ಪಾಕಿಸ್ತಾನದಲ್ಲಿ ‘ಮಹಾವತಾರ ನರಸಿಂಹ’ ಸಿನಿಮಾ ಪ್ರದರ್ಶನ: ವಿಡಿಯೋ ವೈರಲ್

ಪಾಕಿಸ್ತಾನದ ಕರಾಚಿಯ ದೇವಸ್ಥಾನದಲ್ಲಿ ‘ಮಹಾವತಾರ ನರಸಿಂಹ’ ಸಿನಿಮಾವನ್ನು ಪ್ರದರ್ಶನ ಮಾಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಭಕ್ತರು ಕಮೆಂಟ್ ಮಾಡುತ್ತಿದ್ದಾರೆ. ಸಾವಿರಾರು ಭಕ್ತರು ದೇವಸ್ಥಾನದ ಆವರಣದಲ್ಲಿ ಕುಳಿತು ಈ ಸಿನಿಮಾ ನೋಡಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಪಾಕಿಸ್ತಾನದಲ್ಲಿ ‘ಮಹಾವತಾರ ನರಸಿಂಹ’ ಸಿನಿಮಾ ಪ್ರದರ್ಶನ: ವಿಡಿಯೋ ವೈರಲ್
Mahavatar Narsimha

Updated on: Dec 03, 2025 | 3:49 PM

‘ಹೊಂಬಾಳೆ ಫಿಲ್ಮ್ಸ್’ ನಿರ್ಮಾಣದ ‘ಮಹಾವತಾರ ನರಸಿಂಹ’ (Mahavatar Narsimha) ಸಿನಿಮಾ 2025ರಲ್ಲಿ ಸೂಪರ್ ಹಿಟ್ ಆಗಿದೆ. 300 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದ ಭಾರತದ ಮೊದಲ ಆನಿಮೇಟೆಡ್ ಸಿನಿಮಾ ಎಂಬ ಖ್ಯಾತಿ ಈ ಚಿತ್ರಕ್ಕಿದೆ. 2026ರ ಆಸ್ಕರ್ ಪ್ರಶಸ್ತಿ ಸ್ಪರ್ಧೆಯಲ್ಲಿ ಪೈಪೋಟಿ ನೀಡಲು ಈ ಸಿನಿಮಾ ಅರ್ಹತೆ ಪಡೆದಿರುವ ಸುದ್ದಿ ಇತ್ತೀಚೆಗಷ್ಟೇ ಕೇಳಿಬಂದಿತ್ತು. ಈಗ ಇನ್ನೊಂದು ಅಚ್ಚರಿಯ ವಿಷಯ ತಿಳಿದುಕೊಂಡಿದೆ. ಪಾಕಿಸ್ತಾನದಲ್ಲಿ ಕೂಡ ‘ಮಹಾವತಾರ ನರಸಿಂಹ’ ಸಿನಿಮಾ ಪ್ರದರ್ಶನ ಕಂಡಿದೆ. ಪಾಕಿಸ್ತಾನದಲ್ಲಿ (Pakistan) ಇರುವ ಹಿಂದೂಗಳು ಈ ಸಿನಿಮಾವನ್ನು ನೋಡಿ ಖುಷಿಪಟ್ಟಿದ್ದಾರೆ.

ಭಕ್ತ ಪ್ರಹ್ಲಾದನ ಕಥೆಯನ್ನು ಇಟ್ಟುಕೊಂಡು ‘ಮಹಾವತಾರ ನರಸಿಂಹ’ ಸಿನಿಮಾ ಮಾಡಲಾಗಿದೆ. ಭಾರತದಲ್ಲಿ ವಿವಿಧ ಭಾಷೆಗಳಲ್ಲಿ ಬಿಡುಗಡೆ ಆದ ಈ ಸಿನಿಮಾವನ್ನು ಪ್ರೇಕ್ಷಕರು ಮೆಚ್ಚಿಕೊಂಡರು. ಬಳಿಕ ಒಟಿಟಿಯಲ್ಲಿ ಕೂಡ ಬಿಡುಗಡೆ ಆಗಿ ಧೂಳೆಬ್ಬಿಸಿತು. ಈಗ ಪಾಕಿಸ್ತಾನದಲ್ಲಿ ಸಹ ಈ ಸಿನಿಮಾವನ್ನು ಪ್ರದರ್ಶನ ಮಾಡಲಾಗಿದೆ. ಅದು ಕೂಡ ದೇವಸ್ಥಾನದಲ್ಲಿ ಎಂಬುದು ವಿಶೇಷ!

