ತಾಯಿಗೆ ಗಂಭೀರವಾಗಿದೆ ಎಂಬ ವಿಚಾರ ತಿಳಿದೂ ಬಿಗ್ ಬಾಸ್ ನಡೆಸಿಕೊಟ್ಟಿದ್ದ ಸುದೀಪ್; ಅಮ್ಮ ಹೇಳಿಕೊಟ್ಟ ಪಾಠ ಪಾಲಿಸಿದ ಕಿಚ್ಚ

ಕಿಚ್ಚ ಸುದೀಪ್ ಅವರು ತಮ್ಮ ತಾಯಿಯನ್ನು ಕಳೆದುಕೊಂಡರು. ಅಕ್ಟೋಬರ್ 20ರ ಬೆಳಿಗ್ಗೆ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಅವರು ನಿಧನ ಹೊಂದಿದರು. ಅವರಿಗೆ ಸಾಕಷ್ಟು ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಈಗ ಅವರು ಭಾವುಕ ಪೋಸ್ಟ್​ ಮಾಡಿದ್ದಾರೆ.

ತಾಯಿಗೆ ಗಂಭೀರವಾಗಿದೆ ಎಂಬ ವಿಚಾರ ತಿಳಿದೂ ಬಿಗ್ ಬಾಸ್ ನಡೆಸಿಕೊಟ್ಟಿದ್ದ ಸುದೀಪ್; ಅಮ್ಮ ಹೇಳಿಕೊಟ್ಟ ಪಾಠ ಪಾಲಿಸಿದ ಕಿಚ್ಚ
ಸುದೀಪ್

Updated on: Oct 21, 2024 | 11:42 AM

ಕಿಚ್ಚ ಸುದೀಪ್ ತಾಯಿ ಸರೋಜಾ ಸಂಜೀವ್ ಅವರು ಅಕ್ಟೋಬರ್ 20ರಂದು ನಿಧನ ಹೊಂದಿದರು. ಅವರ ಸಾವು ಸುದೀಪ್​ ಅವರಿಗೆ ಸಾಕಷ್ಟು ನೋವು ತಂದಿದೆ. ಸುದೀಪ್ ಅವರು ಅಂತಿಮ ಸಂಸ್ಕಾರದ ವೇಳೆ ಕಣ್ಣೀರು ಹಾಕಿದ್ದಾರೆ. ‘ಅಮ್ಮಾ.. ಅಮ್ಮಾ’ ಎಂದು ಅತ್ತಿದ್ದಾರೆ. ಈಗ ಅವರು ತಾಯಿಗಾಗಿ ಭಾವುಕ ಪತ್ರ ಬರೆದಿದ್ದಾರೆ. ಆ ದಿನ ಏನಾಯಿತು ಎಂಬುದನ್ನು ಕೂಡ ಅವರು ಹೇಳಿದ್ದಾರೆ.

‘ನನ್ನ ತಾಯಿ ಸಾಕಷ್ಟು ಪ್ರೀತಿ ತೋರಿಸುತ್ತಿದ್ದರು. ಕ್ಷಮಿಸುತ್ತಿದ್ದರು, ಕಾಳಜಿವಹಿಸುತ್ತಿದ್ದರು ಮತ್ತು ನನ್ನ ಜೀವನ  ಮೌಲ್ಯಯುತವಾಗಿರುವಂತೆ ನೋಡಿಕೊಂಡರು. ಅವರು ಮನುಷ್ಯ ರೂಪದಲ್ಲಿ ಇದ್ದ ದೇವರಾಗಿದ್ದರು. ಅವರು ನನಗ್ಗೆ ಹಬ್ಬದ ರೀತಿ. ನಿತ್ಯವೂ ಆಚರಿಸುತ್ತಿದ್ದೆ. ಅವರು ನನ್ನ ಗುರು, ನನ್ನ ನಿಜವಾದ ಹಿತೈಷಿ ಮತ್ತು ನನ್ನ ಮೊದಲ ಅಭಿಮಾನಿ. ನನ್ನ ಕೆಟ್ಟ ಕೆಲಸವನ್ನೂ ಇಷ್ಟಪಟ್ಟರು. ಅವರು ಈಗ ಸುಂದರ ನೆನಪು ಮಾತ್ರ’ ಎಂದು ಪತ್ರ ಆರಂಭಿಸಿದ್ದಾರೆ ಸುದೀಪ್.

