ಕರವೇ ರಾಜ್ಯಾಧ್ಯಕ್ಷರ ಮಗ ಚಿತ್ರರಂಗಕ್ಕೆ ಎಂಟ್ರಿ, ಸೈರನ್ ಸಿನಿಮಾ ಟ್ರೈಲರ್ ಬಿಡುಗಡೆ ಮಾಡಿದ ಗಣ್ಯರು

Sairan: ಕನ್ನಡದ ಸೈರನ್ ಸಿನಿಮಾ ಟ್ರೈಲರ್ ಅನ್ನು ಚಿತ್ರರಂಗದ ಹಲವು ಗಣ್ಯರು ಸೇರಿ ಬಿಡುಗಡೆ ಮಾಡಿದರು. ಕರವೇಯ ಪ್ರವೀಣ್ ಶೆಟ್ಟಿ ಪುತ್ರ ಈ ಸಿನಿಮಾದ ನಾಯಕ.

ಕರವೇ ರಾಜ್ಯಾಧ್ಯಕ್ಷರ ಮಗ ಚಿತ್ರರಂಗಕ್ಕೆ ಎಂಟ್ರಿ, ಸೈರನ್ ಸಿನಿಮಾ ಟ್ರೈಲರ್ ಬಿಡುಗಡೆ ಮಾಡಿದ ಗಣ್ಯರು
ಸೈರನ್

Updated on: May 17, 2023 | 7:00 AM

ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ (Praveen Shetty) ಪುತ್ರ ಪ್ರವೀರ್ ಶೆಟ್ಟಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಸೈರನ್ ಹೆಸರಿನ ಸಿನಿಮಾದಲ್ಲಿ ಪ್ರವೀರ್ ಶೆಟ್ಟಿ ನಟಿಸಿದ್ದು, ಸಿನಿಮಾದ ಟ್ರೈಲರ್ ಅನ್ನು ಚಿತ್ರರಂಗದ ಹಲವು ಗಣ್ಯರು ಹಾಗೂ ಇತರೆ ಕ್ಷೇತ್ರದ ಗಣ್ಯರುಗಳು ಸೇರಿ ಬಿಡುಗಡೆ ಮಾಡಿದರು. ಈಗಾಗಲೇ ಟೀಸರ್ ಹಾಗೂ ಹಾಡುಗಳಿಂದ ಸದ್ದು ಮಾಡುತ್ತಿರುವ “ಸೈರನ್” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ‌ಡಾಲಿ ಧನಂಜಯ (Daali Dhananhjay), ರಾಕ್ ಲೈನ್ ವೆಂಕಟೇಶ್, ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಪತ್ರಕರ್ತ ರಂಗನಾಥ್ ಭಾರದ್ವಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟ್ರೇಲರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ‌. ಚಿತ್ರ ಮೇ 26ರಂದು ಕೆ.ಆರ್ ಜಿ ಸ್ಟುಡಿಯೋಸ್ ಮೂಲಕ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ‌.

ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರ ಮಗ ಪ್ರವೀರ್ ಶೆಟ್ಟಿ ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ನಾಯಕನಾಗಿ ಎಂಟ್ರಿ ಕೊಡುತ್ತಿದ್ದಾರೆ. ಡೆಕ್ಕನ್ ಕಿಂಗ್ ಬ್ಯಾನರ್‌ನಲ್ಲಿ ಬಿಜು ಶಿವಾನಂದ್ ನಿರ್ಮಾಣ ಮಾಡಿದ್ದಾರೆ. ಈ ಚಿತ್ರವನ್ನು ರಾಜಾ ವೆಂಕಯ್ಯ ನಿರ್ದೇಶಿಸಿದ್ದಾರೆ. ಕಳೆದ 30 ವರ್ಷಗಳಿಂದ ನಿರ್ದೇಶಕ ಮುರುಗ ದಾಸ್ ಸೇರಿದಂತೆ ಹಲವರ ಬಳಿ ಚಿತ್ರರಂಗದ ವಿವಿಧ ವಿಭಾಗಗಳಲ್ಲಿ ರಾಜಾ ವೆಂಕಯ್ಯ ಕೆಲಸ ಮಾಡಿದ್ದಾರೆ. “ಸೈರನ್” ಅವರ ನಿರ್ದೇಶನದ ಮೊದಲ ಕನ್ನಡ ಸಿನಿಮಾ. ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಡಾಲಿ ಧನಂಜಯ್, ‘ಪ್ರವೀರ್ ಶೆಟ್ಟಿ ಅವರನ್ನು ಮೊದಲು ನೋಡಿದಾಗ ಚಿಕ್ಕ ಹುಡುಗ. ಈಗ ಹೀರೋ ಆಗಿದ್ದಾರೆ. ಚಿತ್ರರಂಗದಲ್ಲಿ ಅವರಿಗೆ ಹೆಚ್ಚಾಗಿ ಅವಕಾಶ ಸಿಗಲಿ’ ಎಂದು ಹಾರೈಸಿದರು.