ಹೌದು, ಪಾಕಿಸ್ತಾನದಲ್ಲಿ ‘ಮಹಾವತಾರ ನರಸಿಂಹ’ ಸಿನಿಮಾ ಪ್ರದರ್ಶನ ಆಗಿರುವುದು ಚಿತ್ರಮಂದಿರಗಳಲ್ಲಿ ಅಲ್ಲ. ಬದಲಿಗೆ, ಕರಾಚಿಯಲ್ಲಿ ಇರುವ ಸ್ವಾಮಿ ನಾರಾಯಣ ಮಂದಿರದಲ್ಲಿ ಭಕ್ತರಿಗಾಗಿ ಈ ಸಿನಿಮಾದ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಸಾವಿರಾರು ಭಕ್ತರು ದೇವಸ್ಥಾನದ ಆವರಣದಲ್ಲಿ ಸೇರಿಕೊಂಡು ದೊಡ್ಡ ಎಲ್​ಇಡಿ ಪರದೆಯಲ್ಲಿ ‘ಮಹಾವತಾರ ನರಸಿಂಹ’ ಸಿನಿಮಾವನ್ನು ವೀಕ್ಷಿಸಿದ್ದಾರೆ.

ವೈರಲ್ ವಿಡಿಯೋ:

ಕರಾಚಿಯ ಸ್ವಾಮಿ ನಾರಾಯಣ ಮಂದಿರದಲ್ಲಿ ‘ಮಹಾವತಾರ ನರಸಿಂಹ’ ಸಿನಿಮಾ ಪ್ರದರ್ಶನ ಆಗುತ್ತಿರುವ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ‘ಪಾಕಿಸ್ತಾನದಲ್ಲಿ ಮೊಟ್ಟ ಮೊದಲ ಬಾರಿಗೆ! ಸ್ವಾಮಿ ನಾರಾಯಣ ಮಂದಿರದಲ್ಲಿ ಮಹಾವತಾರ ನರಸಿಂಹ ಸಿನಿಮಾ ಪ್ರದರ್ಶನ’ ಎಂಬ ಕ್ಯಾಪ್ಷನ್​ನೊಂದಿಗೆ ಈ ವಿಡಿಯೋವನ್ನು ಪೋಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ರೇಸ್​​ನಲ್ಲಿ ‘ಮಹಾವತಾರ ನರಸಿಂಹ’ ಆನಿಮೇಟೆಡ್ ಸಿನಿಮಾ

‘ಮಹಾವತಾರ ನರಸಿಂಹ’ ಸಿನಿಮಾವನ್ನು ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆ ನಿರ್ಮಾಣ ಮಾಡಿದೆ. ಪುರಾಣದ ಕಥೆಯನ್ನು ಹೊಂದಿರುವ ಈ ಚಿತ್ರ ಭಾರತದಲ್ಲಿ ಜುಲೈ 25ರಂದು ಬಿಡುಗಡೆ ಆಯಿತು. ಅಶ್ವಿನ್ ಕುಮಾರ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ವಿಷ್ಣು ಪುರಾಣ, ನರಸಿಂಹ ಪುರಾಣ, ಶ್ರೀಮದ್ ಭಗವತ ಪುರಾಣವನ್ನು ಆಧಾರವಾಗಿ ಇಟ್ಟುಕೊಂಡು ಈ ಸಿನಿಮಾವನ್ನು ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us