ರಾಗಿಣಿ ದ್ವಿವೇದಿ, ವರಲಕ್ಷ್ಮೀ ‘ಪೊಲೀಸ್ ಕಂಪ್ಲೈಂಟ್’: ಸಾಕ್ಷಿಯಾದ ಹಿರಿಯ ನಟಿ ಪ್ರೇಮಾ

‘ಪೊಲೀಸ್ ಕಂಪ್ಲೈಂಟ್’ ಸಿನಿಮಾದ ಹಾಡು ಹಾಗೂ ಟೀಸರ್ ಬಿಡುಗಡೆ ಮೂಲಕ ಪ್ರಚಾರ ಆರಂಭಿಸಲಾಗಿದೆ. ಈ ಸಿನಿಮಾದಲ್ಲಿ ರಾಗಿಣಿ ದ್ವಿವೇದಿ, ವರಲಕ್ಷ್ಮಿ ಶರತ್​ಕುಮಾರ್ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಹಿರಿಯ ನಟಿ ಪ್ರೇಮಾ ಅವರು ‘ಪೊಲೀಸ್ ಕಂಪ್ಲೈಂಟ್’ ಟೀಸರ್ ಬಿಡುಗಡೆ ಮಾಡಿ ಶುಭ ಹಾರೈಸಿದರು.

ರಾಗಿಣಿ ದ್ವಿವೇದಿ, ವರಲಕ್ಷ್ಮೀ ‘ಪೊಲೀಸ್ ಕಂಪ್ಲೈಂಟ್’: ಸಾಕ್ಷಿಯಾದ ಹಿರಿಯ ನಟಿ ಪ್ರೇಮಾ
Police Complaint Song Release Event

Updated on: Mar 17, 2026 | 6:16 PM

ಮಹಿಳಾ ಪ್ರಧಾನ ಆ್ಯಕ್ಷನ್ ಕಹಾನಿ ಇರುವ ‘ಪೊಲೀಸ್ ಕಂಪ್ಲೈಂಟ್’ ಸಿನಿಮಾದಲ್ಲಿ ವರಲಕ್ಷ್ಮೀ ಶರತಕುಮಾರ್ ಹಾಗೂ ರಾಗಿಣಿ ದ್ವಿವೇದಿ (Ragini Dwivedi) ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ನವೀನ್ ಚಂದ್ರ, ಕೃಷ್ಣ ಸಾಯಿ ಅವರು ನಾಯಕ ನಟರಾಗಿ ಕಾಣಿಸಿಕೊಂಡಿದ್ದಾರೆ. ರವಿಶಂಕರ್, ಶರತ್ ಲೋಹಿತಾಶ್ವ, ಸಪ್ತಗಿರಿ, ಅನಿಲ್ ರಾಜ್, ಪೃಥ್ವಿರಾಜ್, ಜೆಮಿನಿ ಸುರೇಶ್ ಮುಂತಾದ ಕಲಾವಿದರು ನಟಿಸಿದ್ದಾರೆ. ಈ ಹಿಂದೆ ‘ಅನು’, ‘ದಂಡು’, ‘ಆಪ್ತ’ ಮುಂತಾದ ಸಿನಿಮಾಗಳನ್ನು ನಿರ್ದೇಶಿಸಿದ್ದ ಸಂಜೀವ ಮೆಗೋಟಿ ಅವರು ‘ಪೊಲೀಸ್ ಕಂಪ್ಲೈಂಟ್’ (Police Complaint) ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ.

‘ಎಂ.ಎಸ್.ಕೆ. ಪ್ರಮೀದಾಶ್ರೀ ಫಿಲ್ಮ್ಸ್’ ಬ್ಯಾನರ್ ಮೂಲಕ ‘ಪೊಲೀಸ್ ಕಂಪ್ಲೈಂಟ್’ ಚಿತ್ರ ನಿರ್ಮಾಣವಾಗಿದೆ. ಈಗಾಗಲೇ ಬಹುತೇಕ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇತ್ತೀಚೆಗೆ ಟೀಸರ್ ಮತ್ತು ಹಾಡೊಂದನ್ನು ಬಿಡುಗಡೆ ಮಾಡಿದೆ. ನಟಿ ಪ್ರೇಮಾ ಟೀಸರ್ ರಿಲೀಸ್ ಮಾಡಿದರು. ಮೊದಲ ಹಾಡನ್ನು ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್.ಆರ್.ಕೆ. ವಿಶ್ವನಾಥ್ ಬಿಡುಗಡೆಗೊಳಿಸಿದರು.

