ಪ್ರೇಕ್ಷಕರಿಂದ ದೈವದ ಅನುಕರಣೆ: ‘ಕಾಂತಾರ: ಚಾಪ್ಟರ್ 1’ ಚಿತ್ರತಂಡದ ಸ್ಪಷ್ಟನೆ

ತುಳುನಾಡಿನ ದೈವಗಳ ಬಗ್ಗೆ ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ತೋರಿಸಲಾಗಿದೆ. ಅದನ್ನು ನೋಡಿದ ಕೆಲವರು ದೈವದ ಅನುಕರಣೆ ಮಾಡಿದ್ದಾರೆ. ಈ ಬಗ್ಗೆ ತುಳು ಕೂಟ ಆಕ್ಷೇಪ ವ್ಯಕ್ತಪಡಿಸಿತ್ತು. ಅದರ ಬೆನ್ನಲ್ಲೇ ‘ಕಾಂತಾರ: ಚಾಪ್ಟರ್ 1’ ಚಿತ್ರತಂಡವು ಪ್ರೇಕ್ಷಕರಿಗೆ ಕಿವಿಮಾತು ಹೇಳಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಪ್ರೇಕ್ಷಕರಿಂದ ದೈವದ ಅನುಕರಣೆ: ‘ಕಾಂತಾರ: ಚಾಪ್ಟರ್ 1’ ಚಿತ್ರತಂಡದ ಸ್ಪಷ್ಟನೆ
Kantara

Updated on: Oct 07, 2025 | 8:13 PM

‘ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾ ನೋಡಿದ ಹಲವರು ಚಿತ್ರಮಂದಿರಗಳಲ್ಲಿ ವಿಚಿತ್ರವಾಗಿ ವರ್ತಿಸುತ್ತಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಹಲವು ವಿಡಿಯೋಗಳು ವೈರಲ್ ಆಗಿವೆ. ದೈವದ ಅನುಕರಣೆ ಮಾಡುವವರ ಬಗ್ಗೆ ಹಲವರು ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ‘ಕಾಂತಾರ: ಚಾಪ್ಟರ್ 1’ ಚಿತ್ರದ ನಿರ್ಮಾಣ ಸಂಸ್ಥೆಯಾದ ‘ಹೊಂಬಾಳೆ ಫಿಲ್ಮ್ಸ್’ ಕಡೆಯಿಂದ ಸ್ಪಷ್ಟನೆ ನೀಡಲಾಗಿದೆ. ಯಾರೂ ಕೂಡ ಈ ರೀತಿ ನಡೆದುಕೊಳ್ಳದಂತೆ ಮನವಿ ಮಾಡಲಾಗಿದೆ. ‘ಹೊಂಬಾಳೆ ಫಿಲ್ಮ್ಸ್’ (Hombale Films) ಹಂಚಿಕೊಂಡ ಪ್ರಕಟಣೆ ಈ ರೀತಿ ಇದೆ..

‘ತುಳುನಾಡಿನ ಸಂಸ್ಕೃತಿಯ ಪ್ರೌಢತೆಯ ಸಂಕೇತವಾದ ದೈವಾರಾಧನೆ ನಮ್ಮನಂಬಿಕೆ, ಭಕ್ತಿ ಹಾಗೂ ತಾಯ್ತಾಡಿನ ಹೆಮ್ಮೆಯ ಪ್ರತಿರೂಪವಾಗಿದೆ. ಕಾಂತಾರ ಮತ್ತು ಕಾಂತಾರ ಚಾಪ್ಟರ್-1 ಚಿತ್ರಗಳನ್ನು ನಾವು ಗೌರವದೊಂದಿಗೆ ದೈವಗಳ ಮಹಿಮೆಯನ್ನು ಕೊಂಡಾಡುವ ಸದುದ್ದೇಶದಿಂದ ನಿರ್ಮಿಸಿದ್ದೇವೆ. ದೈವಾರಾಧನೆಯ ಗೌರವ ಹಾಗೂ ಅಚಲ ಭಕ್ತಿಯನ್ನು ಉಳಿಸಿಕೊಳ್ಳುವ ಸಲುವಾಗಿ ನಾವು ಶ್ರಮಪಟ್ಟು ಕೆಲಸಮಾಡಿದ್ದೇವೆ. ಇದರೊಂದಿಗೆ ತುಳುನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಮಹತ್ವವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾರಿ ಯಶಸ್ವಿಯಾಗಿದ್ದೇವೆ.’