‘ಇದೀಗ ನಾನು ಅನುಭವಿಸುತ್ತಿರುವ ನೋವನ್ನು ವ್ಯಕ್ತಪಡಿಸಲು ನನ್ನ ಬಳಿ ಪದಗಳಿಲ್ಲ. ಏನಾಯಿತು ಎಂಬುದರ ಕುರಿತು ನನಗೆ ಬರೆಯಲು ಸಾಧ್ಯವಾಗುತ್ತಿಲ್ಲ. 24 ಗಂಟೆಗಳಲ್ಲಿ ಎಲ್ಲವೂ ಬದಲಾಗಿ ಹೋಯಿತು’ ಎಂದು ಸುದೀಪ್ ಭಾವುಕರಾಗಿ ಬರೆದುಕೊಂಡಿದ್ದಾರೆ.

‘ಪ್ರತಿದಿನ ನನ್ನ ಫೋನ್‌ಗೆ ಬೆಳಿಗ್ಗೆ 5.30ಕ್ಕೆ ಶುಭೋದಯ ಕಂದಾ ಎಂಬ ಸಂದೇಶ ಬರುತ್ತಿತ್ತು. ಅಕ್ಟೋಬರ್ 18 ಶುಕ್ರವಾರದಂದು ಅವರು ನನಗೆ ಮೆಸೇಜ್ ಮಾಡಿದ್ದೇ ಕೊನೆ. ನಾನು ಬಿಗ್ ಬಾಸ್​ನಲ್ಲಿ ಇದ್ದಿದ್ದರಿಂದ ಅವರ ಮೆಸೇಜ್ ನೋಡಲು ಸಾಧ್ಯವಾಗಿರಲಿಲ್ಲ. ನಾನು ನನ್ನ ತಾಯಿಗೆ ಬೆಳಗಿನ ಮೆಸೇಜ್ ಕಳುಹಿಸಿದೆ ಮತ್ತು ಎಲ್ಲವೂ ಓಕೆ ಎಂದು ಫೋನ್ ಮಾಡಬೇಕೆಂದುಕೊಂಡೆ. ಆದರೆ, ಬಿಗ್ ಬಾಸ್​ನ ಶನಿವಾರದ ಸಂಚಿಕೆಯ ಚರ್ಚೆ ಸಮಯವನ್ನು ತಿಂದಿತು. ನಾನು ವೇದಿಕೆಗೆ ಹೋಗುವ ಮುನ್ನವೇ, ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ನನಗೆ ಕರೆ ಬಂದಿತು. ನಾನು ತಕ್ಷಣ ಆಸ್ಪತ್ರೆಯಲ್ಲಿದ್ದ ನನ್ನ ತಂಗಿಗೆ ಕರೆ ಮಾಡಿ, ವೈದ್ಯರೊಂದಿಗೆ ಮಾತನಾಡಿ ವೇದಿಕೆಗೆ ಹೋದೆ’ ಎಂದು ಸುದೀಪ್ ಅಂದಿನ ಘಟನೆ ವಿವರಿಸಿದ್ದಾರೆ.

‘ನಾನು ಬಿಗ್ ಬಾಸ್ ವೇದಿಕೆ ಮೇಲೆ ಇದ್ದಾಗಲೇ ಅವರ ಪರಿಸ್ಥಿತಿ ಗಂಭೀರವಾಗಿದೆ ಎಂಬ ಸಂದೇಶ ಬಂತು. ಈ ಅಸಹಾಯಕತೆ ನಾನು ಮೊದಲ ಬಾರಿಗೆ ಅನುಭವಿಸಿದೆ. ಇತ್ತ ನಾನು ಶನಿವಾರದ ಸಂಚಿಕೆಯನ್ನು ನಿರ್ವಹಿಸುತ್ತಿದ್ದೇನೆ. ಹಲವಾರು ವಿಚಾರಗಳ ಬಗ್ಗೆ ಮಾತನಾಡುತ್ತಿದ್ದೇನೆ. ಮತ್ತೊಂದೆಡೆ ನನ್ನ ತಾಯಿಯ ಬಗ್ಗೆ ಮನಸ್ಸಿನಲ್ಲಿ ಭಯ ಕಾಡುತ್ತಿತ್ತು’ ಎಂದಿದ್ದಾರೆ ಸುದೀಪ್.

