ಕ್ರೀಂ ಸಿನಿಮಾ: ವೇಶ್ಯೆ ಪಾತ್ರದಲ್ಲಿ ಸಂಯುಕ್ತಾ ಹೆಗ್ಡೆ, ಕ್ರೀಂ ಎಂದರೆ ಅರ್ಥ ಬೇರೆಯೇ ಇದೆ

Samyuktha Hegde: ನಟಿ ಸಂಯುಕ್ತಾ ಹೆಗ್ಡೆ ಕ್ರೀಂ ಹೆಸರಿನ ಕನ್ನಡ ಸಿನಿಮಾದಲ್ಲಿ ನಟಿಸಿದ್ದಾರೆ. ವೇಶ್ಯೆಯ ಪಾತ್ರದಲ್ಲಿ ಸಂಯುಕ್ತಾ ನಟಿಸಿದ್ದು, ಅಗ್ನಿ ಶ್ರೀಧರ್ ಸಿನಿಮಾಕ್ಕೆ ಕತೆ ಬರೆದಿದ್ದಾರೆ.

ಕ್ರೀಂ ಸಿನಿಮಾ: ವೇಶ್ಯೆ ಪಾತ್ರದಲ್ಲಿ ಸಂಯುಕ್ತಾ ಹೆಗ್ಡೆ, ಕ್ರೀಂ ಎಂದರೆ ಅರ್ಥ ಬೇರೆಯೇ ಇದೆ
ಸಂಯುಕ್ತಾ ಹೆಗ್ಡೆ

Updated on: Apr 20, 2023 | 8:30 PM

ಕಿರಿಕ್ ಪಾರ್ಟಿ (Kirik Party) ಸಿನಿಮಾದಲ್ಲಿ ಗಮನ ಸೆಳೆದಿದ್ದ ನಟಿ ಸಂಯುಕ್ತಾ ಹೆಗಡೆ (Samyuktha Hegde) ಇದೀಗ ಹೊಸ ಕನ್ನಡ ಸಿನಿಮಾದೊಂದಿಗೆ ಬಂದಿದ್ದಾರೆ. ಅದೂ ಮಹಿಳಾ ಪ್ರಧಾನ ಸಿನಿಮಾದಲ್ಲಿ ಪವರ್​ಫುಲ್ ಪಾತ್ರದಲ್ಲಿ ಸಂಯುಕ್ತಾ ಹೆಗ್ಡೆ ಕಾಣಿಸಿಕೊಳ್ಳುತ್ತಿದ್ದಾರೆ. ಸಂಯುಕ್ತಾ ಹೆಗ್ಡೆ ಕ್ರೀಂ (Cream) ಹೆಸರಿನ ಕನ್ನಡ ಸಿನಿಮಾದಲ್ಲಿ ನಟಿಸಿದ್ದು, ಸಿನಿಮಾ ಶೀಘ್ರವೇ ಬಿಡುಗಡೆ ಆಗಲಿದೆ. ಚಿತ್ರತಂಡವು ಇತ್ತೀಚೆಗೆ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಿನಿಮಾದ ಬಗ್ಗೆ ಹಲವು ವಿಷಯಗಳನ್ನು ಮಾತನಾಡಿದ್ದಾರೆ.

”ಈ ಸಿನಿಮಾಗಾಗಿ ನಾನು 200 ಪರ್ಸೆಂಟ್ ಶ್ರಮ ಹಾಕಿದ್ದೇನೆ. ಚಿತ್ರೀಕರಣ ಸಮಯದಲ್ಲಿ ಕಾಲಿಗೆ ತೀವ್ರವಾದ ಪೆಟ್ಟಾಯಿತು. ಎರಡು ತಿಂಗಳು ಮನೆಯಲ್ಲೇ ಇದ್ದು, ವಿಶ್ರಾಂತಿ ಪಡೆದಿದ್ದು ಇದೇ ಮೊದಲ ಬಾರಿ. ಫಿಸಿಯೋ ಥೆರಪಿ ಮಾಡಿಸಿಕೊಳ್ಳಬೇಕಾದರೆ ನಾನು ಪಟ್ಟ ನೋವು ಅಷ್ಟಿಷ್ಟಲ್ಲ. ಈ ಚಿತ್ರಕ್ಕಾಗಿ ನಾನು ಬೆವರು ಮಾತ್ರ ಹರಿಸಿಲ್ಲ. ರಕ್ತವನ್ನು ಹರಿಸಿದ್ದೇನೆ. ಇಷ್ಟೆಲ್ಲ ಶ್ರಮಪಟ್ಟರು ಒಂದೊಳ್ಳೆಯ ಸಿನಿಮಾದಲ್ಲಿ ನಟಿಸಿದ ತೃಪ್ತಿಯಿದೆ ಎಂದರು ನಾಯಕಿ ಸಂಯುಕ್ತ ಹೆಗಡೆ.

