊಲೀಸರು, ಎಲ್ಲ ಆರೋಪಿಗಳಿಗೂ ನ್ಯಾಯಾಂಗ ಬಂಧನ ವಿಸ್ತರಿಸುವಂತೆ ಮನವಿ ಮಾಡಿದರು. ಮನವಿ ಪುರಸ್ಕರಿಸಿದ ನ್ಯಾಯಾಧೀಶ ಜಡ್ಜ್ ವಿಶ್ವನಾಥ್ ಸಿ ಗೌಡರ್ ಅವರು ಎಲ್ಲ ಆರೋಪಿಗಳಿಗೂ ಆಗಸ್ಟ್ 28ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದರು. ಆರೋಪಿಗಳಿಗೆ ಪುನಃ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲು ಪೊಲೀಸರು ಎಂಟು ಕಾರಣಗಳನ್ನು ನ್ಯಾಯಾಲಯಕ್ಕೆ ನೀಡಿದ್ದಾರೆ.

ಇದನ್ನೂ ಓದಿ:‘ದರ್ಶನ್​ ಸಲುವಾಗಿ ಪೂಜೆ ಅಂದಿದ್ರೆ ನಾನು ಬರುತ್ತಿರಲಿಲ್ಲ’: ಜಗ್ಗೇಶ್ ನೇರ ಮಾತು

ದರ್ಶನ್ ಹಾಗೂ ಸಂಗಡಿಗರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರೆ ಮೂವರು ಆರೋಪಿಗಳನ್ನು ಮಾತ್ರ ಇವರಿಂದ ದೂರಾಗಿ ತುಮಕೂರು ಜೈಲಿನಲ್ಲಿ ಪೊಲೀಸರು ಇರಿಸಿದ್ದಾರೆ. ಈ ಮೂವರು ಆರೋಪಿಗಳು ಅಪ್ರೂವರ್​ಗಳಾಗಿ ಬದಲಾಗಿದ್ದು ನ್ಯಾಯಾಧೀಶರ ಮುಂದೆ ತಪ್ಪೊಪ್ಪಿಗೆ ಹೇಳಿಕೆ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಹಾಗೂ ಇತರರ ಪಾತ್ರದ ಬಗ್ಗೆಯೂ ವಿವರವಾಗಿ ಹೇಳಿದ್ದಾರೆ ಎನ್ನಲಾಗುತ್ತಿದೆ. ಹಾಗಾಗಿ ಉಳಿದ ಆರೋಪಿಗಳಿಂದ ದೂರಾಗಿ ಇವರನ್ನು ತುಮಕೂರಿನಲ್ಲಿ ಇರಿಸಲಾಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 11 ರಂದು ನಟ ದರ್ಶನ್, ಪವಿತ್ರಾ ಗೌಡ ಇನ್ನೂ ಹಲವರನ್ನು ಪೊಲೀಸರು ಬಂಧಿಸಿದ್ದರು. ದರ್ಶನ್ ಮತ್ತು ಇತರೆ ಆರೋಪಿಗಳು ಪ್ರಕರಣದಲ್ಲಿ ಬಂಧನಕ್ಕೆ ಒಳಪಟ್ಟು ಎರಡು ತಿಂಗಳಿಗೂ ಹೆಚ್ಚು ಸಮಯವಾಗಿದೆ. ಆದರೆ ಪ್ರಕರಣದ ಸ್ವರೂಪ ಗಂಭೀರವಾಗಿರುವ ಕಾರಣ ಆರೋಪಿಗಳಿಗೆ ಜಾಮೀನು ಸಿಗುವುದು ಕಷ್ಟಸಾಧ್ಯ ಎನ್ನಲಾಗುತ್ತಿದೆ. ಕನಿಷ್ಟ ಇನ್ನೂ ಒಂದು ಗರಿಷ್ಠ ಆರು ತಿಂಗಳುಗಳ ಕಾಲ ದರ್ಶನ್​ಗೆ ಜಾಮೀನು ಸಿಗುವುದಿಲ್ಲ ಎಂದು ಕೆಲವು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:20 pm, Wed, 14 August 24