CV Shivashankar: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಸಿ.ವಿ. ಶಿವಶಂಕರ್​ ಹೃದಯಾಘಾತದಿಂದ ನಿಧನ

C.V. Shivashankar Death: ಚಿತ್ರ ಸಾಹಿತಿಯಾಗಿಯೂ ಸಿ.ವಿ. ಶಿವಶಂಕರ್​ ಗುರುತಿಸಿಕೊಂಡಿದ್ದರು. ‘ಸಿರಿವಂತನಾದರೂ ಕನ್ನಡ ನಾಡಲ್ಲಿ ಮೆರೆವೆ..’ ಹಾಡನ್ನು ಬರೆಯುವ ಮೂಲಕ ಅಪಾರ ಜನಪ್ರಿಯತೆ ಪಡೆದುಕೊಂಡಿದ್ದರು.

CV Shivashankar: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಸಿ.ವಿ. ಶಿವಶಂಕರ್​ ಹೃದಯಾಘಾತದಿಂದ ನಿಧನ
ಸಿ.ವಿ. ಶಿವಶಂಕರ್​
Edited By:

Updated on: Jun 27, 2023 | 4:28 PM

ಚಂದನವನದಲ್ಲಿ (Sandalwood) ಹಲವು ವರ್ಷಗಳ ಅನುಭವ ಹೊಂದಿದ್ದ ನಟ, ನಿರ್ದೇಶಕ ಸಿ.ವಿ. ಶಿವಶಂಕರ್​ ಅವರು ನಿಧನರಾಗಿದ್ದಾರೆ. ಇಂದು (ಜೂನ್​ 27) ಮಧ್ಯಾಹ್ನ 2 ಗಂಟೆ ಸುಮಾರಿಗೆ ಅವರಿಗೆ ಹೃದಯಾಘಾತ (Heart Attack) ಆಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅವರು ಬದುಕು ಉಳಿಯಲಿಲ್ಲ ಎಂಬುದು ನೋವಿನ ಸಂಗತಿ. ಸಿ.ವಿ. ಶಿವಶಂಕರ್​ ಅವರಿಗೆ 90 ವರ್ಷ ವಯಸ್ಸಾಗಿತ್ತು. ‘ಯಾವುದೇ ಗಂಭೀರವಾದ ಆರೋಗ್ಯ ಸಮಸ್ಯೆ ಅವರಿಗೆ ಇರಲಿಲ್ಲ. ಮಧ್ಯಾಹ್ನ ಊಟ ಮುಗಿಸಿದರು. ಪೂಜೆ ಮಾಡಿದ ಬಳಿಕ ಹಾರ್ಟ್​ ಅಟ್ಯಾಕ್​ ಆಯಿತು’ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಸಿ.ವಿ. ಶಿವಶಂಕರ್​ (C V Shivashankar) ಅವರ ನಿಧನಕ್ಕೆ ಚಿತ್ರರಂಗದವರು ಸಂತಾಪ ಸೂಚಿಸುತ್ತಿದ್ದಾರೆ. ಅಂತ್ಯಕ್ರಿಯೆ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಿದೆ.

ಆರಂಭದಲ್ಲಿ ಸಿ.ವಿ. ಶಿವಶಂಕರ್​ ಅವರು ರಂಗಭೂಮಿಯಲ್ಲಿ ತೊಡಗಿಕೊಂಡಿದ್ದರು. ಬಾಲನಟನಾಗಿಯೇ ರಂಗಭೂಮಿ ಪ್ರವೇಶಿಸಿದ್ದ ಅವರು ಅನೇಕ ನಾಟಕಗಳಲ್ಲಿ ಅಭಿನಯಿಸಿದ್ದರು. ನಂತರ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ‘ಸ್ಕೂಲ್ ಮಾಸ್ಟರ್​’, ‘ಕೃಷ್ಣ ಗಾರುಡಿ’, ‘ರತ್ಮಮಂಜರಿ’, ‘ರತ್ನಗಿರಿ ರಹಸ್ಯ’ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಹಲವು ನಿರ್ದೇಶಕರ ಜೊತೆ ಸಹಾಯಕರಾಗಿ ಅನುಭವ ಪಡೆದ ಬಳಿಕ ‘ಮನೆ ಕಟ್ಟಿ ನೋಡು’ ಸಿನಿಮಾವನ್ನು ಸ್ವತಂತ್ರವಾಗಿ ನಿರ್ದೇಶಿಸಿದ್ದರು.

ಇದನ್ನೂ ಓದಿ: Kazan Khan: ಖ್ಯಾತ ಖಳನಟ ಕಝಾನ್​ ಖಾನ್​ ಇನ್ನಿಲ್ಲ; ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಕಲಾವಿದ

‘ಪದವೀಧರ’, ‘ನಮ್ಮ ಊರು’, ‘ಮಹಡಿಯ ಮನೆ’, ‘ಹೊಯ್ಸಳ, ‘ಮಹಾ ತಪಸ್ವಿ’, ‘ಕನ್ನಡ ಕುವರ’, ‘ವೀರ ಮಹಾದೇವ’ ಮತ್ತಿತರ ಸಿನಿಮಾಗಳಿಗೆ ಸಿ.ವಿ. ಶಿವಶಂಕರ್​ ಅವರು ನಿರ್ದೇಶನ ಮಾಡಿದ್ದರು. ಕನ್ನಡ ಚಿತ್ರರಂಗದಲ್ಲಿ ಗೀತರಚನಕಾರನಾಗಿಯೂ ಅವರು ಗುರುತಿಸಿಕೊಂಡಿದ್ದರು. ‘ಸಿರಿವಂತನಾದರೂ ಕನ್ನಡ ನಾಡಲ್ಲಿ ಮೆರೆವೆ..’ ಹಾಡನ್ನು ಬರೆಯುವ ಮೂಲಕ ಅವರು ಅಪಾರ ಜನಪ್ರಿಯತೆ ಪಡೆದುಕೊಂಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:13 pm, Tue, 27 June 23

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us