ರಾಗಿಣಿ ದ್ವಿವೇದಿ ನಟನೆಯ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಟ್ರೇಲರ್ ರಿಲೀಸ್

ಸಿನಿಮಾದ ಹೆಸರೇ ಹೇಳುವಂತೆ ಇದು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಮತ್ತು ಪಡಿತರ ವ್ಯವಸ್ಥೆಯ ಸುತ್ತ ನಡೆಯುವಂಥ ಕಥಾಹಂದರ ಇರುವ ಸಿನಿಮಾ. ಪಕ್ಕಾ ಗ್ರಾಮೀಣ ಸೊಗಡಿನ ಕಥಾಹಂದರದ ಈ ಸಿನಿಮಾದ ಸಂಪೂರ್ಣ ಚಿತ್ರೀಕರಣವನ್ನು ಮಂಡ್ಯ ಜಿಲ್ಲೆಯಲ್ಲೇ ನಡೆಸಲಾಗಿದೆ. ಜುಲೈ 31ರಂದು ಈ ಸಿನಿಮಾ ಬಿಡುಗಡೆ ಆಗಲಿದೆ.

ರಾಗಿಣಿ ದ್ವಿವೇದಿ ನಟನೆಯ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಟ್ರೇಲರ್ ರಿಲೀಸ್
Ragini Dwivedi, Kumar Bangarappa

Updated on: Jul 21, 2026 | 6:47 PM

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ (Sarkari Nyayabele Angadi) ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಬರುತ್ತಿದೆ. ಈ ಚಿತ್ರತಂಡ ಸದ್ದಿಲ್ಲದೆ ತನ್ನ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿಕೊಂಡಿದೆ. ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರವು ಶೀಘ್ರದಲ್ಲೇ ತೆರೆಗೆ ಬರಲು ಸಿದ್ಧವಾಗಿದೆ. ನಟಿ ರಾಗಿಣಿ ದ್ವಿವೇದಿ (Ragini Dwivedi), ನಟರಾದ ಕುಮಾರ್ ಬಂಗಾರಪ್ಪ, ದೊಡ್ಡಣ್ಣ, ನವೀನ್ ಸಜ್ಜು, ಕೃಷ್ಣಪ್ಪ, ರುದ್ರೇಗೌಡ ಮುಂತಾದ ಕಲಾವಿದರು ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಈ ಚಿತ್ರದ ಟ್ರೇಲರ್ ಈಗ ಬಿಡುಗಡೆಯಾಗಿದೆ.

ಹಿರಿಯ ರಾಜಕಾರಣಿ ಎಲ್.ಆರ್. ಶಿವರಾಮೇಗೌಡ, ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು, ಕರ್ನಾಟಕ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ. ಚಂದ್ರಶೇಖರ್, ಗಾಯಕಿ ಶಮಿತಾ ಮಲ್ನಾಡ್ ಸೇರಿದಂತೆ ಚಿತ್ರರಂಗ ಮತ್ತು ರಾಜಕೀಯ ಕ್ಷೇತ್ರದ ಹಲವರ ಸಮ್ಮುಖದಲ್ಲಿ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದ ಟ್ರೇಲರ್ ರಿಲೀಸ್ ಮಾಡಲಾಗಿದೆ.

Sarkari Nyayabele Angadi | Official Trailer | Ragini Dwivedi, Kumara Bangarappa | Aiplex Music

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದ ಟ್ರೇಲರ್ ಬಿಡುಗಡೆ ನಂತರ ಮಾಜಿ ಸಂಸದ ಶಿವರಾಮೇಗೌಡ ಮಾತನಾಡಿದರು. ‘ಜನ ಸಾಮಾನ್ಯರು, ಬಡವರು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸರ್ಕಾರಿ ನ್ಯಾಯಬೆಲೆ ಅಂಗಡಿಗಳ ಮೂಲಕ ದಿನಸಿ ಮತ್ತು ಆಹಾರವನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದೆ. ಆದರೆ, ಈ ವ್ಯವಸ್ಥೆಯಲ್ಲಿರುವ ಕೆಲವು ಲೋಪಗಳಿಂದ ಇದರ ಉದ್ದೇಶ ಪರಿಣಾಮಕಾರಿಯಾಗಿ ಈಡೇರುತ್ತಿಲ್ಲ. ಈಗ ಇದೇ ವಿಷಯವನ್ನು ಸಿನಿಮಾವಾಗಿಸಿ ಪ್ರೇಕ್ಷಕರ ಮುಂದೆ ತರಲಾಗುತ್ತಿದೆ. ಚಿತ್ರತಂಡದ ಇಂಥದ್ದೊಂದು ಪ್ರಯತ್ನ ನಿಜಕ್ಕೂ ಶ್ಲಾಘನೀಯ. ಸಾಮಾಜಿಕ ಕಳಕಳಿಯ ವಿಷಯಗಳನ್ನು ಸಿನಿಮಾ ಮೂಲಕ ಹೇಳಿದಾಗ, ಅದು ಪರಿಣಾಮಕಾರಿಯಾಗಿ ಪ್ರೇಕ್ಷಕರನ್ನು ತಲುಪುತ್ತದೆ. ಈ ಚಿತ್ರ ಜನಜಾಗೃತಿ ಮೂಡಿಸಿ, ಯಶಸ್ವಿಯಾಗಲಿ’ ಎಂದು ಅವರು ಹಾರೈಸಿದರು.