‘ಕನ್ನಡ ಎಂದು ಬಂದಾಗ ಹೋರಾಟ ನೆನಪಾಗುತ್ತದೆ. ನಾನು ಹಲವಾರು ವರ್ಷಗಳಿಂದ ಪ್ರವೀಣ್ ಶೆಟ್ಟಿ ಅವರನ್ನು ನೋಡುತ್ತಾ ಬಂದಿದ್ದೇವೆ. ಅವರ ಮನೆಯಿಂದ ಚಿತ್ರರಂಗಕ್ಕೆ ಒಂದು ಉಡುಗೊರೆಯಾಗಿ ಮಗನನ್ನು ಕೊಡುತ್ತಿದ್ದಾರೆ. ಟ್ರೇಲರ್ ನೋಡಿದಾಗ ಹೊಸ ಹುಡುಗ ಅನಿಸಲಿಲ್ಲ. ಅಷ್ಟು ಚೆನ್ನಾಗಿ ನಟಿಸಿದ್ದಾರೆ ಪ್ರವೀರ್. ಹೊಸದಾಗಿ ಬರುವವರು ಗುರಿ ಇಟ್ಟುಕೊಂಡು ಬರಬೇಕು ಜೊತೆಗೆ ತಾಳ್ಮೆ ಇರಬೇಕು’ ಎಂದರು ರಾಕ್ ಲೈನ್ ವೆಂಕಟೇಶ್.

ಚಿತ್ರದ ನಾಯಕ ಪ್ರವೀರ್ ಶೆಟ್ಟಿ ಮಾತನಾಡಿ ‘ನಾನು ಈ ದಿನಕ್ಕಾಗಿ ಹಲವು ವರ್ಷಗಳಿಂದ ಕಾಯುತ್ತಿದೆ. ಶ್ರೀಮುರಳಿ ಅವರು ಟ್ರೇಲರ್‌ಗೆ ಧ್ವನಿ ಕೊಟ್ಟಿದ್ದು ಮತ್ತಷ್ಟು ಶಕ್ತಿ ಬಂದಿದೆ. ನಿರ್ದೇಶಕರು ಶ್ರಮವಹಿಸಿ ಸಿನಿಮಾ ಮಾಡಿದ್ದಾರೆ. ನಿಮ್ಮೆಲ್ಲರ ಸಹಕಾರ ಇರಲಿ’ ಎಂದರು. ತಮಿಳು ನಟ ದೀನಾ, ಚಿತ್ರದ ನಾಯಕಿ ಲಾಸ್ಯ, ನಟಿ ಸ್ಪರ್ಶ ರೇಖಾ, ಸಂಗೀತ ನಿರ್ದೇಶಕ ಭಾರದ್ವಾಜ್, ಛಾಯಾಗ್ರಾಹಕ ನಾಗೇಶ್ ಆಚಾರ್ಯ ಮುಂತಾದವರು ಚಿತ್ರದ ಕುರಿತು ತಮ್ಮ ಅನುಭವ ಹಂಚಿಕೊಂಡರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us