ನಿರ್ದೇಶಕ ಅಭಿಷೇಕ್ ಬಸಂತ್ ಮಾತನಾಡಿ, ”ಇದು ನನ್ನ ಮೊದಲ ಚಿತ್ರ. ಈ ಸಿನಿಮಾ ಮಾಡಲು ನನಗೆ ರೋಷನ್‌ ಸೇರಿದಂತೆ ಸಾಕಷ್ಟು ಜನ ಸಹಕಾರ ನೀಡಿದ್ದಾರೆ. ಅಗ್ನಿ ಶ್ರೀಧರ್ ಅವರು ಈ ಚಿತ್ರದ ಕಥೆ ಬರೆದಿದ್ದಾರೆ. ಮುಖ್ಯವಾಗಿ ಕಥೆ ಬರೆದಿರುವವರಿಗೆ ನಿರ್ದೇಶನ ಇಷ್ಟವಾಗಬೇಕು. ಆ ನಿಟ್ಟಿನಲ್ಲಿ ನಾನು ಗೆದ್ದಿದ್ದೇನೆ ಅಂದುಕೊಳ್ಳಬಹುದು. ನಮ್ಮ ಚಿತ್ರಕ್ಕೆ ಸಂಯುಕ್ತ ಹೆಗಡೆ ಅವರನ್ನು ಬಿಟ್ಟು ಬೇರೆ ಯಾರನ್ನೂ ನಾಯಕಿಯ ಪಾತ್ರಕ್ಕೆ ಕಲ್ಪನೆ ಮಾಡಿಕೊಳ್ಳಲು ಸಾಧ್ಯವಿಲ್ಲ, ಚಿತ್ರಕ್ಕಾಗಿ ಅವರು ಪಟ್ಟಿರುವ ಶ್ರಮ ನಿಜಕ್ಕೂ ಶ್ಲಾಘನೀಯ. ಸಾಹಸ ದೃಶ್ಯದಲ್ಲಿ ಅಭಿನಯಿಸುವಾಗ ಅವರ ಕಾಲಿಗೆ ಬಿದ್ದ ಪೆಟ್ಟಿನಿಂದ ಚೇತರಿಸಿಕೊಳ್ಳಲು ಕೆಲವು ತಿಂಗಳುಗಳೆ ಆಯಿತು. ಆನಂತರ ಕೂಡ ಅವರು ಮೊದಲಿನ ಹುಮ್ಮಸಿನಿಂದಲೇ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸದ್ಯ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

“ಕ್ರೀಂ” ಎಂದರೆ ಕಾಳಿ ಮಾತೆಯನ್ನು ಆರಾಧಿಸುವ ಬೀಜಾಕ್ಷರಿ ಮಂತ್ರ. ದೇಶದಲ್ಲಿ ಪ್ರತಿ ತಿಂಗಳು 400ಕ್ಕೂ ಹೆಚ್ಚು ಮಹಿಳೆಯರ ಹತ್ಯೆಯಾಗುತ್ತಿದೆ. ಜೊತೆಗೆ ಮಕ್ಕಳು ಕಣ್ಮರೆಯಾಗುತ್ತಿದ್ದಾರೆ, ಈ ಪ್ರಕರಣಗಳ ಹಿಂದೆ ಯಾರಿದ್ದಾರೆ? ಯಾಕೆ ಮಾಡುತ್ತಿದ್ದಾರೆ? ಎನ್ನುವ ಅಂಶವನ್ನಿಟ್ಟುಕೊಂಡು ಕಥೆ ಬರೆದಿದ್ದೇನೆ. ಸಂಯುಕ್ತ ಹೆಗಡೆ ಅವರದು ಇದರಲ್ಲಿ ವೇಶ್ಯೆಯ ಪಾತ್ರ. ಈ ಚಿತ್ರದ ಬಗ್ಗೆ ಕೂಡ ಕೆಲವು ವಿವಾದಗಳು ಬರಬಹುದು. ಎದುರಿಸಲು ನಾನು ಸಿದ್ದನಿದ್ದೇನೆ” ಎಂದರು ಚಿತ್ರಕ್ಕೆ ಕಥೆ ಹಾಗೂ ಸಂಭಾಷಣೆ ಬರೆದಿರುವ ಅಗ್ನಿ ಶ್ರೀಧರ್.

ನಟ ರೋಷನ್ ಸಹ “ಕ್ರೀಂ” ಚಿತ್ರದ ಕುರಿತಂತೆ ಮಾತನಾಡಿದರು.ಚಿತ್ರ ಚೆನ್ನಾಗಿ ಬರಲು ಸಹಕಾರ ನೀಡುತ್ತಿರುವ ಚಿತ್ರತಂಡದ ಸದಸ್ಯರಿಗೆ ನಿರ್ಮಾಪಕ ದೇವೇಂದ್ರ ಧನ್ಯವಾದ ತಿಳಿಸಿದರು. ಅಗ್ನಿ ಶ್ರೀಧರ್ ಅವರು ಕಥೆ ಹಾಗೂ ಸಂಭಾಷಣೆ ಬರೆದಿರುವ, ಅಭಿಷೇಕ್ ಬಸಂತ್ ನಿರ್ದೇಶನದಲ್ಲಿ ಮೂಡಿಬಂದಿರುವ ಮಹಿಳಾಪ್ರಧಾನ ಚಿತ್ರ “ಕ್ರೀಂ”. ಸಂಯುಕ್ತ ಹೆಗಡೆ ಈ ಚಿತ್ರದ ನಾಯಕಿಯಾಗಿದ್ದು, ಅಚ್ಯುತಕುಮಾರ್, ಅರುಣಸಾಗರ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಡಿ.ಕೆ. ದೇವೇಂದ್ರ ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us