ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತ (ಕೆಎಸ್ಡಿಎಲ್) ಅಧ್ಯಕ್ಷರಾಗಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madalu Veerupakshappa) ಹಾಗೂ ಅವರ ಪುತ್ರ ಪ್ರಶಾಂತ್ ಮನೆಯಲ್ಲಿ ಕೋಟ್ಯಂತರ ರೂಪಾಯಿ ಹಣವನ್ನು ಲೋಕಾಯುಕ್ತ ಅಧಿಕಾರಿಗಳು ಪತ್ತೆ ಮಾಡಿರುವುದು ಸಂಚಲನ ಸೃಷ್ಟಿ ಮಾಡಿದೆ. ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಈ ಹಗರಣ ಬೆಳಕಿಗೆ ಬಂದಿರುವುದು ರಾಜ್ಯ ರಾಜಕಾರಣದಲ್ಲಿ ದೊಡ್ಡ ಚರ್ಚೆ ಹುಟ್ಟುಹಾಕಿದೆ. ಈ ಘಟನೆಗೆ ಸಂಬಂಧಿಸಿದಂತೆ ಅನೇಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ (Nagathihalli Chandrashekar) ಕೂಡ ಟ್ವೀಟ್ ಮಾಡುವ ಮೂಲಕ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಮೈಸೂರು ಸ್ಯಾಂಡಲ್ ಸೋಪ್ (Mysore Sandal Soap) ಗುಣಮಟ್ಟದ ಕುರಿತು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.
‘ಮಾಡಾಳರು ಮಾಡಿರುವ ಭ್ರಷ್ಟತೆ ಹಾಗೂ ಕಲಬೆರಕೆಯ ಕಾರಣ ಸರ್ಕಾರಿ ಸ್ವಾಮ್ಯದ ಉದ್ಯಮ ಮತ್ತು ಉತ್ಪನ್ನಗಳಲ್ಲಿ ನಂಬಿಕೆ ಮತ್ತು ಗೌರವ ಇರಿಸಿದ ನನ್ನಂಥವರು ಬಹುಕಾಲದಿಂದ ಬಳಸುತ್ತಿದ್ದ ಮೈಸೂರು ಸ್ಯಾಂಡಲ್ ಸೋಪ್ ಬಳಸಲೂ ಹಿಂಜರಿಯುವಂತಾಗಿದೆ’ ಎಂದು ನಾಗತಿಹಳ್ಳಿ ಚಂದ್ರಶೇಖರ್ ಅವರು ಟ್ವೀಟ್ ಮಾಡಿದ್ದಾರೆ. ಅದಕ್ಕೆ ನೆಟ್ಟಿಗರು ಹಲವು ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
ಮಾಡಾಳರು ಮಾಡಿರುವ ಭ್ರಷ್ಟತೆ ಹಾಗೂ ಕಲಬೆರಕೆಯ ಕಾರಣ ಸರ್ಕಾರೀ ಸ್ವಾಮ್ಯದ ಉದ್ಯಮ ಮತ್ತು ಉತ್ಪನ್ನಗಳಲ್ಲಿ ನಂಬಿಕೆ ಮತ್ತು ಗೌರವ ಇರಿಸಿದ ನನ್ನಂಥವರು ಬಹುಕಾಲದಿಂದ ಬಳಸುತ್ತಿದ್ದ ಮೈಸೂರು ಸ್ಯಾಂಡಲ್ ಸೋಪ್ ಬಳಸಲೂ ಹಿಂಜರಿಯುವಂತಾಗಿದೆ. pic.twitter.com/Tjqu9HWeRo
— Nagathihalli Chandrashekhar (@NomadChandru) March 5, 2023
ಮಾಡಾಳ್ ನಿವಾಸದಲ್ಲಿ ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆ ಮಾರ್ಚ್ 3ಕ್ಕೆ ಮುಕ್ತಾಯವಾಗಿದೆ. ಶಾಸಕರ ಮನೆಯಲ್ಲಿ ಬರೋಬ್ಬರಿ 2,800 ಗ್ರಾಂ ಚಿನ್ನಾಭರಣ, 20 ಕೆ.ಜಿ ಬೆಳ್ಳಿ ಆಭರಣಗಳು, 16.5 ಲಕ್ಷ ರೂಪಾಯಿ ನಗದು ಹಾಗೂ ಅಪಾರ ಪ್ರಮಾಣದ ಆಸ್ತಿ ದಾಖಲೆಗಳು ಪತ್ತೆಯಾಗಿವೆ. ಚನ್ನಗಿರಿ ತಾಲೂಕಿನ ಚನ್ನೇಶಪುರ ಗ್ರಾಮದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿವಾಸದಲ್ಲಿ ಲೋಕಾಯುಕ್ತ ಪೊಲೀಸರು ಸತತ 10 ಗಂಟೆ ಕಾಲ ಪರಿಶೀಲನೆ ಮಾಡಿದ್ದಾರೆ.
ಲಂಚ ಸ್ವೀಕಾರ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಶಾಸಕ ಮಾಡಾಳ್ ವಿರೂಪಾಕ್ಷ ಸೇರಿದಂತೆ ಮತ್ತಿತರರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಶ್ರೇಯಸ್ ಕಶ್ಯಪ್ ನೀಡಿದ್ದ ದೂರಿನ ಅನ್ವಯ ದಾಖಲಾದ ಎಫ್ಐಆರ್ನಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಎ1 ಆಗಿದ್ದು, ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಎ2, ಕೆಎಸ್ಡಿಎಲ್ ಅಕೌಂಟೆಂಟ್ ಸುರೇಂದ್ರ ಎ3, ಮಾಡಾಳ್ ಪ್ರಶಾಂತ್ ಸಂಬಂಧಿ ಸಿದ್ದೇಶ್ ಎ4, ಅರೋಮಾ ಕಂಪನಿ ಸಿಬ್ಬಂದಿ ಆಲ್ಬರ್ಟ್ ನಿಕೋಲಾ ಎ5, ಅರೋಮಾ ಕಂಪನಿ ಸಿಬ್ಬಂದಿ ಗಂಗಾಧರ ಎ6 ಆಗಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 1:47 pm, Sun, 5 March 23