‘ನಾವು ಒಪ್ಪಿಕೊಂಡ ಕೆಲಸವನ್ನು ಮಾಡಬೇಕು ಎಂದು ಅಮ್ಮನೇ ಹೇಳಿಕೊಟ್ಟಿದ್ದರು. ಅದನ್ನೇ ಮಾಡಿದೆ. ನನಗೆ ಇದನ್ನು ಕಲಿಸಿದ್ದಕ್ಕಾಗಿ ನನ್ನ ತಾಯಿಗೆ ಋಣಿಯಾಗಿದ್ದೇನೆ. ಶನಿವಾರದ ಸಂಚಿಕೆ ಚಿತ್ರೀಕರಣದ ನಂತರ ನಾನು ಆಸ್ಪತ್ರೆಗೆ ಧಾವಿಸಿದೆ.  ನನ್ನ ತಾಯಿಯನ್ನು ವೆಂಟಿಲೇಟರ್‌ನಲ್ಲಿ ಇಡಲಾಗಿತ್ತು. ನನ್ನ ತಾಯಿ ಪ್ರಜ್ಞೆ ಕಳೆದುಕೊಂಡಿದ್ದರು. ಅದನ್ನು ನೋಡಲು ನನಗೆ ಸಾಧ್ಯವಾಗಲಿಲ್ಲ. ಭಾನುವಾರ ಅವರು ಮೃತಪಟ್ಟರು. ಕೆಲವೇ ಗಂಟೆಗಳಲ್ಲಿ ಎಲ್ಲವೂ ಬದಲಾಯಿತು’ ಎಂದಿದ್ದಾರೆ ಸುದೀಪ್.

ಇದನ್ನೂ ಓದಿ: ಸುದೀಪ್ ಮಾತಿನಿಂದ ಮತ್ತಷ್ಟು ಗೊಂದಲಕ್ಕೆ ಸಿಲುಕಿದ ಭವ್ಯಾ ಗೌಡ

‘ನಾನು ಶೂಟಿಂಗ್‌ಗೆ ಹೊರಡುವ ಮುನ್ನ ಬಿಗಿಯಾದ ಅಪ್ಪುಗೆಯನ್ನು ನೀಡಿದ ನನ್ನ ತಾಯಿ ಮುಂದಿನ ಕೆಲವೇ ಗಂಟೆಗಳಲ್ಲಿ ಇಲ್ಲ. ಅವರಿಗೆ ಗೌರವ ಸಲ್ಲಿಸಲು ಆಗಮಿಸಿದ ಪ್ರತಿಯೊಬ್ಬರಿಗೂ ನಾನು ಧನ್ಯವಾದ ಹೇಳುತ್ತೇನೆ. ಮೆಸೇಜ್ ಹಾಗೂ ಟ್ವೀಟ್‌ಗಳ ಮೂಲಕ ನನ್ನ ಸಂತೈಸಿದ ಎಲ್ಲರಿಗೂ ಧನ್ಯವಾದ’ ಎಂದಿದ್ದಾರೆ ಕಿಚ್ಚ.

‘ನನ್ನ ಜೀವನದ ಅತ್ಯಮೂಲ್ಯವಾದ ಮುತ್ತು ಕಳೆದು ಹೋಗಿದೆ. ಶಾಂತಿ ತುಂಬಿದ ಸ್ಥಳವನ್ನು ಅವರು ತಲುಪಿದ್ದಾರೆ ಎಂದು ನನಗೆ ಅನಿಸುತ್ತಿದೆ. ಅಮ್ಮಾ, ಚೆನ್ನಾಗಿ ವಿಶ್ರಾಂತಿ ಪಡೆಯಿರಿ. ನಾನು ನಿನ್ನನ್ನು ಪ್ರೀತಿಸುತ್ತೇನೆ ಮತ್ತು ನಿನ್ನನ್ನು ಮಿಸ್ ಮಾಡಿಕೊಳ್ಳುತ್ತೇನೆ’ ಎಂದು ಪತ್ರ ಕೊನೆಗೊಳಿಸಿದ್ದಾರೆ ಸುದೀಪ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us