ದರ್ಶನ್ ಜಾಮೀನು ರದ್ದು ಕೋರಿ ಅರ್ಜಿ, ವಿಚಾರಣೆಗೆ ಸುಪ್ರೀಂ ಅಸ್ತು

Darshan Thoogudeepa: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್, ಪವಿತ್ರಾ ಗೌಡ ಇನ್ನಿತರರು ಜಾಮೀನಿನ ಮೇಲೆ ಹೊರಗಿದ್ದಾರೆ. ಪೊಲೀಸ್ ಇಲಾಖೆಯು ರೇಣುಕಾ ಸ್ವಾಮಿ ಪ್ರಕರಣದ ಏಳು ಮಂದಿ ಆರೋಪಿಗಳ ಜಾಮೀನು ರದ್ದು ಮಾಡುವಂತೆ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಸಿತ್ತು. ಇದೀಗ ಸುಪ್ರೀಂಕೋರ್ಟ್ ಅರ್ಜಿಯ ವಿಚಾರಣೆಯಲ್ಲಿ ಆಸಕ್ತಿ ತೋರಿಸಿದೆ. ವಿಚಾರಣೆಗೆ ದಿನಾಂಕ ನಿಗದಿ ಮಾಡಿದೆ.

ದರ್ಶನ್ ಜಾಮೀನು ರದ್ದು ಕೋರಿ ಅರ್ಜಿ, ವಿಚಾರಣೆಗೆ ಸುಪ್ರೀಂ ಅಸ್ತು
Darshan Pavithra

Updated on: Mar 18, 2025 | 2:29 PM

ರೇಣುಕಾ ಸ್ವಾಮಿ (Renuka Swamy) ಕೊಲೆ ಆರೋಪಿಗಳಿಗೆ ಜಾಮೀನು ದೊರೆತು ತಿಂಗಳುಗಳೆ ಆಗಿವೆ. ಪ್ರಕರಣದ ಮುಖ್ಯ ಆರೋಪಿಗಳಾದ ನಟ ದರ್ಶನ್ (Darshan), ಪವಿತ್ರಾ ಗೌಡ ಅವರುಗಳು ಸಾಮಾನ್ಯ ಜೀವನಕ್ಕೆ ಮರಳಿದ್ದಾರೆ. ಪವಿತ್ರಾ ಗೌಡ ತಮ್ಮ ರೆಡ್ ಕಾರ್ಪೆಟ್ ಫ್ಯಾಷನ್ ಸ್ಟುಡಿಯೋನಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರೆ. ನಟ ದರ್ಶನ್ ಮತ್ತೆ ಸಿನಿಮಾ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಈ ನಡುವೆ ಆರೋಪಿಗಳ ಜಾಮೀನು ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಲಾಗಿದ್ದು, ಆರೋಪಿಗಳಿಗೆ ಮತ್ತೆ ಟೆನ್ಷನ್ ಶುರುವಾಗಿದೆ.

ಡಿಸೆಂಬರ್ ತಿಂಗಳಲ್ಲಿ ರಾಜ್ಯ ಹೈಕೋರ್ಟ್​ ರೇಣುಕಾ ಸ್ವಾಮಿ ಕೊಲೆ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಇನ್ನೂ ಕೆಲವರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ಅದರ ಬೆನ್ನಲ್ಲೆ ಪೊಲೀಸ್ ಇಲಾಖೆಯು ಗೃಹ ಇಲಾಖೆಯ ಅನುಮತಿ ಪಡೆದು ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯ ವಿಚಾರಣೆ ಈ ವರೆಗೆ ನಡೆದಿರಲಿಲ್ಲ. ಇದೀಗ ಜಾಮೀನು ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸುವಂತೆ ವಕೀಲ ವಕೀಲ ಅನಿಲ್ ಕುಮಾರ್ ನಿಶಾನಿ ಮನವಿ ಮಾಡಿದ್ದಾರೆ.

ವಕೀಲ ಅನಿಲ್ ಕುಮಾರ್ ನಿಶಾನಿ ಅವರ ಮನವಿಗೆ ಸ್ಪಂದಿಸಿರುವ ಸುಪ್ರೀಂಕೋರ್ಟ್ ಏಪ್ರಿಲ್ 2 ರಂದು ಅರ್ಜಿಯ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಏಪ್ರಿಲ್ 2 ರಂದು ನಡೆಯುವ ವಿಚಾರಣೆಯಲ್ಲಿ ಪ್ರಕರಣ ಪೊಲೀಸರ ಪರವಾದರೆ ದರ್ಶನ್, ಪವಿತ್ರಾ ಸೇರಿ ಇನ್ನೂ ಕೆಲ ಆರೋಪಿಗಳು ಮತ್ತೆ ಜೈಲು ಪಾಲಾಗಲಿದ್ದಾರೆ.

ಇದನ್ನೂ ಓದಿ:‘ನವಗ್ರಹ’ ಬಳಿಕ ‘ಡೆವಿಲ್’ ಚಿತ್ರದಲ್ಲಿ ದರ್ಶನ್ ಜತೆ ಶರ್ಮಿಳಾ ನಟನೆ

ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಮಂದಿ ಆರೋಪಿಗಳ ಜಾಮೀನು ರದ್ದು ಮಾಡುವಂತೆ ಮನವಿ ಸಲ್ಲಿಸಲಾಗಿದೆ. ದರ್ಶನ್ ಪರವಾಗಿ ಸುಪ್ರೀಂಕೋರ್ಟ್​ನಲ್ಲಿಯೂ ವಕೀಲ ನಾಗೇಶ್ ಅವರೇ ವಾದ ಮಂಡಿಸುವ ಸಾಧ್ಯತೆ ಇದೆ. ಸರ್ಕಾರದ ಪರವಾಗಿ ಅನಿಲ್ ಕುಮಾರ್ ನಿಶಾನಿ ಅವರು ವಾದಿಸುವ ಸಾಧ್ಯತೆ ದಟ್ಟವಾಗಿದೆ.

ಕಳೆದ ವರ್ಷ ಜೂನ್9 ರಂದು ಚಿತ್ರದುರ್ಗದ ರೇಣುಕಾ ಸ್ವಾಮಿಯ ಕೊಲೆಯಾಗಿತ್ತು. ಜೂನ್ 11 ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇನ್ನೂ ಕೆಲವರನ್ನು ಬಂಧಿಸಿದ್ದರು. ನಟ ದರ್ಶನ್, ಪವಿತ್ರಾ ಗೌಡ ಇನ್ನೂ ಕೆಲವರು ಸುಮಾರು ಐದು ತಿಂಗಳುಗಳಿಗೂ ಹೆಚ್ಚು ಕಾಲ ವಿಚಾರಣಾಧೀನ ಕೈದಿಗಳಾಗಿ ಜೈಲು ವಾಸ ಅನುಭವಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us