ಡಿಕೆ ಸಾಹೇಬರು ಹೇಳಿದ್ರಲ್ಲಿ ತಪ್ಪಿಲ್ಲ: ನಟ್ಟು ಬೋಲ್ಟ್ ಹೇಳಿಕೆ ಬಗ್ಗೆ ರಮ್ಯಾ ಪ್ರತಿಕ್ರಿಯೆ

ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳ ವಿರುದ್ಧ ಇತ್ತೀಚೆಗೆ ಡಿಕೆ ಶಿವಕುಮಾರ್ ಅವರು ಗರಂ ಆಗಿ ಮಾತನಾಡಿದ್ದರು. ಅವರ ಹೇಳಿಕೆಯನ್ನು ನಟಿ ರಮ್ಯಾ ಬೆಂಬಲಿಸಿದ್ದಾರೆ. ಆದರೆ ವಿರೋಧ ಪಕ್ಷದ ಹಲವರು ಡಿಕೆ ಶಿವಕುಮಾರ್ ಹೇಳಿಕೆಯನ್ನು ಖಂಡಿಸುತ್ತಿದ್ದಾರೆ. ಹಾಗಾದರೆ ರಮ್ಯಾ ಪ್ರತಿಕ್ರಿಯೆ ಏನು ಅಂತ ತಿಳಿಯಲಿ ಈ ಸುದ್ದಿ ಓದಿ..

ಡಿಕೆ ಸಾಹೇಬರು ಹೇಳಿದ್ರಲ್ಲಿ ತಪ್ಪಿಲ್ಲ: ನಟ್ಟು ಬೋಲ್ಟ್ ಹೇಳಿಕೆ ಬಗ್ಗೆ ರಮ್ಯಾ ಪ್ರತಿಕ್ರಿಯೆ
Dk Shivakumar, Ramya

Updated on: Mar 02, 2025 | 10:09 PM

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕನ್ನಡದ ನೆಲ, ಜಲ, ಭಾಷೆ ವಿಷಯಕ್ಕೆ ಕಲಾವಿದರು ಬೆಂಬಲ ನೀಡುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. ಅಲ್ಲದೇ ಇಂಥವರ ನಟ್ಟು ಬೋಲ್ಟ್ ಟೈಟ್ ಮಾಡುವುದು ಕೂಡ ತಮಗೆ ಗೊತ್ತು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಅದಕ್ಕೆ ಸಂಬಂಧಪಟ್ಟಂತೆ ಚರ್ಚೆ ಜೋರಾಗಿದೆ. ನಟಿ ರಮ್ಯಾ ದಿವ್ಯ ಸ್ಪಂದನಾ (Ramya Divya Spandana) ಕೂಡ ಈ ಕುರಿತು ತಮ್ಮ ಅಭಿಪ್ರಾಯ ಏನು ಎಂಬುದನ್ನು ತಿಳಿಸಿದ್ದಾರೆ. ಹಂಪಿ ಉತ್ಸವದಲ್ಲಿ ಅವರು ಮಾತನಾಡಿದ್ದಾರೆ.

‘ಸಾಹೇಬ್ರು ಹೇಳಿದ್ರಲ್ಲಿ ಏನೂ ತಪ್ಪಿಲ್ಲ. ಅವರು ಹೇಳಿದ್ದು ಸರಿಯಾಗಿದೆ. ಕಲಾವಿದರಾಗಿ ನಮಗೆ ಒಂದು ಜವಾಬ್ದಾರಿ ಇದ್ದೇ ಇರುತ್ತದೆ. ಡಾ. ರಾಜ್​ಕುಮಾರ್​ ಅವರನ್ನು ನೋಡಿ.. ಕನ್ನಡ ಭಾಷೆಗಾಗಿ ಅವರು ಎಷ್ಟು ಹೋರಾಟ ಮಾಡಿದ್ದಾರೆ. ಸಿನಿಮಾ ಮತ್ತು ರಾಜಕೀಯದ ನಡುವೆ ಮೊದಲು ಇದ್ದ ಬೆಂಬಲ, ಪ್ರೋತ್ಸಾಹ ಇವತ್ತು ನನಗೆ ಕಾಣಿಸುತ್ತಿಲ್ಲ’ ಎಂದಿದ್ದಾರೆ ರಮ್ಯಾ.