‘ಪ್ರೇಕ್ಷಕರಿಂದ ಬ೦ದಿರುವ ಅಪಾರವಾದ ಪ್ರೀತಿಗೆ ಹಾಗೂ ಪ್ರೋತ್ಸಾಹಕ್ಕೆ ನಾವು ಹೃತ್ತೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇವೆ. ಆದಾಗ್ಯೂ, ಇತ್ತೀಚೆಗೆ ಕೆಲವು ಜನರು ಚಿತ್ರದಲ್ಲಿ ತೋರಿಸಿದ ದೈವಪಾತ್ರಗಳನ್ನು ಅನುಕರಿಸುತ್ತಾ, ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಕಾರ್ಯಕ್ರಮಗಳಲ್ಲಿ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಚಿತ್ರಗಳಲ್ಲಿ ತೋರಿಸಲಾದ ದೈವಾರಾಧನೆ ಅಥವಾ ದೈವಪೂಜೆ ಅತ್ಯಂತ ಪವಿತ್ರವಾದ ಆಧ್ಯಾತ್ಮಿಕ ಸಂಪ್ರದಾಯಕ್ಕೆ ಆಧಾರಿತವಾಗಿದೆ. ಇದನ್ನು ಹಾಸ್ಯಾಸ್ಪದವಾಗಿ ಅಣುಕು ಪ್ರದರ್ಶನ ಮಾಡುವಂತಿಲ್ಲ.’

‘ಇಂತಹ ಕೃತ್ಯಗಳು ನಮ್ಮ ನಂಬಿಕೆ ಮತ್ತು ಧಾರ್ಮಿಕ ಸಂವೇದನೆಯನ್ನು ಹೀನಗೊಳಿಸುತ್ತವೆ ಮತ್ತು ತುಳುನಾಡಿನ ಜನರ ಭಾವನೆಗಳಿಗೆ ತೀವ್ರ ನೋವು೦ಟುಮಾಡುತ್ತವೆ. ಆದುದರಿಂದ, ಹೋಂಬಾಳೆ ಫಿಲ್ಡ್ ಜನತೆ ಹಾಗೂ ಪ್ರೇಕ್ಷಕರಿಗೆ ಮನವಿ ಮಾಡಿಕೊಳ್ಳುತ್ತದೆ – ದೈವಪಾತ್ರಗಳನ್ನು ಅನುಕರಿಸುವುದು, ಧ್ವನಿಯನ್ನು ಹೋಲುವುದು ಅಥವಾ ಅವರ ರೂಪ-ವೇಷಧಾರಣೆ ಮಾಡುವುದು ಸೇರಿದಂತೆ ಯಾವುದೇ ರೀತಿಯ ಕೃತ್ಯಗಳಿಂದ ದೂರವಿರಿ. ಇದನ್ನು ಚಿತ್ರಮಂದಿರಗಳಲ್ಲಿ ಆಗಲಿ, ಸಾರ್ವಜನಿಕ ಸ್ಥಳಗಳಲ್ಲಿ ಆಗಲಿ ಎಲ್ಲೂ ಮಾಡುವಂತಿಲ್ಲ.’

ಇದನ್ನೂ ಓದಿ:  ‘ಕಾಂತಾರ’ ನೋಡಿ ಹುಚ್ಚಾಟ, ದೈವದ ಅನುಕರಣೆ: ರಿಷಬ್​​ಗೆ ತುಳುಕೂಟ ಪತ್ರ

‘ದೈವಾರಾಧನೆಯ ಪವಿತ್ರತೆಯನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ಆರಾಧನೆಯ ಆಧ್ಯಾತ್ಮಿಕ ಮಹತ್ವವನ್ನು ಎಲ್ಲರೂ ಗುರುತಿಸಿ, ಗೌರವದಿಂದ ನಡೆದುಕೊಳ್ಳಬೇಕು. ನಮ್ಮ ಚಿತ್ರಗಳ ಮೂಲಕ ನಾವು ಸ೦ಭ್ರಮಿಸಿದ ಈ ನಂಬಿಕೆಯನ್ನು ಯಾವುದೇ ಸಂದರ್ಭದಲ್ಲಿ ಹಾಸ್ಯಾಸ್ಪದವಾಗಲು ಅವಕಾಶ ನೀಡಬಾರದು. ಈ ಅಮೂಲ್ಯ ಸಾಂಸ್ಕೃತಿಕ ಪರಂಪರೆಯ ಪವಿತ್ರತೆಯನ್ನು ಕಾಪಾಡಲು ನೀವು ನೀಡುತ್ತಿರುವ ನಿರಂತರ ಪ್ರೋತ್ಸಾಹ ಮತ್ತು ಸಹಕಾರಕ್ಕೆ ನಮ್ಮ ಹೃತ್ತೂರ್ವಕ ಧನ್ಯವಾದಗಳು.’

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.