ಪಡಿತರ ವ್ಯವಸ್ಥೆಯ ಕುರಿತ ಮೊದಲ ಸಿನಿಮಾ:

ಸುದ್ದಿಗೋಷ್ಠಿಯಲ್ಲಿ ನಟ ಕುಮಾರ್ ಬಂಗಾರಪ್ಪ ಕೂಡ ಮಾತನಾಡಿದರು. ‘ಇಡೀ ದೇಶದಲ್ಲಿಯೇ ಸರ್ಕಾರಿ ನ್ಯಾಯಬೆಲೆ ಅಂಗಡಿ ಮತ್ತು ಪಡಿತರ ವ್ಯವಸ್ಥೆಯ ಮೇಲೆ ಮೂಡಿಬರುತ್ತಿರುವ ಮೊಟ್ಟ ಮೊದಲ ಸಿನಿಮಾ ಇದಾಗಿದೆ. ಇಡೀ ಗ್ರಾಮೀಣ ಪರಿಸರದ ಹಿನ್ನೆಲೆಯಲ್ಲಿ ಈ ಸಿನಿಮಾ ಸಾಗುತ್ತದೆ. ಮನರಂಜನೆ ಜೊತೆಗೆ ಒಂದು ಒಳ್ಳೆಯ ಸಂದೇಶ ಕೂಡ ಈ ಸಿನಿಮಾದಲ್ಲಿದೆ. ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಏನೇನು ವ್ಯವಹಾರಗಳು, ಅವ್ಯವಹಾರಗಳು ನಡೆಯುತ್ತದೆ ಎಂಬುದನ್ನು ಸಮಾಜಕ್ಕೆ ತೋರಿಸುವಂಥ ಕಥೆ ಈ ಸಿನಿಮಾದಲ್ಲಿದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ: ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಶೀರ್ಷಿಕೆ ಗೀತೆ ರಿಲೀಸ್ ಮಾಡಿದ ಸಿಎಂ ಸಿದ್ದರಾಮಯ್ಯ

ರಾಗಿಣಿಗೆ ಅಪ್ಪಟ ಹಳ್ಳಿ ಮಹಿಳೆಯ ಪಾತ್ರ:

ನಟಿ ರಾಗಿಣಿ ದ್ವಿವೇದಿ ಅವರು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದಲ್ಲಿ ಪಾರ್ವತಿ ಎಂಬ ಗ್ರಾಮೀಣ ಮಹಿಳೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಮೊದಲ ಬಾರಿಗೆ ಅಪ್ಪಟ ಹಳ್ಳಿ ಮಹಿಳೆಯ ಪಾತ್ರ ಈ ಸಿನಿಮಾದಲ್ಲಿ ನನಗೆ ಸಿಕ್ಕಿದೆ. ಇಡೀ ಸಿನಿಮಾವನ್ನು ಗ್ರಾಮೀಣ ಭಾಗದಲ್ಲಿ ಚಿತ್ರೀಕರಣ ಮಾಡಿದ್ದು ಮತ್ತೊಂದು ಅನುಭವ. ಈ ಸಿನಿಮಾ ನೋಡುಗರಿಗೆ ಮೆಸೇಜ್ ಜೊತೆಗೆ ಮನರಂಜನೆ ಕೂಡ ನೀಡಲಿದೆ’ ಎಂದು ರಾಗಿಣಿ ಹೇಳಿದರು.

‘ಜಯಶಂಕರ ಟಾಕೀಸ್‌’ ಬ್ಯಾನರಿನಲ್ಲಿ ನಿರ್ಮಾಣ ಆಗಿರುವ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರಕ್ಕೆ ತೇಜು ಮೂರ್ತಿ ಮತ್ತು ಪದ್ಮಾವತಿ ಚಂದ್ರಶೇಖರ್‌ ಜಂಟಿಯಾಗಿ ಬಂಡವಾಳ ಹೂಡಿದ್ದಾರೆ. ಚಿತ್ರದ ಹಾಡುಗಳಿಗೆ ಅನಂತ್‌ ಆರ್ಯನ್‌ ಸಂಗೀತ ಸಂಯೋಜಿಸುತ್ತಿದ್ದಾರೆ. ಬಿ. ರಾಮಮೂರ್ತಿ ಅವರು ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಸಾತ್ವಿಕ್‌ ಪವನ್‌ ಕುಮಾರ್‌ ಛಾಯಾಗ್ರಹಣ ಮತ್ತು ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us