‘ನಮಗೆ ಒಂದು ಜವಾಬ್ದಾರಿ ಇರುತ್ತದೆ ಎಂದು ಓರ್ವ ನಟಿಯಾಗಿ ನಾನು ಭಾವಿಸುತ್ತೇನೆ. ನಮ್ಮ ಭಾಷೆ, ಜಾಗ, ಸಂಸ್ಕೃತಿಗೆ ನಾವು ಯಾವಾಗಲೂ ಬೆಂಬಲ ನೀಡಬೇಕು. ಹಾಗಾಗಿ ಡಿಕೆ ಶಿವಕುಮಾರ್ ಅವರು ಹೇಳಿದ್ದರಲ್ಲಿ ನನಗೆ ಏನೂ ತಪ್ಪು ಎನಿಸಲಿಲ್ಲ’ ಎಂದು ರಮ್ಯಾ ಅವರು ಹೇಳಿದ್ದಾರೆ.

ಇದನ್ನೂ ಓದಿ
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

ರಮ್ಯಾ ಅವರು ಮತ್ತೆ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಬೇಕು ಎಂಬುದು ಅಭಿಮಾನಿಗಳ ಆಸೆ. ಹೊಸ ಸಿನಿಮಾ ಮಾಡುತ್ತಿದ್ದೀರಾ ಎಂಬ ಪ್ರಶ್ನೆಗೂ ಅವರು ಉತ್ತರ ನೀಡಿದ್ದಾರೆ. ‘ಸದ್ಯಕ್ಕೆ ಯಾವುದೇ ಸಿನಿಮಾ ಮಾಡುವ ಬಗ್ಗೆ ನಿರ್ಧಾರ ಆಗಿಲ್ಲ. ನಾನು ಸ್ಕ್ರಿಪ್ಟ್​ಗಳನ್ನು ಓದುತ್ತಿದ್ದೇನೆ. ನೋಡೋಣ. ಏನಾದರೂ ಇಂಟರೆಸ್ಟಿಂಗ್ ಆಗಿದ್ದರೆ ನಾನು ಮಾಡುತ್ತೇನೆ’ ಎಂದಿದ್ದಾರೆ ರಮ್ಯಾ ದಿವ್ಯ ಸ್ಫಂದನಾ.

ಹಂಪಿ ಉತ್ಸವದ ಬಗ್ಗೆ ರಮ್ಯಾ ಮಾತು:

‘ಬಹಳ ಖುಷಿ ಆಗುತ್ತಿದೆ. ನಾನು ಇದೇ ಮೊದಲ ಬಾರಿ ಹಂಪಿ ಉತ್ಸವಕ್ಕೆ ಬರುತ್ತಿರುವುದು. ಜಮೀರ್ ಅಹ್ಮದ್ ಅವರಿಗೆ ನಾನು ಧನ್ಯವಾದ ಹೇಳಲು ಇಷ್ಟಪಡುತ್ತೇನೆ. ಡಿಸಿ ಸಾಹೇಬರಿಗೂ ಧನ್ಯವಾದ. ತುಂಬ ಚೆನ್ನಾಗಿ ಆಯೋಜನೆ ಮಾಡಿದ್ದಾರೆ. ಕಾರ್ಯಕ್ರಮ ನೋಡಲು ಕಾಯುತ್ತಿದ್ದೇನೆ. ನನಗೆ ಹಂಪಿ ಇಷ್ಟ. ಇದು ಸುಂದರವಾಗಿದೆ. ನಾನು ಇಲ್ಲಿ ಶೂಟಿಂಗ್ ಮಾಡಿದ್ದೇನೆ. ಕರ್ನಾಟಕದ ಅತಿ ಸುಂದರ ಸ್ಥಳಗಳಲ್ಲಿ ಇದು ಕೂಡ ಒಂದು’ ಎಂದು ರಮ್ಯಾ ಅವರು ಹಂಪಿ ಬಗ್ಗೆ ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us