‘ತೀರ್ಥರೂಪ ತಂದೆಯವರಿಗೆ’: ಇದು ‘ಹೊಂದಿಸಿ ಬರೆಯಿರಿ’ ನಿರ್ದೇಶಕನ ಹೊಸ ಚಿತ್ರ

ಕನ್ನಡ ಮತ್ತು ತೆಲುಗಿನಲ್ಲಿ ‘ತೀರ್ಥರೂಪ ತಂದೆಯವರಿಗೆ’ ಸಿನಿಮಾ ಸಿದ್ಧವಾಗಲಿದೆ. ತೆಲುಗಿನಲ್ಲಿ ‘ಪ್ರಿಯಮೈನ ನಾನ್ನಕು’ ಎಂದು ಟೈಟಲ್​ ಇಡಲಾಗಿದೆ. ನಿಹಾರ್ ಮುಖೇಶ್ ಅವರು ಈ ಸಿನಿಮಾಗೆ ಹೀರೋ ಆಗಿದ್ದಾರೆ. ವರಮಹಾಲಕ್ಷ್ಮೀ ಹಬ್ಬದ ಶುಭದಿನದಂದು ಈ ಚಿತ್ರಕ್ಕೆ ಮುಹೂರ್ತ ಮಾಡಲಾಗಿದೆ. ಚಿತ್ರತಂಡದ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

‘ತೀರ್ಥರೂಪ ತಂದೆಯವರಿಗೆ’: ಇದು ‘ಹೊಂದಿಸಿ ಬರೆಯಿರಿ’ ನಿರ್ದೇಶಕನ ಹೊಸ ಚಿತ್ರ
‘ತೀರ್ಥರೂಪ ತಂದೆಯವರಿಗೆ’ ಸಿನಿಮಾದ ಮುಹೂರ್ತ

Updated on: Aug 16, 2024 | 10:37 PM

2023ರಲ್ಲಿ ಗಮನ ಸೆಳೆದ ಕನ್ನಡ ಸಿನಿಮಾಗಳಲ್ಲಿ ‘ಹೊಂದಿಸಿ ಬರೆಯಿರಿ’ ಕೂಡ ಪ್ರಮುಖವಾಗಿದೆ. ಈ ಚಿತ್ರದ ಮೂಲಕ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಅವರು ಜನರ ಮೆಚ್ಚುಗೆ ಗಳಿಸಿದ್ದರು. ಆ ಸಿನಿಮಾದಲ್ಲಿ ಡಿಫರೆಂಟ್​ ಆದ ಟೈಟಲ್​ ಹಾಗೂ ಜನರಿಗೆ ಇಷ್ಟವಾಗುವ ಕಹಾನಿ ಇತ್ತು. ಈಗ ಅವರು ಹೊಸ ಸಿನಿಮಾದ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಈ ಬಾರಿಯೂ ಅವರು ಡಿಫರೆಂಟ್​ ಆದಂತಹ ಶೀರ್ಷಿಕೆ ಆಯ್ಕೆ ಮಾಡಿಕೊಂಡಿದ್ದಾರೆ. ಅಪ್ಪಟ ಕನ್ನಡದ ಟೈಟಲ್​ ಅನ್ನೇ ಅವರು ಆಯ್ದುಕೊಂಡಿದ್ದಾರೆ. ‘ತೀರ್ಥರೂಪ ತಂದೆಯವರಿಗೆ’ ಎಂಬುದು ರಾಮೇನಹಳ್ಳಿ ಜಗನ್ನಾಥ ಅವರ ಹೊಸ ಸಿನಿಮಾದ ಶೀರ್ಷಿಕೆ.

ಫ್ಯಾಮಿಲಿ ಪ್ರೇಕ್ಷಕರಿಗೆ ‘ಹೊಂದಿಸಿ ಬರೆಯಿರಿ’ ಸಿನಿಮಾ ಸಖತ್ ಇಷ್ಟ ಆಗಿತ್ತು. ಈಗ ‘ತೀರ್ಥರೂಪ ತಂದೆಯವರಿಗೆ’ ಸಿನಿಮಾ ಟೈಟಲ್​ ಕೂಡ ಕೌಟುಂಬಿಕ ಪ್ರೇಕ್ಷಕರನ್ನು ಟಾರ್ಗೆಟ್​ ಮಾಡಿದಂತಿದೆ. ವರಮಹಾಲಕ್ಷ್ಮೀ ಹಬ್ಬದ ದಿನ ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಈ ಸಿನಿಮಾಗೆ ಮುಹೂರ್ತ ಮಾಡಲಾಗಿದೆ. ನಿರ್ದೇಶಕರ ಪುತ್ರಿ ಈ ಚಿತ್ರಕ್ಕೆ ಕ್ಲ್ಯಾಪ್ ಮಾಡಿದರೆ, ನವೀನ್ ಶಂಕರ್ ಮತ್ತು ಅರ್ಚನಾ ಜೋಯಿಸ್ ಅವರು ಕ್ಯಾಮೆರಾ ಚಾಲನೆ ಮಾಡಿ ಶುಭ ಕೋರಿದರು.

‘ತೀರ್ಥರೂಪ ತಂದೆಯವರಿಗೆ’ ಚಿತ್ರವು ‘ಜೈ ಚಾಮುಂಡೇಶ್ವರಿ ಪ್ರೊಡಕ್ಷನ್ಸ್’ ಮೂಲಕ ನಿರ್ಮಾಣ ಆಗುತ್ತಿದೆ. ರಾಮೇನಹಳ್ಳಿ ಜಗನ್ನಾಥ ಅವರೇ ಕಥೆ ಬರೆದಿದ್ದಾರೆ. ‘ಹೊಂದಿಸಿ ಬರೆಯಿರಿ’ ಚಿತ್ರ ನಿರ್ಮಾಣ ಮಾಡಿದ್ದ ‘ಸಂಡೇ ಸಿನಿಮಾಸ್’ ಈ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದೆ. ‘ಬ್ಲಿಂಕ್’ ಸಿನಿಮಾ ಖ್ಯಾತಿಯ ರವಿಚಂದ್ರ ಎ.ಜೆ. ಅವರು ‘ತೀರ್ಥರೂಪ ತಂದೆಯವರಿಗೆ’ ಸಿನಿಮಾಗೆ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಅತ್ಯುತ್ತಮ ನಟ-ನಟಿ ‘ರಾಷ್ಟ್ರ ಪ್ರಶಸ್ತಿ’ ಪಡೆದ ಕನ್ನಡದ ಪ್ರತಿಭಾವಂತ ಕಲಾವಿದರು ಇವರು..

ದೀಪಕ್ ಯರಗೇರಾ ಅವರು ‘ತೀರ್ಥರೂಪ ತಂದೆಯವರಿಗೆ’ ಛಾಯಾಗ್ರಹಣ ಮಾಡುತ್ತಿದ್ದಾರೆ. ಪ್ರಶಾಂತ್ ರಾಜಪ್ಪ ಅವರು ಸಂಭಾಷಣೆ ಬರೆದಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾದ ಶೂಟಿಂಗ್ ಆರಂಭ ಆಗಲಿದೆ. ತೆಲುಗಿನ ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರ ಮನಗೆದ್ದ ನಿಹಾರ್ ಮುಖೇಶ್ ಅವರು ‘ತೀರ್ಥರೂಪ ತಂದೆಯವರಿಗೆ’ ಸಿನಿಮಾ ಮೂಲಕ ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಅವರು ನಟಿಸಿರುವ ‘ಗೀತಾ ಶಂಕರಂ‌’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us