ಹುಲಿ ಉಗುರು: ದರ್ಶನ್​ ವಿರುದ್ಧ ದೂರು ನೀಡಿದವರಿಗೆ ಅಭಿಮಾನಿಗಳಿಂದ ಕೊಲೆ ಬೆದರಿಕೆ

Tiger Claw Pendant Case: ದರ್ಶನ್​ ಅಭಿಮಾನಿಗಳಿಂದ ಕೊಲೆ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಶಿವಕುಮಾರ್​ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್​ ಬಿ. ದಯಾನಂದ್​ಗೆ ಶಿವಕುಮಾರ್ ದೂರು ನೀಡಿದ್ದಾರೆ. ಆಡಿಯೋ ಮತ್ತು ವಿಡಿಯೋ ಕಾಲ್​ ಮೂಲಕ ತಮಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಹುಲಿ ಉಗುರು: ದರ್ಶನ್​ ವಿರುದ್ಧ ದೂರು ನೀಡಿದವರಿಗೆ ಅಭಿಮಾನಿಗಳಿಂದ ಕೊಲೆ ಬೆದರಿಕೆ
ದರ್ಶನ್​, ಶಿವಕುಮಾರ್​

Updated on: Oct 26, 2023 | 2:33 PM

ನಟ ದರ್ಶನ್​ (Darshan) ಅವರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. ಹುಲಿ ಉಗುರು ಲಾಕೆಟ್​ (Tiger Claw Pendant) ಧರಿಸಿದ ಆರೋಪ ಅವರ ಮೇಲಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿಇರುವ ಅವರ ಮನೆಯಲ್ಲಿ ಈಗಾಗಲೇ ಅರಣ್ಯಾಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ದರ್ಶನ್​ ವಿರುದ್ಧ ವಂದೇ ಮಾತರಂ ಸಂಘಟನೆಯ ಮುಖಂಡ ಶಿವಕುಮಾರ್​ ಅವರು ದೂರು ನೀಡಿದ ನಂತರ ಇಷ್ಟೆಲ್ಲ ಬೆಳವಣಿಗೆ ನಡೆದಿದೆ. ಈಗ ದರ್ಶನ್​ ಅಭಿಮಾನಿಗಳಿಂದ (Darshan Fans) ಶಿವಕುಮಾರ್​ಗೆ ಕೊಲೆ ಬೆದರಿಕೆ ಬಂದಿದೆ. ಇದರಲ್ಲಿ ದರ್ಶನ್​ ಅವರ ಕೈವಾಡ ಇದೆ ಎಂದು ಶಿವಕುಮಾರ್​ ಆರೋಪಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

‘ಅಕ್ಟೋಬರ್​ 25ರಂದು ದರ್ಶನ್​ ವಿರುದ್ಧ ಅರಣ್ಯಾಧಿಕಾರಿಗೆ ದೂರು ಕೊಟ್ಟಿದ್ದೆವು. ದೂರು ನೀಡಿದ್ದಕ್ಕೆ ನಮಗೆ ಬೆದರಿಕೆ ಕರೆಗಳು ಬರುತ್ತಿವೆ. ಅವರ ಅಭಿಮಾನಿಗಳು ನಿನ್ನೆ ನನ್ನ ಕಾರನ್ನು ಹಿಂಬಾಲಿಸಿ ಟಚ್ ಮಾಡಿದ್ದಾರೆ. ದರ್ಶನ್​ ತಪ್ಪು ಮಾಡಿಲ್ಲ ಎಂಬುದಾದರೆ ಅಭಿಮಾನಿಗಳು ಯಾಕೆ ಈ ರೀತಿ ಮಾಡುತ್ತಿದ್ದಾರೆ? ದರ್ಶನ್ ಅಭಿಮಾನಿಗಳ ಸಂಘದವರೇ ಈ ಕೆಲಸ ಮಾಡುತ್ತಿದ್ದಾರೆ. ಬೆದರಿಕೆ ಕರೆ ಹಿಂದೆ ಶೇಕಡಾ 100ರಷ್ಟು ದರ್ಶನ್​ ಅವರ ಕೈವಾಡವಿದೆ’ ಎಂದು ಶಿವಕುಮಾರ್​ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ದರ್ಶನ್ ಬಳಿ ಇತ್ತು 8 ಹುಲಿ ಉಗುರಿನ ಮಾದರಿಯ ಪೆಂಡೆಂಟ್? ಇದ್ಯಾವುದೂ ಅಸಲಿ ಅಲ್ಲ?

‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುತ್ತಿದ್ದ ವರ್ತೂರು ಸಂತೋಷ್​ ಅವರು ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾದರು. ಅದರ ಬೆನ್ನಲ್ಲೇ ಅನೇಕ ಸೆಲೆಬ್ರಿಟಿಗಳು ಹುಲಿ ಉಗುರು ಧರಿಸಿದ್ದ ಫೋಟೋ ಮತ್ತು ವಿಡಿಯೋ ವೈರಲ್​ ಆಯಿತು. ದರ್ಶನ್​ ಅವರು ಹುಲಿ ಉಗುರಿನ ಪೆಂಡೆಂಟ್​ ಧರಿಸಿದ್ದಾರೆ ಮತ್ತು ವಿನಯ್​ ಗುರೂಜಿ ಅವರು ಹುಲಿ ಚರ್ಮದ ಮೇಲೆ ಕುಳಿತಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಿವಕುಮಾರ್​ ದೂರು ನೀಡಿದ್ದರು.

ಇದನ್ನೂ ಓದಿ: ಜಗ್ಗೇಶ್ ಮತ್ತು ದರ್ಶನ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಲಿಲ್ಲ

ದರ್ಶನ್​ ಅಭಿಮಾನಿಗಳಿಂದ ಕೊಲೆ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಶಿವಕುಮಾರ್​ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್​ ಬಿ. ದಯಾನಂದ್​ಗೆ ಶಿವಕುಮಾರ್ ದೂರು ನೀಡಿದ್ದಾರೆ. ಆಡಿಯೋ ಮತ್ತು ವಿಡಿಯೋ ಕಾಲ್​ ಮೂಲಕ ತಮಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಸದ್ಯಕ್ಕಂತೂ ರಾಜ್ಯದಲ್ಲಿ ಹುಲಿ ಉಗುರಿನ ವಿಷಯ ಹೆಚ್ಚು ಚರ್ಚೆ ಆಗುತ್ತಿದೆ. ವರ್ತೂರು ಸಂತೋಷ್​ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದ್ದು, ಜಾಮೀನಿಗಾಗಿ ಅವರು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: Darshan: ಹುಲಿ ಉಗುರು ಧರಿಸಿದ ಆರೋಪ; ನಟ ದರ್ಶನ್​ ಮನೆಯಲ್ಲಿ ಅಧಿಕಾರಿಗಳ ಪರಿಶೀಲನೆ

ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​, ನಟ ಜಗ್ಗೇಶ್​, ನಟ/ರಾಜಕಾರಣಿ ನಿಖಿಲ್​ ಕುಮಾರ್​ ಸೇರಿದಂತೆ ಅನೇಕರು ಹುಲಿ ಉಗುರಿನ ಲಾಕೆಟ್​ ಧರಿಸಿದ ಆರೋಪ ಎದುರಿಸುತ್ತಿದ್ದಾರೆ. ಹಲವರ ಮನೆಯಲ್ಲಿ ಈಗಾಗಲೇ ಪರಿಶೀಲನೆ ಮಾಡಲಾಗಿದೆ. ಅರಣ್ಯಾಧಿಕಾರಿಗಳ ಕ್ರಮವನ್ನು ಪ್ರಶ್ನಿಸಿ ಜಗ್ಗೇಶ್​ ಅವರು ಹೈಕೋರ್ಟ್​ ಮೆಟ್ಟಿಲು ಏರಿದ್ದಾರೆ. ದಿನದಿಂದ ದಿನಕ್ಕೆ ಈ ಪ್ರಕರಣ ಬೇರೆ ಬೇರೆ ಸ್ವರೂಪ ಪಡೆದುಕೊಳ್ಳುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us