ಈ ವೇಳೆ ನಿರ್ದೇಶಕ ಸಂಜೀವ್ ಮೆಗೋಟಿ ಮಾತನಾಡಿದರು. ‘ಸುಮಾರು 10 ವರ್ಷದ ನಂತರ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೆ ಬರುತ್ತಿರುವುದಕ್ಕೆ ಖುಷಿಯಾಗುತ್ತಿದೆ. ನಾವು ಮಾಡಿದ ಕರ್ಮ ಹೇಗೆ ನಮ್ಮನ್ನು ಕಾಡುತ್ತದೆ ಎಂಬ ಒಂದು ಎಳೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಿದ್ದೇವೆ. ಕನ್ನಡ ಮತ್ತು ತೆಲುಗಿನ ಸುಮಾರು 50ಕ್ಕೂ ಹೆಚ್ಚಿನ ಕಲಾವಿದರು ನಟಿಸಿದ್ದಾರೆ. ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಮಾಡುವ ಯೋಜನೆಯಿದೆ’ ಎಂದು ಅವರು ಹೇಳಿದರು.

ನಟಿ ರಾಗಿಣಿ ದ್ವಿವೇದಿ ಅವರು ‘ಪೊಲೀಸ್ ಕಂಪ್ಲೈಂಟ್’ ಚಿತ್ರದಲ್ಲಿನ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ‘ನನ್ನ ವೃತ್ತಿಜೀವನದಲ್ಲಿ ಇದೊಂದು ವಿಭಿನ್ನ ಸಿನಿಮಾ. ಇದರಲ್ಲಿ ತಾಯಿ ಮತ್ತು ಮಗುವಿನ ಸಂಬಂಧದ ಸುತ್ತ ನನ್ನ ಪಾತ್ರ ಸಾಗುತ್ತದೆ. ಆ್ಯಕ್ಷನ್, ಹಾರರ್ ಜತೆಗೆ ಎಮೋಶನ್ಸ್ ಸಹ ಈ ಸಿನಿಮಾದಲ್ಲಿದೆ. ಎಲ್ಲಾ ರೀತಿಯ ಪ್ರೇಕ್ಷಕರಿಗೂ ಈ ಸಿನಿಮಾ ಇಷ್ಟವಾಗಲಿದೆ’ ಎಂದು ರಾಗಿಣಿ ಹೇಳಿದರು.

ಇದನ್ನೂ ಓದಿ: ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ

‘ಈವರೆಗೆ ತೆಲುಗಿನಲ್ಲಿ ಕೆಲವು ಚಿತ್ರಗಳಲ್ಲಿ ನಟಿಸಿದ್ದೇನೆ. ಕನ್ನಡದಲ್ಲಿ ಹೀರೋ ಆಗಿ ಇದು ನನಗೆ ಮೊದಲ ಸಿನಿಮಾ. ಸಿನಿಮಾದ ಕಥೆ ಮತ್ತು ಪಾತ್ರ ತುಂಬಾ ಚೆನ್ನಾಗಿದೆ’ ಎಂದು ಕೃಷ್ಣಸಾಯಿ ಹೇಳಿದರು. ಬಿಡುಗಡೆಯಾಗಿರುವ ಹಾಡಿಗೆ ಆರೋಹಣ ಸುಧೀಂದ್ರ ಸಂಗೀತ ನೀಡಿದ್ದು, ಬಿ.ಆರ್. ಛಾಯಾ ಧ್ವನಿಯಾಗಿದ್ದಾರೆ. ಈ ಸಿನಿಮಾಗೆ ಹರೀಶ್ ಸೊಂಡೇಕೊಪ್ಪ ಛಾಯಾಗ್ರಹಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us